ADVERTISEMENT

ಯಾದಗಿರಿ: ‘ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ’

​ಪ್ರಜಾವಾಣಿ ವಾರ್ತೆ
Published 31 ಜನವರಿ 2026, 6:09 IST
Last Updated 31 ಜನವರಿ 2026, 6:09 IST
ಸುರಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನದ ನಿಮಿತ್ತವಾಗಿ ಶ್ರಮದಾನ ಜರುಗಿತು
ಸುರಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನದ ನಿಮಿತ್ತವಾಗಿ ಶ್ರಮದಾನ ಜರುಗಿತು   

ಸುರಪುರ: ‘ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ. ಎಲ್ಲರೂ ಸ್ವಚ್ಛತೆ ಮತ್ತು ನೈರ್ಮಲ್ಯತೆಗೆ ಪ್ರಾಮುಖ್ಯತೆ ನೀಡಬೇಕು’ ಎಂದು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಹೇಳಿದರು.

ಇಲ್ಲಿಯ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಶುಕ್ರವಾರ ರಾಷ್ಟ್ರೀಯ ಸ್ವಚ್ಛತಾ ದಿನದ ನಿಮಿತ್ತವಾಗಿ ಹಮ್ಮಿಕೊಂಡಿದ್ದ ಶ್ರಮದಾನ ದಿನ ಮತ್ತು ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಾರ್ವಜನಿಕ ಸ್ಥಳಗಳು, ಆಸ್ಪತ್ರೆಗಳು, ಶಾಲಾ-ಕಾಲೇಜುಗಳು, ಉದ್ಯಾನ ವನಗಳಲ್ಲಿ ಸಾರ್ವಜನಿಕರು ಹಾಗೂ ಸಂಬಂಧಪಟ್ಟ ಇಲಾಖೆಯವರು ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಬೇಕು. ಹಾಗೆಯೇ ನಮ್ಮ ಮನೆ, ಬೀದಿ, ಗ್ರಾಮ, ನಗರದ ಸ್ವಚ್ಛತೆ ಕಾಪಾಡುವುದು ಸಹ ಸಾರ್ವಜನಿಕರ ಕರ್ತವ್ಯವಾಗಿದೆ. ಕಸವನ್ನು ಎಲ್ಲೆಂದರಲ್ಲಿ ಬಿಸಾಡಿ ಹೋಗಬಾರದು’ ಎಂದು ತಿಳಿಸಿದರು.

ADVERTISEMENT

ಹಿರಿಯ ಸಿವಿಲ್ ನ್ಯಾಯಾಧೀಶೆ ಫಕೀರವ್ವ ಕೆಳಗೇರಿ ಮಾತನಾಡಿ, ‘ನಮ್ಮ ದೈನಂದಿನ ಬದುಕಿನಲ್ಲಿ ನೈರ್ಮಲ್ಯ ಮತ್ತು ಶುಚಿತ್ವ ಪ್ರಮುಖ ಪಾತ್ರ ವಹಿಸುತ್ತವೆ. ಭಾರತದಲ್ಲಿ ಪ್ರತಿ ವರ್ಷ ಜನವರಿ 30 ರಂದು ರಾಷ್ಟ್ರೀಯ ಸ್ವಚ್ಛತಾ ದಿನವನ್ನು ಆಚರಿಸಲಾಗುತ್ತದೆ. ಕೆಲಸದ ಸ್ಥಳ, ಮನೆಗಳು, ಸರಕಾರಿ ಕಚೇರಿ, ಸಾರ್ವಜನಿಕ ಸ್ಥಳಗಳಲ್ಲೂ ಸ್ವಚ್ಛತೆ ಕಾಪಾಡಲು ಉತ್ತೇಜಿಸಲು ಈ ದಿನ ಆಚರಿಸಲಾಗುತ್ತದೆ. ಸ್ವಚ್ಛತೆಯ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತದೆ’ ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಆರ್.ವಿ.ನಾಯಕ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರಿಯ ವಕೀಲ ಗುರುಪಾದಪ್ಪ ಬನ್ನಾಳ ಉಪನ್ಯಾಸ ನೀಡಿದರು. ವಕೀಲರ ಸಂಘದ ಅಧ್ಯಕ್ಷ ರಮಾನಂದ ಕವಲಿ, ಪ್ರಭು ಕಾಲೇಜಿನ ಪ್ರಾಚಾರ್ಯ ವಿರುಪಾಕ್ಷಿ, ವಕೀಲರು, ತಾಲ್ಲೂಕು ಕಾನೂನು ಸೇವಾ ಸಮಿತಿಯ ಆಡಳಿತಾತ್ಮಕ ಸಹಾಯಕರಾದ ಭೀಮಣ್ಣ ಬನಸೋಡೆ, ಆರೋಗ್ಯ ಮತ್ತು ನ್ಯಾಯಾಂಗ ಇಲಾಖೆಯವರು, ವಿದ್ಯಾರ್ಥಿಗಳು ಇತರರಿದ್ದರು. ಉಪನ್ಯಾಸಕ ಭೀಮಪ್ಪ ದೊಡ್ಡಮನಿ ನಿರೂಪಿಸಿ ವಂದಿಸಿದರು.