
ಶಹಾಪುರ: ‘ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರ ಪೂರ್ವಾನುಮತಿ ಪಡೆಯದೆ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರನ್ನು ಕರೆದುಕೊಂಡು ಹೋಗಿ ಬಂದ ಸಹಾಯಕ ಪ್ರಾಧ್ಯಾಪಕ ಮೊಹ್ಮದ ಆರೀಫ್ ಇನಾಂದಾರ ಹಾಗೂ ಸಿಬ್ಬಂದಿ ದೇವಿಂದ್ರಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು’ ಎಂದು ಆಗ್ರಹಿಸಿ ಸೋಮವಾರ ದಲಿತ ಸಂಘರ್ಷ ಸಮಿತಿ ಮುಖಂಡರು ಕಾಲೇಜಿನ ಪ್ರಾಚಾರ್ಯರಿಗೆ ಮನವಿ ಸಲ್ಲಿಸಿದರು.
‘ಕಳೆದ ನ.28ರಿಂದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಖಾಸಗಿ ವಾಹನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲದೆ ವಿದ್ಯಾರ್ಥಿನಿಯರು ಪ್ರವಾಸದಲ್ಲಿ ಇರುವಾಗ ಸುರಕ್ಷತೆಯ ದೃಷ್ಟಿಯಿಂದ ಮಹಿಳಾ ಸಿಬ್ಬಂದಿಯನ್ನು ಸಹ ಕರೆದುಕೊಂಡು ಹೋಗಿಲ್ಲ. ವಿದ್ಯಾರ್ಥಿಗೆ ತೊಂದರೆಯಾದರೆ ಯಾರು ಹೊಣೆ’ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಯೋಜಕ ರಾಯಪ್ಪ ಸಾಲಿಮನಿ ಪ್ರಶ್ನಿಸಿದ್ದಾರೆ.
‘ಇದರ ಬಗ್ಗೆ ಸಮಗ್ರವಾದ ತನಿಖೆ ನಡೆಯಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಸಂಘಟನೆಯ ಮುಖಂಡರು ಆಗ್ರಹಿಸಿದ್ದಾರೆ.
ಸಂಘಟನೆಯ ಮುಖಂಡರಾದ ಪರಶುರಾಮ ರೋಜಾ, ಲಕ್ಷ್ಮಣ ಹಳಿಸಗರ, ವಿಶ್ವನಾಥ ಬಿರನೂರ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.