ADVERTISEMENT

ಯಾದಗಿರಿ: ಆಶಾ ಕಾರ್ಯಕರ್ತೆಯರ ಆಕ್ರೋಶ

ಆರೋಗ್ಯ ಸೇವೆ ಸ್ಥಗಿತಗೊಳಿಸಿ ಹೋರಾಟ ಆರಂಭಿಸಿದ ಕಾರ್ಯಕರ್ತೆಯರು

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 16:09 IST
Last Updated 10 ಜುಲೈ 2020, 16:09 IST
ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎಸ್‌.ಪಾಟೀಲ ಅವರಿಗೆ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ ಸಂಯೋಜಿತ) ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು
ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎಸ್‌.ಪಾಟೀಲ ಅವರಿಗೆ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ ಸಂಯೋಜಿತ) ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು   

ಯಾದಗಿರಿ: ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹12,000 ಗೌರವಧನ ಖಾತರಿಪಡಿಸಬೇಕು. ಕೋವಿಡ್- 19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷಣಾ ಸಾಮಗ್ರಿ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ (ಎಐಯುಟಿಯುಸಿ ಸಂಯೋಜಿತ) ಸದಸ್ಯರು ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಿದರು.

ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆಮನವಿ ಪತ್ರ ಸಲ್ಲಿಸಿ ಜಿಲ್ಲೆಯ ಆಶಾ ಕಾರ್ಯಕರ್ತೆಯರು ತಮ್ಮ ಸೇವೆ ಸ್ಥಗಿತಗೊಳಿಸಿದರು.

ಈವೇಳೆಮಾತನಾಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಡಿ.ಉಮಾದೇವಿ, ‘ರಾಜ್ಯ ವ್ಯಾಪಿಯಾಗಿ ಜೂನ್ 30 ರಂದು ಮತ್ತು ಕಳೆದ ಒಂದು ವಾರದಿಂದ ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಿ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರರಿಗೆ ಮತ್ತು ರಾಜ್ಯದ ಸಚಿವರಿಗೆ ಮತ್ತು ಶಾಸಕರಿಗೆ ಖುದ್ದಾಗಿ ಆಶಾ ಕಾರ್ಯಕರ್ತೆಯರು ಅವರರವರ ಕ್ಷೇತ್ರಗಳಲ್ಲಿ ಮನವಿ ಸಲ್ಲಿಸಿ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಗಿತ್ತು. ಆದರೂ ನಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸದ ಕಾರಣ ಸೇವೆ ಸ್ಥಗಿತಗೊಳಿಸಿ ಹೋರಾಟ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.

ADVERTISEMENT

ಇತ್ತೀಚಿಗೆ ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜ್ಯ ಉತ್ತಮ ಸಾಧನೆ ಮಾಡಿರುವುದಕ್ಕೆ ಆಶಾ ಕಾರ್ಯಕರ್ತೆಯರ ಕೊಡುಗೆ ಅಪಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಕೊರೊನಾ ತಡೆಯ ಹೋರಾಟದ ಯಶಸ್ಸಿಗೆ ಆಶಾ ಕಾರ್ಯಕರ್ತೆಯರು ಆಧಾರ ಸ್ತಂಭಗಳು. ರಾಜ್ಯದ 42,000 ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಿ, ಅಂತರರಾಜ್ಯ ಪ್ರಯಾಣಿಕರು, ವಲಸೆ ಕಾರ್ಮಿಕರು ಮತ್ತು ಇತರರನ್ನು ಸ್ಕ್ರೀನಿಂಗ್ ಮಾಡಿ, ಸೋಂಕು ಪತ್ತೆ ಹಚ್ಚುವಲ್ಲಿ ಸಕ್ರಿಯವಾಗಿರುವರು ಎಂದು ಕೊಂಡಾಡಿದ್ದಾರೆ. ಆಶಾ ಕಾರ್ಯಕರ್ತೆಯರು ತಮ್ಮ ಜೀವನವನ್ನು ಅಪಾಯಕ್ಕೆ ಒಡ್ಡುವುದರ ಮೂಲಕ ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಇವರಿಗೆ ಸೂಕ್ತ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕುಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಜಿಲ್ಲೆಯ ಶಹಾಪುರ, ಸುರಪುರ, ಗುರುಮಠಕಲ್, ಹುಣಸಗಿ ಮತ್ತು ವಡಗೇರಾ ತಾಲೂಕಿನಲ್ಲಿಯೂ ತಾಲ್ಲೂಕುಅಧಿಕಾರಿಗಳಿಗೆ ಹಾಗೂ ಕೆಂಭಾವಿ ವಿಭಾಗದಲ್ಲಿ ಉಪ ತಹಶೀಲ್ದಾರರ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.

ಈವೇಳೆಮುಖಂಡ ಬಿ.ಎನ್‌.ರಾಮಲಿಂಗಪ್ಪ, ಮಂಗಳ, ಮುನಿಯಮ್ಮ, ಸರಸ್ವತಿ, ಶಾರದಾ, ಲಲಿತಾ, ರೇಣುಕಾ, ಸರೋಜ, ಯಶೋಧಾ, ಗೀತಾ, ಬಸ್ಸಮ್ಮ, ಸುಭದ್ರಾ ಸೇರಿದಂತೆ ಹಲವಾರು ಕಾರ್ಯಕರ್ತೆಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.