
ಶಹಾಪುರ: ‘ಶಿಕ್ಷಣ ಮಹಿಳೆಯರ ಬದುಕಿನ ದಿಕ್ಸೂಚಿ. ಯಾವುದೆ ಸಮಸ್ಯೆ ಎದುರಾದರೆ ಧೈರ್ಯವಾಗಿ ಎದುರಿಸಬೇಕು. ಸಿಕ್ಕ ಅವಕಾಶವನ್ನು ಸದ್ಭಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಬೇಕು. ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಸರ್ಕಾರದ ಸೌಲಭ್ಯ ಸಿಗದಿದ್ದರೆ ಪ್ರಶ್ನಿಸುವ ಮೂಲಕ ಪಡೆದುಕೊಳ್ಳಬೇಕು’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಹೇಳಿದರು.
ಇಲ್ಲಿನ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ‘ಹೆಣ್ಣುಮಕ್ಕಳು ಹೊರಗಿನ ಪ್ರಪಂಚದ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಬೇಕು. ಮಹಿಳೆಯರ ತಮ್ಮ ಹಕ್ಕುಗಳು ರಕ್ಷಣೆಗೆ ಸಾಕಷ್ಟು ಕಾನೂನು ಬಂದಿವೆ. ಕೊನೆ ಪಕ್ಷ ಅಗತ್ಯವಾದಷ್ಟು ಕಾನೂನು ಜ್ಞಾನ ಸಂಪಾದಿಸಿಕೊಂಡು ಶೋಷಣೆಯಿಂದ ಮುಕ್ತಿ ಹೊಂದಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರ ವಹಿಸಬೇಕು’ ಎಂದು ಸಲಹೆ ನೀಡಿದರು.
ಇದೇ ವೇಳೆ ಮಹಿಳೆಯೊಬ್ಬರು ಪಡಿತರ ಕಾರ್ಡ್ ಇಲ್ಲದ ಕಾರಣ ಸರ್ಕಾರಿ ಸೌಲಭ್ಯ ಸಿಗುತ್ತಿಲ್ಲ ಎಂದು ಅವಲತ್ತುಕೊಂಡರು. ಆಗ ಸ್ಥಳದಲ್ಲಿಯೇ ತಹಶೀಲ್ದಾರ್ ಸಿದ್ದಾರೂಢ ಬನ್ನಿಕೊಪ್ಪ ಅವರಿಗೆ ಕರೆ ಮಾಡಿ ಸಮಸ್ಯೆ ಬಗೆಹರಿಸಲು ಸೂಚಿಸಿದರು.
ಸಿಡಿಪಿಒ ಮಲ್ಲಣ್ಣ ದೇಸಾಯಿ, ವಸತಿ ನಿಲಯದ ಮೇಲ್ವಿಚಾರಕಿ ಸುಮಂಗಲಾ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.