ADVERTISEMENT

ಕುಡಿಯುವ ನೀರಿನ ಸಮಸ್ಯೆ: ಪಂಚಾಯಿತಿ ಮುಂದೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2025, 10:19 IST
Last Updated 15 ಏಪ್ರಿಲ್ 2025, 10:19 IST
<div class="paragraphs"><p>ಯರಗೋಳ ವ್ಯಾಪ್ತಿಯ ಹತ್ತಿಕುಣಿ ಗ್ರಾಮದಲ್ಲಿ ವಿದ್ಯುತ್ ಮೋಟರ್ ಸುಟ್ಟಿರುವುದರಿಂದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ಮಾಡಿದರು</p><p></p></div>

ಯರಗೋಳ ವ್ಯಾಪ್ತಿಯ ಹತ್ತಿಕುಣಿ ಗ್ರಾಮದಲ್ಲಿ ವಿದ್ಯುತ್ ಮೋಟರ್ ಸುಟ್ಟಿರುವುದರಿಂದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ಮಾಡಿದರು

   

ಯರಗೋಳ (ಯಾದಗಿರಿ): ವ್ಯಾಪ್ತಿಯ ಹತ್ತಿಕುಣಿ ಗ್ರಾಮದಲ್ಲಿ ಕಳೆದ 3 ದಿನಗಳಿಂದ ಕುಡಿಯುವ ನೀರು ಪೂರೈಸುವ ಮೋಟರ್ ಸುಟ್ಟಿದ್ದು, ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದೆ. ಪರಿಣಾಮ ಗ್ರಾಮಸ್ಥರು ಮಂಗಳವಾರ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ADVERTISEMENT

ಗ್ರಾಮದ ಮುಖಂಡ ಚಂದ್ರಶೇಖರ ಪಾಟೀಲ ನೇತೃತ್ವದಲ್ಲಿ ಗ್ರಾಮಸ್ಥರು ಪಂಚಾಯಿತಿಗೆ ಆಗಮಿಸಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ಥಳಕ್ಕೆ ಆಗಮಿಸಿ, ಸಮಸ್ಯೆ ಬಗೆಹರಿಸಬೇಕು ಎಂದು ಪಟ್ಟು ಹಿಡಿದು 2ಗಂಟೆಗಳ ಕಾಲ ಅಲ್ಲಿಯೇ ಠಿಕಾಣಿ ಹೂಡಿದರು.

ಕೊನೆಗೆ ಗ್ರಾಮಸ್ಥರ ಆಕ್ರೋಶ ಅರಿತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿಂಗಣ್ಣ, ಪಂಚಾಯಿತಿಗೆ ಆಗಮಿಸಿ ಯಂತ್ರಗಳು ಸುಟ್ಟಿರುವ ವಿಷಯ ಪ್ರಸ್ತಾಪಿಸುತ್ತಿದ್ದಂತೆ ಗ್ರಾಮಸ್ಥರು ಸಿಟ್ಟಿಗೆದ್ದು ಸರ್ಕಾರ ನಿಮಗೆ ನಮ್ಮ ತೆರಿಗೆ ಹಣದಲ್ಲಿ ವೇತನ ಕೊಡುತ್ತದೆ. 3ದಿನಗಳಿಂದ ವಿದ್ಯುತ್ ಸರಿಯಾಗಿ ಪೂರೈಕೆಯಾಗುತ್ತಿಲ್ಲ. ಯಂತ್ರಗಳು ದುರಸ್ತಿ ಮಾಡಿಲ್ಲ. 2 ದಿನಗಳಲ್ಲಿ ಗ್ರಾಮದಲ್ಲಿ ಹಜರತ್ ಬಂದಗಿ ಸಾಹೇಬ್ ಭಾವೈಕ್ಯತೆ ಜಾತ್ರೆ ಇದೆ. ಗ್ರಾಮದಲ್ಲಿ 10ಸಾವಿರಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಗ್ರಾಮಕ್ಕೆ ಬೇರೆ ನಗರಗಳಿಂದ ಸಾವಿರಾರು ಜನರು ಮರಳಿದ್ದಾರೆ. ಹಳ್ಳದಲ್ಲಿ ಸಂಗ್ರಹವಿರುವ ಮಲೀನ ನೀರು ಅನಿವಾರ್ಯವಾಗಿ ತೆಗೆದುಕೊಂಡು ಬಂದು, ಉಪಯೋಗಿಸುತ್ತಿದ್ದಾರೆ. ಸಾಂಕ್ರಾಮಿಕ ರೋಗಗಳು ಉದ್ಭವಿಸಿದರೇ ಅದಕ್ಕೆ ಯಾರೂ ಕಾರಣರು ಎಂದು ಪ್ರಶ್ನಿಸಿದರು.

ಕುಡಿಯುವ ನೀರಿನ ಸಮಸ್ಯೆಗೆ ಯಾವುದೇ ತೊಂದರೆ ಕಂಡು ಬಂದರೇ ಅನುದಾನದ ಕೊರತೆಯಿಲ್ಲ ಎಂದು ಶಾಸಕರು, ಜಿಲ್ಲಾಧಿಕಾರಿ ಹೇಳಿದ್ದಾರೆ. ಆದರೆ, ಇಲ್ಲಿ ನಿಮ್ಮ ನಿರ್ಲಕ್ಷ್ಯದಿಂದ ಸಾವಿರಾರು ಜನರು ನರಕಯಾತನೆ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.

ನಂತರ ಅಧಿಕಾರಿ, ಸಿಬ್ಬಂದಿಗಳನ್ನು ಹಾಗೂ ಆಡಳಿತ ಮಂಡಳಿಯವರನ್ನು ಗ್ರಾಮದ ಪ್ರಮುಖ ಬೀದಿಗಳಿಗೆ ಕರೆದುಕೊಂಡು ಹೋಗಿ ಹದಗೆಟ್ಟಿರುವ ರಸ್ತೆಗಳು, ಚರಂಡಿಗಳು ಹಾಗೂ ಪೈಪ್‌ಲೈನ್ ದುರಸ್ತಿಗಳ ಸ್ಥಳಗಳನ್ನು ತೋರಿಸಿ, ಈ ಹಿಂದೆ ಕೈಗೊಂಡಿರುವ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ಪೂರ್ಣಗೊಂಡಿಲ್ಲ. ಅದಕ್ಕೆ ಕಾರಣವೇನು ಎಂದು ಮನೆ-ಮನೆಗೆ ಎಲ್ಲಿ ನೀರು ಬರುತ್ತವೆ ತೋರಿಸಿ ಎಂದು ಅಸಮಾಧಾನ ವ್ಯಕ್ತಪಡಿಸಿ, ನಿಮ್ಮ ಕಾರ್ಯವೈಖರಿಯಲ್ಲಿ ಬದಲಾವಣೆ ಮಾಡಿಕೊಳ್ಳದಿದ್ದರೆ ನಾವೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಕೈಗೊಳ್ಳುತ್ತೇವೆ. ಅಲ್ಲದೇ ನ್ಯಾಯಾಲಯಕ್ಕೆ ತಮ್ಮ ವೈಫಲ್ಯಗಳ ಪಟ್ಟಿಗಳೊಂದಿಗೆ ಕೇಸ್ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಕೊನೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಆಡಳಿತ ಮಂಡಳಿಯವರು ಸಂಜೆಯೊಳಗೆ ಎಲ್ಲಾ ಯಂತ್ರಗಳನ್ನು ದುರಸ್ತಿಗೊಳಿಸಿ ಬುಧವಾರ ಬೆಳಿಗ್ಗೆ ಜನರಿಗೆ ಕುಡಿಯುವ ನೀರಿನ ಸೌಕರ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದ ನಂತರ ಸಾರ್ವಜನಿಕರು ಸಮಾಧಾನಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.