ಪರೀಕ್ಷೆ
ಬೆಂಗಳೂರು: ಸಿಇಟಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ದಾಖಲೆ ಪರಿಶೀಲನೆಗೆ ದ್ವಿತೀಯ ಪಿಯು ಪರೀಕ್ಷೆಯ ನಂತರವೂ ಅವಕಾಶ ಮಾಡಿಕೊಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ.
ಈ ಕುರಿತು ಹೇಳಿಕೆ ನೀಡಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸಿಇಟಿ ತೆಗೆದುಕೊಳ್ಳುವ ವಿದ್ಯಾರ್ಥಿಗಳು ನಿಗದಿತ ದಿನಾಂಕದ ಒಳಗೆ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಬೇಕು. ಅಂತಹ ಎಲ್ಲ ವಿದ್ಯಾರ್ಥಿಗಳಿಗೂ ಪ್ರವೇಶ ಪತ್ರ ನೀಡಲಾಗುವುದು. ದಾಖಲೆಗಳ ಪರಿಶೀಲನೆಗೆ ದ್ವಿತೀಯ ಪಿಯು ಪರೀಕ್ಷೆ ನಂತರವೂ ಅವಕಾಶ ನೀಡಲಾಗುತ್ತದೆ. ಯಾರೂ ಆತಂಕ ಪಡಬಾರದು ಎಂದು ಅಭಯ ನೀಡಿದ್ದಾರೆ.
ಹೊರ ರಾಜ್ಯದ ಅಭ್ಯರ್ಥಿಗಳು ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಪ್ರವೇಶಕ್ಕೆ ಅರ್ಹತೆ ಪಡೆಯಲು ಸಿಇಟಿಯ ಭೌತವಿಜ್ಞಾನ, ರಸಾಯನವಿಜ್ಞಾನ ಮತ್ತು ಜೀವವಿಜ್ಞಾನ ವಿಷಯಗಳ ಪರೀಕ್ಷೆಗಳಿಗೆ ಹಾಜರಾಗಬೇಕು. ಆದರೆ, ಎಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಕ್ಕೆ ಅವರು ಅರ್ಹರಾಗುವುದಿಲ್ಲ. ಮೀಸಲಾತಿಯ ಸೌಲಭ್ಯ ಇರುವುದಿಲ್ಲ ಎಂದಿದ್ದಾರೆ.
ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ಗಳ ಪ್ರವೇಶಕ್ಕೆ ನೀಟ್-25ರಲ್ಲಿ ಅರ್ಹತೆ ಪಡೆಯಬೇಕು ಹಾಗೂ ಕಡ್ಡಾಯವಾಗಿ ಕೆಇಎನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರಬೇಕು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.