ಉಡುಪಿ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಸೇನಾ ನೇಮಾಕಾತಿ ರ್ಯಾಲಿ ಆರಂಭವಾಯಿತು.
ಜಿಲ್ಲಾಧಿಕಾರಿ ಜಿ.ಜಗದೀಶ್ ರ್ಯಾಲಿಗೆ ಚಾಲನೆ ನೀಡಿದರು. ಸೇನಾ ನೇಮಾಕಾತಿ ವಿಭಾಗದ ಮುಖ್ಯಸ್ಥರಾದ ಕರ್ನಲ್ ದುಭಾಶ್ ಇದ್ದರು.
ಮೊದಲ ದಿನ ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ 3 ಸಾವಿರ ಮಂದಿ ಭಾಗವಹಿಸಿದ್ದಾರೆ.
ಜನರಲ್ ಡ್ಯುಟಿ ಹುದ್ದೆಗೆ ನೇಮಕಾತಿ ರ್ಯಾಲಿ ನಡೆಯುತ್ತಿದೆ.
1600 ಮೀಟರ್ ಓಟ, ಜಿಗ್ಜಾಗ್ ನಡಿಗೆ, ಪುಲ್ ಅಪ್ಸ್, ಉದ್ದ ಜಿಗಿತ ಅರ್ಹತಾ ಪರೀಕ್ಷೆಯಲ್ಲಿ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ಉತ್ತೀರ್ಣರಾದವರಿಗೆ ಗುರುವಾರ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ರ್ಯಾಲಿಯಲ್ಲಿ ಭಾಗವಹಿಸಲು ದೂರದ ಊರುಗಳಿಂದ ಮಧ್ಯರಾತ್ರಿಯೇ ಉಡುಪಿಗೆ ಬಂದಿಳಿದಿದ್ದರು. ಕೋವಿಡ್ಗೂ ಮುನ್ನ ನೋಂದಾಯಿಸಿಕೊಂಡವರಿಗೆ ಈಗ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದೆ.
ಕೋವಿಡ್ ಮಾರ್ಗಸೂಚಿಯಂತೆ ಮಾಸ್ಕ್ ಧರಿಸುವಿಕೆ ಕಡ್ಡಾಯ ಮಾಡಲಾಗಿದ್ದು, ಕೋವಿಡ್ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ರ್ಯಾಲಿಯಲ್ಲಿ ಭಾಗವಹಿಸಲು ಅನುಮತಿ ನೀಡಲಾಗಿದೆ. ಬಿಸಿಲಿನ ಝಳ ಹೆಚ್ಚಿದ್ದರೂ ಯುವಕರು ರ್ಯಾಲಿಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.
ಮಾರ್ಚ್ 27ರವರೆಗೆ ರ್ಯಾಲಿ ನಡೆಯಲಿದ್ದು, 30 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ. ರಾಜ್ಯದಲ್ಲಿ ಮೊದಲಬಾರಿಗೆ ರ್ಯಾಲಿಯಲ್ಲಿ ಉಚಿತ ಊಟ ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಗಿದ್ದು, ಕೃಷ್ಣಮಠ ಹಾಗೂ ಮೆಸ್ಕಾಂ ಗುತ್ತಿಗೆ ನೌಕರರ ಸಂಘದಿಂದ ನೀಡಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.