
ಯಾದಗಿರಿ: ‘ಜಿಲ್ಲೆಯಲ್ಲಿ ಡಿಸೆಂಬರ್ 21ರಿಂದ ನಾಲ್ಕು ದಿನಗಳ ಕಾಲ ಪಲ್ಸ್ ಪೋಲಿಯೊ ಅಭಿಯಾನ ನಡೆಯಲಿದ್ದು, ಜಿಲ್ಲೆಯಾದ್ಯಂತ ಒಟ್ಟು 1,66,693 ಮಕ್ಕಳಿಗೆ ಲಸಿಕೆ ಹಾಕಬೇಕಾಗಿದೆ’ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಆಯೋಜಿಸುವ ಕುರಿತು ನಡೆಸಿದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಐದು ವರ್ಷದೊಳಗಿನ 1.66 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ಇದಕ್ಕಾಗಿ ಒಟ್ಟು 664 ಬೂತ್ ಮಟ್ಟದ ಲಸಿಕಾ ತಂಡಗಳನ್ನು ರಚಿಸಲಾಗಿದ್ದು, 37 ಟ್ರಾನ್ಸಿಟ್ (ಸಂಚಾರಿ) ತಂಡಗಳನ್ನು ನೇಮಿಸಲಾಗಿದೆ. 1,412 ಲಸಿಕಾ ಸಿಬ್ಬಂದಿ, ಐದು ಸಂಚಾರಿ ತಂಡಗಳು, 261 ಹೈ ರಿಸ್ಕ್ ಪ್ರದೇಶದ ತಂಡಗಳನ್ನು ನೇಮಿಸಲಾಗಿದೆ. 403 ತಂಡಗಳು ಮನೆ ಮನೆಗೆ ಭೇಟಿ ನೀಡಲಿವೆ’ ಎಂದು ಮಾಹಿತಿ ನೀಡಿದರು.
‘ಡಿ.21ರಿಂದ 24ರವರೆಗೆ ನಡೆಯು ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಐದು ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು. ಅದಕ್ಕೆ ಬೇಕಾದ ಅಗತ್ಯ ಸಿದ್ಧತೆಗಳು ಮಾಡಿಕೊಳ್ಳಬೇಕು’ ಎಂದರು.
‘ಡಿ.21ರಂದು ಬೂತ್ ಮಟ್ಟದ ಲಸಿಕಾ ಕಾರ್ಯಕ್ರಮ ನಡೆದರೆ, ಡಿ.22 ಹಾಗೂ 23ರಂದು ಗ್ರಾಮೀಣ ಪ್ರದೇಶದಲ್ಲಿ ಜರುಗಲಿದೆ. ಡಿ.22ರಿಂದ 24 ರವರೆಗೆ ಮನೆ ಮನೆಗೆ ಭೇಟಿ ನೀಡಿ ಪಲ್ಸ್ ಪೋಲಿಯೊ ಲಸಿಕೆ ನೀಡಲಾಗುತ್ತಿದೆ. ಡಿ.21ರಿಂದ 24ರವರೆಗೆ ವಿಶೇಷ ಪ್ರದೇಶಗಳು ಹಾಗೂ ಟ್ರಾನ್ಸಿಟ್ ಸ್ಥಳಗಳಲ್ಲಿ ಪೋಲಿಯೊ ಅಭಿಯಾನ ನಡೆಯಲಿದೆ. ಯಾವುದೇ ಅರ್ಹ ಮಗು ಈ ಲಸಿಕೆಯಿಂದ ವಂಚಿತರಾಗದಂತೆ ನಿಗಾವಹಿಸಬೇಕು’ ಎಂದು ಸೂಚಿಸಿದರು.
‘ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಸಂಬಂಧಿಸಿದ ತಂಡಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಆರ್ಸಿಎಚ್, ಅಧಿಕಾರಿಗಳು, ತಹಸೀಲ್ದಾರ್ರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ, ಪಿಡಿಒಗಳು, ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು.
‘ಯಾವುದೇ ಒಂದು ಮಗು ಪೋಲಿಯೊ ಲಸಿಕೆಯಿಂದ ವಂಚಿತರಾಗದಂತೆ ನಿಗಾವಹಿಸಬೇಕು. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಜನನಿಬೀಡ, ದೂರದ ಪ್ರದೇಶ, ಅಪಾಯಕಾರಿ ಪ್ರದೇಶ, ವಲಸಿಗ ಕಾರ್ಮಿಕರ ಮಕ್ಕಳು, ಜಿಲ್ಲೆಗೆ ಆಗಮಿಸುವ ಕಾರ್ಮಿಕರ ಹಾಗೂ ವಿವಿಧ ಸಮುದಾಯ ವ್ಯಾಪ್ತಿಯಲ್ಲಿನ ಮಕ್ಕಳನ್ನು ಸಹ ಗುರುತಿಸಿ ಲಸಿಕೆ ಹಾಕಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
‘ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದ ಬಗ್ಗೆ ಶಾಲಾ ಮಕ್ಕಳ ಮೂಲಕ ಜಾಗೃತಿ ಜಾಥಾ, ಪಾಲಕರಲ್ಲಿ ಅರಿವು, ಸೂಕ್ತ ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು. ಶಿಕ್ಷಕರ ಮೂಲಕ ಮಕ್ಕಳಿಗೆ ಲಸಿಕೆ ಹಾಕಿಸಲು, ಅವಶ್ಯಕ ಕ್ರಮ ಕೈಗೊಳ್ಳಬೇಕು. ಲಸಿಕಾ ಸಿಬ್ಬಂದಿಗೆ ಸೂಕ್ತ ವಾಹನಗಳ ವ್ಯವಸ್ಥೆ ಮಾಡಬೇಕು’ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಹೇಶ್ ಬಿರಾದಾರ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಮಲ್ಲಪ್ಪ.ಕೆ, ಡಬ್ಲ್ಯುಎಚ್ಒ, ಎಸ್ಎಂಒ ಡಾ. ಅನಿಲ್ ಕುಮಾರ್ ತಾಳಿಕೋಟಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.