ADVERTISEMENT

ಮಾಸಿಕ ₹ 15 ಸಾವಿರ ಗೌರವಧನಕ್ಕೆ ಆಶಾ ಕಾರ್ಯಕರ್ತೆಯರ ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2026, 9:22 IST
Last Updated 28 ಫೆಬ್ರುವರಿ 2026, 9:22 IST
ಯಾದಗಿರಿಯಲ್ಲಿ ಶುಕ್ರವಾರ ಎಐಯುಟಿಯುಸಿ ಸಂಯೋಜಿತ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರು, ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು
ಯಾದಗಿರಿಯಲ್ಲಿ ಶುಕ್ರವಾರ ಎಐಯುಟಿಯುಸಿ ಸಂಯೋಜಿತ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರು, ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು   

ಯಾದಗಿರಿ: ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಹಾಗೂ ರಾಜ್ಯ ಸರ್ಕಾರದ ಗೌರವಧನ ಸೇರಿ ಮಾಸಿಕ ₹15 ಸಾವಿರ ಗೌರವಧನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಶುಕ್ರವಾರ ಎಐಯುಟಿಯುಸಿ ಸಂಯೋಜಿತ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.

ನೆತ್ತಿ ಸುಡುವ ಬಿಸಿಲಿನಲ್ಲಿ ಜಮಾಯಿಸಿದ ಕಾರ್ಯಕರ್ತೆಯರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ‌ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು. ವೇತನ ಹೆಚ್ಚಳ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಿಂದೆ ಘೋಷಣೆ ಮಾಡಿದಂತೆ ನಡೆದುಕೊಳ್ಳಬೇಕು. ಈ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದರು

ADVERTISEMENT

‘ಕಳೆದ ವರ್ಷ ಜನವರಿಯಲ್ಲಿ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಹೋರಾಟ ನಡೆಸಿದ ವೇಳೆಯಲ್ಲಿ ಮಾಸಿಕ ₹10 ಸಾವಿರ ಗೌರವಧನ ಪಾವತಿಸುವ ಭರವಸೆಯನ್ನು ನೀಡಿದ್ದರು. ಆಡಳಿತರೂಢ ಕಾಂಗ್ರೆಸ್ ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ಈಗಿರುವ ₹ 5 ಸಾವಿರ ಗೌರವಧನ ₹ 8 ಸಾವಿರಕ್ಕೆ ಏರಿಕೆ ಮಾಡುವ ಭರವಸೆ ನೀಡಿತ್ತು. ಇದುವರೆಗೆ ಯಾವುದೂ ಕಾರ್ಯರೂಪಕ್ಕೆ ಬಂದಿಲ್ಲ. ಬದಲಾಗಿ ಆಶಾ ವಿರೋಧಿ ಹಲವು ಏಕಪಕ್ಷೀಯ ಆದೇಶಗಳನ್ನು ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.‌

‘ನಿವೃತ್ತ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡುಗಂಟು ನೀಡಬೇಕು. ತೀವ್ರತರದ ಕಾಯಿಲೆಗಳ ಚಿಕಿತ್ಸಾ ವೆಚ್ಚಕ್ಕಾಗಿ ಕಾರ್ಪಸ್‌ ಫಂಡ್ ಮಾಡಿ, ಅಂಗನವಾಡಿ ಮಾದರಿಯಲ್ಲಿ ಚಿಕಿತ್ಸಾ ವೆಚ್ಚ ಮರುಪಾವತಿಗೆ ವ್ಯವಸ್ಥೆ ಮಾಡಬೇಕು. ತರ್ಕಬದ್ಧ ಹೆಸರಿನಲ್ಲಿ 7000 ಆಶಾ ಕಾರ್ಯಕರ್ತೆಯರನ್ನು ಕೈಬಿಡುವ ಪ್ರಕ್ರಿಯೆಯನ್ನು ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿ ಸಂಘದ ಜಿಲ್ಲಾ ಅಧ್ಯಕ್ಷೆ ಡಿ. ಉಮಾದೇವಿ, ‘ಕಳೆದ ಬಜೆಟ್‌ನಲ್ಲಿ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ₹ 1000 ಹೆಚ್ಚಳ ಮಾಡಿದಂತೆ ಆಶಾ ಕಾರ್ಯಕರ್ತೆಯರಿಗೂ ಹೆಚ್ಚಳ ಮಾಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಅದು, ಇದುವರೆಗೆ ಹೆಚ್ಚಳ ಮಾಡಿಲ್ಲ. ₹ 10 ಸಾವಿರ ಗೌರವಧನವೂ ಕೊಡದೆ ರಾಜ್ಯ ಸರ್ಕಾರವು ಅನ್ಯಾಯ ಮಾಡಿದೆ. ಇನ್ನೂ ಎಷ್ಟೊಂದು ಅನ್ಯಾಯ ಮಾಡು‌ತ್ತಿರಾ’ ಎಂದು ಪ್ರಶ್ನಿಸಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ದೇವಕಿ ವನದುರ್ಗ, ಕಾರ್ಯಕರ್ತೆಯರಾದ ಸರಸ್ವತಿ ಚಟ್ನಳ್ಳಿ, ಪುಷ್ಪಲತಾ, ಅಮೃತಾ, ದಾನಮ್ಮ ತಾಯಮ್ಮ, ಅಶ್ವಿನಿ, ಶಾಂತವ್ವ, ಶಿವಮೊಗ್ಗಮ್ಮ, ಪ್ರೇಮ, ನಾಗೇಂದ್ರಮ್ಮ, ಸರೋಜಾ, ಸಂಪತ್ಕುಮಾರಿ, ಶ್ರೀದೇವಿ, ಪವಿತ್ರಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.