ಸುರಪುರ: ‘ಸಾಲ ಸೌಲಭ್ಯ ಒದಗಿಸಬೇಕು’ ಎಂದು ಆಗ್ರಹಿಸಿ ಶೋಷಿತರ ಪರ ಹೋರಾಟ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ‘ಸರ್ಕಾರದ ಯೋಜನೆಯಂತೆ ಬೀದಿ ಬದಿ ವ್ಯಾಪಾರಿಗಳಿಗೆ ಶೂನ್ಯ ಬಡ್ಡಿ ದರದಲ್ಲಿ ₹50 ಸಾವಿರ ಸಾಲ ಕೊಡುವ ಅವಕಾಶವಿದೆ. ಆದರೆ ಇದುವರೆಗೆ ಒಬ್ಬರಿಗೂ ಸಾಲ ನೀಡಿಲ್ಲ’ ಎಂದು ದೂರಿದರು.
‘ಯೋಜನೆಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಅಧಿಕಾರಿಗಳು ಬಡ ವ್ಯಾಪಾರಿಗಳ ಸಹಾಯಕ್ಕೆ ಬರುತ್ತಿಲ್ಲ. ಬ್ಯಾಂಕ್ನವರು ಕೂಡ ಇತರ ಯೋಜನೆಗಳಲ್ಲಿ ಸಾಲ ನೀಡುತ್ತಿಲ್ಲ’ ಎಂದು ಅಕ್ರೋಶ ವ್ಯಕ್ತಪಡಿಸಿದರು.
‘ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಮಾಡಬೇಕು. ಸಣ್ಣ ವ್ಯಾಪಾರಿಗಳಿಗೆ ಬ್ಯಾಂಕ್ ಸಾಲ ನೀಡುವಂತೆ ನಗರಸಭೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಸಭೆ ನಡೆಸಬೇಕು’ ಎಂದು ಆಗ್ರಹಿಸಿದರು.
ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು. ಗೋಪಾಲ ಬಾಗಲಕೋಟೆ, ಮಾನಯ್ಯ ದೊರೆ, ಹುಸೇನಸಾಬ, ಕಾಸಿಂಸಾಬ ಸುರಪುರ, ದಾವುದಸಾಬ ಮತ್ತು ಬೀದಿ ಬದಿ ವ್ಯಾಪಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.