ಯಲಹಂಕ: ‘ಬಾಹ್ಯ ಶತ್ರುಗಳಿಗಿಂತಲೂ ಆಂತರಿಕ ಶತ್ರುಗಳು ದೇಶಕ್ಕೆ ಅಪಾಯಕಾರಿ. ಭಯೋತ್ಪಾದಕರ ದೇಶವನ್ನಾಗಿ ಮಾಡಲು ಹೊರಟಿರುವ ದುಷ್ಟಶಕ್ತಿಗಳನ್ನು ಮಟ್ಟಹಾಕಲು ನಾವೆಲ್ಲರೂ ಸಂಘಟಿತರಾಗಬೇಕು’ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.
ಯಲಹಂಕದ ಹೊಯ್ಸಳ ಕ್ರೀಡಾಂಗಣದಲ್ಲಿ ನಡೆದ 74ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಟನಡೆಸಿ ತ್ಯಾಗ, ಬಲಿದಾನಗಳನ್ನು ಮಾಡಿದ ಮಹಾಪುರುಷರಿಗೆ ಗೌರವ ಸಮರ್ಪಿಸಬೇಕು. ಜೊತೆಗೆ ಇಲ್ಲಿನ ಅನ್ನ, ನೀರು ಸೇರಿದಂತೆ ಸಕಲ ಸೌಕರ್ಯಗಳನ್ನು ಅನುಭವಿಸಿ, ದೇಶದ ವಿರುದ್ಧ ಮಾತನಾಡುವವರ ವಿರುದ್ಧ ಹೋರಾಡಬೇಕು’ ಎಂದರು.
ತಹಶೀಲ್ದಾರ್ ಎನ್.ರಘುಮೂರ್ತಿ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಇಲಾಖೆ ಸಿಬ್ಬಂದಿಯಿಂದ ಬ್ಯಾಂಡ್ ಮತ್ತು ಕವಾಯತು ನಡೆಯಿತು. ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿ ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಹಾಗೂ ಕೊರೊನಾ ಸೇನಾನಿಗಳನ್ನು ಸನ್ಮಾನಿಸಲಾಯಿತು.
ಬಿಬಿಎಂಪಿ ಸದಸ್ಯ ಎಂ.ಸತೀಶ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಕಾವ್ಯಾ ಮುತ್ತು, ಉಪಾಧ್ಯಕ್ಷೆ ನಳಿನ ರಾಜಕುಮಾರ್, ಬಿಇಒ ಕಮಲಾಕರ್, ಎಸಿಪಿ ಶ್ರೀನಿವಾಸ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.