ADVERTISEMENT

ಯಾದಗಿರಿ: ಇಳಿಕೆಯಾದ ಕೃಷ್ಣಾ ನದಿ ಪ್ರವಾಹ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2021, 4:47 IST
Last Updated 2 ಆಗಸ್ಟ್ 2021, 4:47 IST
ಕೊಳ್ಳೂರು ಗ್ರಾಮದ ಭತ್ತದ ಗದ್ದೆಗಳಲ್ಲಿ ನುಗ್ಗಿರುವ ಪ್ರವಾಹದ ನೀರು
ಕೊಳ್ಳೂರು ಗ್ರಾಮದ ಭತ್ತದ ಗದ್ದೆಗಳಲ್ಲಿ ನುಗ್ಗಿರುವ ಪ್ರವಾಹದ ನೀರು   

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಹರಿಸುವ ನೀರಿನ ಪ್ರಮಾಣ ಇಳಿಕೆಯಾಗಿದ್ದು, ರೈತರ ಆತಂಕ ದೂರವಾಗಿದೆ.

ಸದ್ಯ ಜಲಾಶಯದಿಂದ 2.29 ಲಕ್ಷ ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ನೀರು ಇಳಿಕೆಯಾಗುವ ಸಾಧ್ಯತೆ ಇದೆ.

ಕಳೆದ 10 ದಿನಗಳಿಂದ ಶಹಾಪುರ ತಾಲ್ಲೂಕಿನ ಕೊಳ್ಳೂರು (ಎಂ) ಸೇತುವೆ ಮುಳುಗಡೆಯಾಗಿತ್ತು. ಇದರಿಂದ ಯಾದಗಿರಿ, ಕಲಬುರ್ಗಿ, ರಾಯಚೂರು ಮಾರ್ಗ ಬಂದ್ ಆಗಿತ್ತು. ಸೋಮವಾರ ಸೇತುವೆ ಮೇಲೆ ಹರಿಯುವ ನೀರಿನ ಪ್ರಮಾಣ ಇಳಿಕೆಯಾಗಿದ್ದು, ಸಂಜೆ ವೇಳೆಗೆ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ.

ADVERTISEMENT
ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕೊಳ್ಳೂರು ಎಂ ಸೇತುವೆ ಮೇಲೆ ಹರಿಯುವ ನೀರಿನ ಪ್ರಮಾಣ ಇಳಿಕೆಯಾಗಿದೆ

ಸಾವಿರಾರು ಹೆಕ್ಟೇರ್ ಪ್ರದೇಶಕ್ಕೆ ಹಾನಿ:

ಕೃಷ್ಣಾ ನದಿ ಪ್ರವಾಹದಿಂದ ಜಿಲ್ಲೆಯ ಮೂರು ತಾಲ್ಲೂಕಿನ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆಗಳು ಹಾಳಾಗಿವೆ.

ಸುರಪುರ, ಶಹಾಪುರ, ವಡಗೇರಾ ತಾಲ್ಲೂಕಿನ ನದಿಯಂಚಿನ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿದ್ದರಿಂದ ಭತ್ತ, ಹತ್ತಿ ಬೆಳೆಗಳು ಹಾಳಾಗಿವೆ. ಎಕರೆಗೆ ₹20 ರಿಂದ ₹30 ಸಾವಿರ ಹಣ ಖರ್ಚು ಮಾಡಿ ಬೆಳೆದಿದ್ದ ಫಸಲು ನಷ್ಟವಾಗಿದೆ.

ನದಿಯಂಚಿನಲ್ಲಿದ್ದ 50 ಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು. ಕಳೆದ 10 ದಿನಗಳಿಂದ ಜಿಲ್ಲೆ ಕೃಷ್ಣಾ ನದಿ ಪ್ರವಾಹ ಎದುರಿಸಿತ್ತು.

'ಪ್ರವಾಹದ ನೀರು ಇಳಿಕೆಯಾಗುತ್ತಿದ್ದು, ಶೀಘ್ರ ಹಾನಿಯಾದ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಸರ್ವೆ ಮಾಡಬೇಕು. ತಕ್ಷಣವೇ ಪರಿಹಾರ ನೀಡಬೇಕು' ಎಂದು ರೈತ ಶಿವಾರೆಡ್ಡಿ ಪಾಟೀಲ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.