ಯಾದಗಿರಿ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಆಶಾ ಕಾರ್ಯಕರ್ತೆಯರು ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಮತ್ತು ಸಮುದಾಯಕ್ಕೆ ಸಂಪರ್ಕ ಸೇತುವೆಯಾಗಿ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದು, ಆಶಾಗಳ ವಿವಿಧ ಬೇಡಿಕೆ ಈಡೇರಿಸುವಂತೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪ್ರಮುಖರು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈಗ ಕಳೆದ 14 ತಿಂಗಳಿಂದ ಕೇಂದ್ರದ ಪ್ರೋತ್ಸಾಹಧನ ಎಂಸಿಟಿಎಸ್ನಲ್ಲಿ ದಾಖಲಾಗಿರುವುದು ಬಾಕಿ ಇದ್ದು, ತಿಂಗಳಲ್ಲಿ ಮಾಡುವ ಎಲ್ಲ ಕೆಲಸಗಳಿಗೆ ಒಂದೇ ಬಾರಿ ಗೌರವಧನ ನೀಡುವುದಿಲ್ಲ. 3-4 ಕಂತುಗಳಲ್ಲಿ ಹಣ ನೀಡಲಾಗುತ್ತಿದೆ. ಇದನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಕಳೆದ 14 ತಿಂಗಳಿಂದ ಬಾಕಿ ಇರುವ ಪ್ರೋತ್ಸಾಹಧನ ಒಂದೇ ಬಾರಿಗೆ ನೀಡಲು ಕ್ರಮಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.
ನವೆಂಬರ್ ತಿಂಗಳಿಂದ ರಾಜ್ಯ ಮತ್ತು ಕೇಂದ್ರದ ನಾನ್ ಎಂಟಿಸಿಎಸ್ ಸೇರಿ ಪ್ರತಿ ತಿಂಗಳು ₹ 6 ಸಾವಿರ ಗೌರವಧನ ನೀಡುವುದು, ಆಶಾ ಕ್ಷೇಮಾಭಿವೃದ್ಧಿನಿಧಿ ಸ್ಥಾಪಿಸಿ-ಆಶಾಗಳ ಮಾರಣಾಂತಿಕ ಕಾಯಿಲೆ ಚಿಕಿತ್ಸೆಗೆ ಆಶಾ ಕುಟುಂಬಕ್ಕೆ ಪರಿಹಾರ ಒದಗಿಸುವುದು, ಕಾರ್ಯಕರ್ತೆಯರಿಗೆ ದ್ವಿಚಕ್ರ ವಾಹನ ಖರೀದಿಸಲು ಸಹಾಯಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸುವುದಾಗಿ ಭರವಸೆ ನೀಡಿದರು.
ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಡಿ.ಉಮಾದೇವಿ, ಸಂಘದ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ, ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ, ರಾಜ್ಯ ನಾಯಕಿ ರಮಾ ಟಿ.ಸಿ., ಹನುಮೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.