ADVERTISEMENT

ಪ್ರತಿಯೊಂದು ರಂಗದಲ್ಲಿ ಮಹಿಳೆಯರ ಛಾಪು

ಫಲಪುಷ್ಪ ಪ್ರದರ್ಶನ ಮತ್ತು ಸಾವಯವ ಸಿರಿಧಾನ್ಯ ಮೇಳ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2021, 4:19 IST
Last Updated 9 ಮಾರ್ಚ್ 2021, 4:19 IST
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು   

ಯಾದಗಿರಿ: ‘ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಕೊಡುಗೆ ಅಪಾರ. ಸ್ತ್ರೀಯರುಪ್ರತಿಯೊಂದು ರಂಗದಲ್ಲೂ ಬೆಳವಣಿಗೆ ಹೊಂದಿ ಸಮಾಜದ ಕೈಗನ್ನಡಿಯಾಗಬೇಕು’ ಎಂದುಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಹೇಳಿದರು.

ನಗರದ ಬಾಲಾಜಿ ಕಲ್ಯಾಣ ಮಂಟದಲ್ಲಿ ತೋಟಗಾರಿಕೆ, ಕೃಷಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಫಲ ಪುಷ್ಪ ಪ್ರದರ್ಶನ ಮತ್ತು ಸಾವಯವ ಸಿರಿಧಾನ್ಯ ಮೇಳ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮತನಾಡಿದರು.

‘ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗಿಲ್ಲ. ಎಲ್ಲಾ ಕ್ಷೇತ್ರಗಳಲ್ಲೂ ಛಾಪು ಮೂಡಿಸುತ್ತಿದ್ದಾರೆ. ಪುರುಷರಿಗೆ ಸರಿ ಸಮಾನಾಗಿ ಹೆಜ್ಜೆ ಹಾಕುತ್ತಿರುವ ಮಹಿಳೆಯರು, ಕುಟುಂಬ ನಿರ್ವಹಣೆಯಲ್ಲಿ ಅತ್ಯಂತ ಮಹತ್ವದ ಜವಾಬ್ದಾರಿ ಹೊರುತ್ತಿದ್ದಾರೆ’ ಎಂದರು.

ADVERTISEMENT

‘ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸುವುದನ್ನು ರೂಢಿಸಿಕೊಂಡು ಕುಟುಂಬಗಳ ನಿರ್ವಹಣೆ ಸಮರ್ಥವಾಗಿ ಮಾಡುವವರಾಗಬೇಕು’ ಎಂದು ಮಹಿಳೆಯರಿಗೆ ಕಿವಿಮಾತು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ‘ಒನಕೆ ಓಬವ್ವ, ಕಿತ್ತೂರು ರಾಣಿ ಚನ್ನಮ್ಮ ಅವರಂಥ ವೀರ ಮಹಿಳೆಯರ ಆದರ್ಶವನ್ನು ಮಹಿಳೆಯರು ಮೈಗೂಡಿಸಿಕೊಳ್ಳಬೇಕು. ಮಹಿಳೆಯರು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸ್ವಾವಲಂಬಿಗಳಾದಾಗ ಮಾತ್ರ ಸಮಗ್ರ ಸಮಾಜದ ಅಭಿವೃದ್ಧಿ ಸಾಧ್ಯ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಎಸ್ ಪಾಟೀಲ ಯಡಿಯಾಪುರ ಮಾತನಾಡಿ, ‘ಕೊರೊನಾ ಸಮಯದಲ್ಲಿ ಜಿಲ್ಲೆಯ ವೈದ್ಯರು, ನರ್ಸ್‌ ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಜಿಲ್ಲೆಯ ಜನರು ಮರೆಯುವಂತಿಲ್ಲ’ ಎಂದು ಹೇಳಿದರು.

ಇದೇ ವೇಳೆ ನಗರದ ಕನಕದಾಸ ವೃತ್ತದಿಂದ ಬಾಲಾಜಿ ಕಲ್ಯಾಣ ಮಂಟಪದವರೆಗೆ ಫಲ-ಪುಷ್ಪ ಪ್ರದರ್ಶನ ಮತ್ತು ಸಾವಯವ ಸಿರಿಧಾನ್ಯ ಮೇಳ ಜಾಥ ನಡೆಸಲಾಯಿತು.

ಸಾಧಕರಿಗೆ ಸನ್ಮಾನ: ರಾಧಾ ಮುಣ್ಣೂರ, ಮುತ್ತವ್ವ, ಗುರುದೇವಿ ಹಿರೇಮಠ, ಅನಿತಾ, ರೇಣುಕಾ, ದೀಲಿಪ್ ಕುಮಾರ, ವಿವೇಕಾನಂದ ವಿಜಯಕುಮಾರ, ಪ್ರೇರಣ ಶಿವಾನಂದ ಬಸವೇಶ್ವರ, ಪ್ರದೀಪ್ ರವಿಕುಮಾರ, ಅಮರನಾಥ ದುರ್ಗಾಪ್ಪ, ಮನೀಷ್ ಅಶೋಕ, ಸುವರ್ಣ ಜುಮ್ಮಣ್ಣ, ಪಲ್ಲವಿ ಶಿವಲಿಂಗಪ್ಪ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಗಿರಿಜಮ್ಮ ರೋಟ್ನಡಗಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗಪ್ಪ ಪುಟಗಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಅಮರದೀಪ್ ಎಂ, ಜಿಲ್ಲಾ ಪಂಚಾಯಿತಿ ಸದಸ್ಯೆ ಅನಿತಾಬಾಯಿ ರಾಠೋಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ ಕವಿತಾಳ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ದತ್ತಾತ್ರೇಯ ಪಾಟೀಲ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ವೇತಾ ತಾಳೆಮರದ ಇದ್ದರು.

–––

ಮಹಿಳೆಯರುವೃತ್ತಿ- ಕೌಶಲಗಳನ್ನು ರೂಢಿಸಿಕೊಳ್ಳಬೇಕು. ಆಗ ಯಾವುದೇ ಉದ್ಯಮ ಆರಂಭಿಸಿದರೂ ಯಶಸ್ಸು ಸಾಧಿಸಲು ಸಾಧ್ಯ

ಡಾ.ರಾಗಪ್ರಿಯಾ ಆರ್, ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.