ಯಾದಗಿರಿ: ಜಿಲ್ಲೆಯಲ್ಲಿ ಜೂನ್ 25ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಸಮಯದಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಹೈಕೋರ್ಟ್ ಹೊರಡಿಸಿರುವ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್ಓಪಿ) ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಪೂರ್ವ ಸಿದ್ಧತೆ ಸಭೆಯಲ್ಲಿ ಅವರು ಮಾತನಾಡಿದರು.
2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಮಾರ್ಚ್ 27ರಿಂದ ಏಪ್ರಿಲ್ 9ರವರೆಗೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ದೇಶಾದ್ಯಂತ ಲಾಕ್ಡೌನ್ ಜಾರಿಯಿದ್ದ ಕಾರಣ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಹೀಗಾಗಿ ಈಗ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ತಿಳಿಸಿದರು.
ಮಕ್ಕಳಿಗೆ ಸಾರಿಗೆ ಸೌಲಭ್ಯ, ಪರೀಕ್ಷೆಯ ಸಂಪೂರ್ಣ ಪ್ರಕ್ರಿಯೆಯಲ್ಲಿ ಅಂತರ ಕಾಯ್ದುಕೊಳ್ಳುವುದು, ಆರೋಗ್ಯ ತಪಾಸಣಾ ಕೌಂಟರ್, ಪರೀಕ್ಷಾ ಕೇಂದ್ರದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎಸ್ಓಪಿ, ಹಾಸ್ಟೆಲ್ಗಳ/ ವಲಸೆ ಕುಟುಂಬದ ಮಕ್ಕಳಿಗಾಗಿ ಮಾಡಲಾಗಿರುವ ಅವಕಾಶಗಳು, ಹೊರ ರಾಜ್ಯ ಅಥವಾ ಗಡಿರಾಜ್ಯದ ಹೊರಗಿನಿಂದ ವಲಸೆ ಬಂದ ಮಕ್ಕಳು, ಕಂಟೇನ್ಮೆಂಟ್ ವಲಯಗಳಲ್ಲಿನ ಮಕ್ಕಳಿಗಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಎಸ್ಓಪಿಯಲ್ಲಿ ವಿವರಿಸಲಾಗಿದೆ. ಈ ಅಂಶಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮತ್ತು ಪರೀಕ್ಷಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ಜಿಲ್ಲೆಯ ಎಲ್ಲಾ 59 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು. ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರಗಳ ಶೌಚಾಲಯ ಸುಸ್ಥಿತಿಯಲ್ಲಿಡುವಂತೆ ಸೂಚಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ ರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ 17,396 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 8 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಕೇಂದ್ರಗಳೆಂದು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.
ಡಿವೈಎಸ್ಪಿ ಯು.ಶರಣಪ್ಪ, ಜಿಲ್ಲಾ ಖಜಾನೆ ಅಧಿಕಾರಿ ಮಾಳಿಂಗರಾಯ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀಹರಿಬಾಬು, ಎಸ್ಸೆಸ್ಸೆಲ್ಸಿ ಜಿಲ್ಲಾ ನೋಡಲ್ ಡಾ.ಮಲ್ಲಪ್ಪ ಯರಗೋಳ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.