
ಯಾದಗಿರಿ: ಆಂಧ್ರಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ ಜ್ಯೋತಿರ್ಲಿಂಗ ದರ್ಶನಕ್ಕೆ ತೆರಳಿ ವಾಪಸ್ ಬರುವಾಗ ಕಲಕುರ್ತಿ ಸಮೀಪದ ರಸ್ತೆಯಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ ಯಾದಗಿರಿ ಮೂಲದ ಇಬ್ಬರು ಸೇರಿ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಹಾಪುರ ತಾಲ್ಲೂಕಿನ ಗೋಗಿ ಮೂಲದ ರಾಮನಗೌಡ ಗೋಗಿ (52), ಆತನ ಪತ್ನಿ ಮೇಘಾ (48) ಹಾಗೂ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕಲಕೇರಿ ಗ್ರಾಮದ ಮಹಾದೇವಮ್ಮ ಕಲಕೇರಿ (70) ಮೃತಪಟ್ಟಿದ್ದಾರೆ. ಗಾಯಗೊಂಡವರು ಕಲಕುರ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಮನಗೌಡ ದಂಪತಿ ಪ್ರಸ್ತುತ ಕಲಕೇರಿಯಲ್ಲಿ ವಾಸವಾಗಿದ್ದರು.
ರಾಮನಗೌಡ ಕುಟುಂಬಸ್ಥರು ಕ್ರೂಸರ್ನಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ತೆರಳಿದ್ದರು. ದೇವರ ದರ್ಶನ ಮಾಡಿ ವಾಪಸ್ ಬರುವಾಗ ಕಲಕುರ್ತಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ರಸ್ತೆ ಬದಿಯ ಸೇತುವೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ರಾಮನಗೌಡ, ಮೇಘಾ ಹಾಗೂ ಮಹಾದೇವಮ್ಮ ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಐದಾರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಾಮನಗೌಡ ಅವರು ತಮ್ಮ ಮಗಳನ್ನು ಪತ್ನಿಯ ತಮ್ಮ ಕಲಕೇರಿ ಗ್ರಾಮ ಪಂಚಾಯತಿ ಸದಸ್ಯ ವಿನೋದ ವಡಗೇರಿ ಅವರಿಗೆ ಕೊಟ್ಟು ಮದುವೆ ಮಾಡಿದ್ದರು. ತಮ್ಮ ಮೊಮ್ಮಗಳ ಜವಳ ಕಾರ್ಯಕ್ರಮಕ್ಕಾಗಿ ಮೈಲಾರಕ್ಕೆ ಹೋಗಿದ್ದರು. ಅಲ್ಲಿಂದ ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಹೋಗಿ ಮರಳಿ ಬರುವಾಗ ಅಪಘಾತ ಸಂಭವಿಸಿದೆ ಎಂದು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.