ADVERTISEMENT

ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ: ಸಿಇಒ

ನಗರದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ, ವಿದ್ಯಾರ್ಥಿನಿಯರಿಂದ ಜಾಥಾ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2019, 14:16 IST
Last Updated 12 ಸೆಪ್ಟೆಂಬರ್ 2019, 14:16 IST
ಯಾದಗಿರಿಯ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಪ್ರಯುಕ್ತ ನಡೆದ ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ ಚಾಲನೆ ನೀಡಿದರು
ಯಾದಗಿರಿಯ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಪ್ರಯುಕ್ತ ನಡೆದ ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ ಚಾಲನೆ ನೀಡಿದರು   

ಯಾದಗಿರಿ: ‘ಆತ್ಮಹತ್ಯೆಯು ಸಾಮಾಜಿಕ ವ್ಯವಸ್ಥೆಗೆ ಅಂಟಿದ ಒಂದು ಕಳಂಕವಾಗಿದೆ. ಜೀವನದಲ್ಲಿ ಬರುವ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಸಂಘ ಮಾನಸಿಕ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಪ್ರಯುಕ್ತ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಆತ್ಮಹತ್ಯೆಯಿಂದ ಕುಟುಂಬದಲ್ಲಿ ಮತ್ತಷ್ಟು ಸಮಸ್ಯೆಗಳು ಉದ್ಭವಿಸುತ್ತವೆ. ಸಮಸ್ಯೆಗಳು ಇಲ್ಲವೇ ಕಾರ್ಯಭಾರದ ಒತ್ತಡವೇ ಆತ್ಮಹತ್ಯೆಗೆ ಮುಖ್ಯ ಕಾರಣ. ಸಂದಿಗ್ಧ ಪರಿಸ್ಥಿತಿಯಲ್ಲಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಒಳಗಾಗುತ್ತಾರೆ. ಜೀವನ ಮೌಲ್ಯಯುತವಾಗಿದ್ದು, ಅದನ್ನು ಹಾಳು ಮಾಡಿಕೊಳ್ಳದೆ ಸಮಸ್ಯೆಗಳನ್ನು ಎದುರಿಸಬೇಕು’ ಎಂದರು.

ADVERTISEMENT

ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಡಾ.ಭಗವಂತ ಅನವಾರ ಮಾತನಾಡಿ, ‘ಪ್ರಪಂಚದಲ್ಲಿ ಪ್ರತಿವರ್ಷ 8 ಲಕ್ಷ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಖಿನ್ನತೆ, ಕುಟುಂಬ ಕಲಹ, ವಿವಾಹ ವಿಚ್ಛೇದನ, ವೈವಾಹಿಕ ಸಮಸ್ಯೆ, ಪರೀಕ್ಷೆಯಲ್ಲಿ ಅನುತ್ತೀರ್ಣ, ಮಾನಸಿಕ ಕಾಯಿಲೆ, ನಿರುದ್ಯೋಗ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ’ ಎಂದರು.

‘ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಯು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವ ಮೂಲಕ ಕ್ರೀಡೆ, ಯೋಗ, ಧ್ಯಾನ, ಮನರಂಜನೆ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಜೀವನದಲ್ಲಿ ಪ್ರತಿಯೊಬ್ಬರೂ ಸಕಾರಾತ್ಮಕ ಭಾವನೆ ಹೊಂದಬೇಕು’ ಎಂದು ತಿಳಿಸಿದರು.

ಮಾನಸಿಕ ಕಾಯಿಲೆ ಉಳ್ಳವರು ಉಚಿತ ಸಹಾಯವಾಣಿ 104, ದೂ.080 65000111 ಹಾಗೂ 080 65000222 ಸಂಪರ್ಕಿಸಬಹುದು ಎಂದರು.

ಪ್ರಾಂಶುಪಾಲ ಡಾ.ಶ್ರೀನಿವಾಸರಾವ್ ದೊಡ್ಡಮನಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾರಾಯಣಪ್ಪ, ತಾಲ್ಲೂಕು ವೈದ್ಯಾಧಿಕಾರಿ ಡಾ.ಹಣಮಂತರೆಡ್ಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ, ಮನೋವೈದ್ಯ ಜಯಕುಮಾರ,ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ವಿವೇಕನಂದ ಟೆಂಗೆ, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ನಂದಣ ಪಾಟೀಲ, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳು ಇದ್ದರು.

ಕಾರ್ಯಕ್ರಮಕ್ಕೂ ಮೊದಲು ನಗರದ ಹಳೆ ಪ್ರವಾಸಿ ಮಂದಿರದಿಂದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುವರೆಗೆ ಆಯೋಜಿಸಿದ್ದು, ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಚಾಲನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.