ಸುರಪುರ: ‘ನಗರದ ಉಪ ಕಾರಾಗೃಹ ಕೇಂದ್ರದ 3 ಜನ ವಿಚಾರಣಾಧೀನ ಕೈದಿಗಳಲ್ಲಿ ಶುಕ್ರವಾರ ಕೋವಿಡ್ ದೃಢಪಟ್ಟಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜಾ ವೆಂಕಪ್ಪನಾಯಕ ತಿಳಿಸಿದ್ದಾರೆ.
‘ಕೋವಿಡ್ ಎರಡನೇ ಅಲೆಯಲ್ಲಿ ಹುಣಸಗಿ ಮತ್ತು ಸುರಪುರ ತಾಲ್ಲೂಕಿನಲ್ಲಿ ಇದುವರೆಗೂ 75 ಪ್ರಕರಣ ಕಾಣಿಸಿಕೊಂಡಿವೆ. 19 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದ 52 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊರಗಿನಿಂದ ಬರುವವರ ಮೇಲೆ ಹೆಚ್ಚಿನ ನಿಗಾ ಇರಿಸಲಾಗಿದೆ’ ಎಂದು ತಿಳಿಸಿದರು.
‘ಸೋಂಕಿತರ ಐಸೋಲೇಷನ್ಗೆ ತಾಲ್ಲೂಕು ಆಸ್ಪತ್ರೆಯಲ್ಲಿ 50 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ, ಆರೋಗ್ಯ ಉಪ ಕೇಂದ್ರ, ಅಂಗನವಾಡಿಗಳಲ್ಲಿ ಮಾರ್ಗಸೂಚಿಯಂತೆ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು, ಇದುವರೆಗೂ 35 ಸಾವಿರ ಜನರಿಗೆ ಲಸಿಕೆ ಹಾಕಲಾಗಿದೆ. ಎರಡನೇ ಲಸಿಕೆ ಪಡೆದುಕೊಳ್ಳುವವರು ಆದಷ್ಟು ಬೇಗ ಲಸಿಕೆ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.
‘ಕಾರಾಗೃಹದಲ್ಲಿ 46 ಜನ ವಿಚಾರಣಾಧೀನ ಕೈದಿಗಳಿದ್ದಾರೆ. ಈ ಪೈಕಿ ಸೋಂಕಿತ 3 ಜನ ಕೈದಿಗಳನ್ನು ಪ್ರತ್ಯೇಕವಾಗಿ ಬೇರೆ ಸೆಲ್ನಲ್ಲಿ ಇಡಲಾಗಿದೆ. ಅವರ ಆರೋಗ್ಯದ ಮೇಲೆ ಹೆಚ್ಚಿನ ನಿಗಾವಹಿಸಲಾಗುತ್ತಿದೆ. ಅಗತ್ಯಬಿದ್ದಲ್ಲಿ ಕಾರಾಗೃಹದ ಮೇಲಧಿಕಾರಿಗಳ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಉಪ ಕಾರಾಗೃಹ ಅಧೀಕ್ಷಕ ಅರುಣಕುಮಾರ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.