ADVERTISEMENT

ಹುಣಸಗಿ: ಜುಲೈ 21 ರಿಂದ ಮುಖ್ಯ ಕಾಲುವೆಗೆ ನೀರು

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 16:32 IST
Last Updated 13 ಜುಲೈ 2020, 16:32 IST
ಸುರಪುರ ಶಾಸಕ ರಾಜೂಗೌಡ ಅವರು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ವಿಜಯಪುರದಲ್ಲಿ ಭೇಟಿ ಮಾಡಿ ಮನವಿ ಮಾಡಿದರು
ಸುರಪುರ ಶಾಸಕ ರಾಜೂಗೌಡ ಅವರು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ವಿಜಯಪುರದಲ್ಲಿ ಭೇಟಿ ಮಾಡಿ ಮನವಿ ಮಾಡಿದರು   

ಹುಣಸಗಿ: ‘ಕೃಷ್ಣಾ ಅಚ್ಚುಕಟ್ಟು ಪ್ರದೇಶದ ನಾರಾಯಣಪುರ ಎಡದಂಡೆ ಮತ್ತು ಬಲದಂಡೆ ಮುಖ್ಯ ಕಾಲುವೆಗಳಿಗೆ ಇದೇ 21 ರಿಂದ ನೀರು ಹರಿಸಲು ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚಿಸಿದ್ದಾರೆ’ ಎಂದು ಶಾಸಕ ರಾಜೂಗೌಡ ತಿಳಿಸಿದರು.

ಈ ಕುರಿತು ಪ್ರಜಾವಾಣಿಯೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ರೈತರ ಹಿತದೃಷ್ಟಿಯಿಂದ ಕಾರಜೋಳ ಈ ನಿರ್ಧಾರಕ್ಕೆ ಬಂದಿದ್ದಾಗಿ ತಿಳಿಸಿದರು.

‘ನಾಲ್ಕು ದಿನಗಳ ಹಿಂದೆ ಈ ಕುರಿತು ಸಚಿವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಈ ಭಾಗಕ್ಕೆ ನೀರು ಒದಗಿಸುವ ನಿಟ್ಟಿನಲ್ಲಿ ಚರ್ಚಿಸಿದ್ದೆ. ಸೋಮವಾರ ವಿಜಯಪುರದಲ್ಲಿ ಕಾರಜೋಳ ಅವರನ್ನು ಭೇಟಿ ಮಾಡಿ ಮನವಿ ಮಾಡಿದಾಗ ತಕ್ಷಣವೇ ಸ್ಪಂದಿಸಿದ ಸಚಿವರು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿಈ ನಿರ್ಣಯ ಕೈಗೊಂಡರು’ ಎಂದು ತಿಳಿಸಿದರು.

‘ನಾರಾಯಣಪುರ ಮತ್ತು ಆಲಮಟ್ಟಿ ಜಲಾಶಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಇದೆ. ಹೀಗಾಗಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಇರುವವರೆಗೂ ಸತತವಾಗಿ ಚಾಲೂ–ಬಂದಿ ಕ್ರಮ ಕೈಗೊಳ್ಳಬೇಡಿ.ಮುಂಗಾರು ಹಂಗಾಮಿಗೆ ಅಗತ್ಯವೆನಿಸಿದಲ್ಲಿ ಮಾತ್ರ ಸಭೆ ನಡೆಸಿ ಮುಂದಿನ ತೀರ್ಮಾನ ಪ್ರಕಟಿಸುವುದಾಗಿ ಡಿಸಿಎಂ ತಿಳಿಸಿದ್ದಾರೆ’ ಎಂದರು.

ADVERTISEMENT

ಈಗಾಗಲೇ ಸೋಮವಾರದವರೆಗೂ ಆಲಮಟ್ಟಿ ಜಲಾಶಯದಲ್ಲಿ 92 ಟಿಎಂಸಿ ಅಡಿ ಹಾಗೂ ನಾರಾಯಣಪುರ ಬಸವಸಾಗರ ಜಲಾಶಯದಲ್ಲಿ ಒಟ್ಟು 30 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಬಸವಸಾಗರಕ್ಕೆ 45 ಸಾವಿರ ಒಳಹರಿವು ಇದ್ದು, 7 ಗೇಟ್‌ಗಳ ಮುಖಾಂತರ 45920 ಕ್ಯುಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.