
ಸುರಪುರ: ‘ಯಾವುದೇ ಪ್ರದೇಶ ಅಭಿವೃದ್ಧಿಯಾಗಬೇಕಾದರೆ ಅಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ ಪ್ರಬಲವಾಗಿರಬೇಕು’ ಎಂದು ಶಾಸಕ ರಾಜಾ ವೇಣುಗೋಪಾಲನಾಯಕ ಹೇಳಿದರು.
ನಗರದಲ್ಲಿ ಆದಿನಾರಾಯಣೇ ಮಹಾಲಕ್ಷ್ಮೀ ಮಾತೆ ಶಿಕ್ಷಣ ಪ್ರತಿಷ್ಠಾನ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿರುವ ಸುರಪುರ ಪ್ಯಾರಾ ಮೆಡಿಕಲ್ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
‘ಈ ನಿಟ್ಟಿನಲ್ಲಿ ನಾನು ಈ ಎರಡು ಕ್ಷೇತ್ರಗಳ ಉನ್ನತಿಗೆ ಶ್ರಮಿಸುತ್ತೇನೆ. ಈ ಪ್ಯಾರಾ ಮೆಡಿಕಲ್ ಕಾಲೇಜು ಕಳೆದ ಕೆಲವು ವರ್ಷಗಳ ಹಿಂದೆ ಸ್ಥಾಪಿತವಾಗಿ ಕಡಿಮೆ ಫೀ ನಲ್ಲಿ ಉತ್ತಮ ಶಿಕ್ಷಣ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಈ ಕಾರ್ಯ ಶ್ಲಾಘನೀಯ’ ಎಂದರು.
‘ಈ ಸಂಸ್ಥೆಯಲ್ಲಿ ಅಭ್ಯಸಿಸಿದ ಕೆಲವು ವಿದ್ಯಾರ್ಥಿಗಳಿಗೆ ಸರ್ಕಾರಿ ನೌಕರಿ ದೊರಕಿರುವುದು ಸಂತಸ. ಹಲವಾರು ವಿದ್ಯಾರ್ಥಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ನೌಕರಿ ಸಿಕ್ಕಿದೆ. ಪ್ಯಾರಾ ಮೆಡಿಕಲ್ ಕೋರ್ಸ್ ಅಭ್ಯಸಿಸಿದ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ಇದೆ’ ಎಂದರು.
ಕೂಡ್ಲಿಗಿಯ ಗಜಾನನ ಬಾಬಾ ಮಹಾರಾಜ ಸಾನ್ನಿಧ್ಯ ವಹಿಸಿದ್ದರು. ಉದ್ಯಮಿ ಗ್ಯಾನ್ಚಂದ ಜೈನ್, ಕಾಂಗ್ರೆಸ್ ಮುಖಂಡ ರಾಜಾ ವಾಸುದೇವನಾಯಕ, ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ರಾಜಾ ಕುಮಾರನಾಯಕ, ನಿವೃತ್ತ ವೈದ್ಯಾಧಿಕಾರಿ ವಿ.ಎಲ್. ಚೌಧರಿ ವೇದಿಕೆಯಲ್ಲಿದ್ದರು.
ಸಂಸ್ಥೆಯ ಅಧ್ಯಕ್ಷ ಕೃಷ್ಣ ದರಬಾರಿ ಅಧ್ಯಕ್ಷತೆ ವಹಿಸಿದ್ದರು. ಶಿವಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಕೆ. ಬಾಬು ನಿರೂಪಿಸಿದರು. ರಜಾಕ ಭಾಗವಾನ ವಂದಿಸಿದರು.
ಕಾಲೇಜಿನ ಪ್ರಾಚಾರ್ಯ ಅಯ್ಯಪ್ಪ, ವೆಂಕಟೇಶ ದರಬಾರಿ, ಜಿತೇಂದ್ರನಾಯಕ, ತಿರುಪತಿ ಶೆಟ್ಟಿ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.