ADVERTISEMENT

ಎಂಜಿನಿಯರಿಂಗ್ ಕೋರ್ಸ್‌ ಪರೀಕ್ಷೆ ಬೇಗ ಮುಗಿಸಿ: ಪ್ರೊ. ಎಂ.ಆರ್.ದೊರೆಸ್ವಾಮಿ ಸಲಹೆ

ಜಯಂತಿಗಳ ರಜೆ ಬೇಡ ಎಂದು ಶಿಫಾರಸು

​ಪ್ರಜಾವಾಣಿ ವಾರ್ತೆ
Published 19 ಜೂನ್ 2020, 20:14 IST
Last Updated 19 ಜೂನ್ 2020, 20:14 IST
ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಅವರಿಗೆ ಶಿಕ್ಷಣ ಸುಧಾರಣೆ ಸಲಹೆಗಾರ ಪ್ರೊ. ಎಂ.ಆರ್‌.ದೊರೆಸ್ವಾಮಿ ಅವರು ಶಿಫಾರಸುಗಳ ವರದಿ ನೀಡಿ ಸಮಾಲೋಚನೆ ನಡೆಸಿದರು.
ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಅವರಿಗೆ ಶಿಕ್ಷಣ ಸುಧಾರಣೆ ಸಲಹೆಗಾರ ಪ್ರೊ. ಎಂ.ಆರ್‌.ದೊರೆಸ್ವಾಮಿ ಅವರು ಶಿಫಾರಸುಗಳ ವರದಿ ನೀಡಿ ಸಮಾಲೋಚನೆ ನಡೆಸಿದರು.   

ಬೆಂಗಳೂರು: ‘ಎಂಜಿನಿಯರಿಂಗ್‌ ಪದವಿಯ ಅಂತಿಮ ಸೆಮಿಸ್ಟರ್‌ ಪರೀಕ್ಷೆಗಳು ಹಾಗೂ ಸರ್ಕಾರಿ, ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಬಾಕಿ ಇರುವ ಪರೀಕ್ಷೆಗಳನ್ನು ನಡೆಸಬೇಕು’ ಎಂದುಸರ್ಕಾರದ ಶಿಕ್ಷಣ ಸುಧಾರಣೆ ಸಲಹೆಗಾರ ಪ್ರೊ.ಎಂ.ಆರ್‌.ದೊರೆಸ್ವಾಮಿ ಅವರು ಶಿಫಾರಸು ಮಾಡಿದ್ದಾರೆ.

ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರೊಂದಿಗೆ ಗುರುವಾರ ಮಾತುಕತೆ ನಡೆಸಿ ಏಳು ಪ್ರಮುಖ ಶಿಫಾರಸ್ಸುಗಳನ್ನು ಒಳಗೊಂಡ ವರದಿಯನ್ನು ಅವರು ಸಲ್ಲಿಸಿದರು.

ಎಂಜಿನಿಯರಿಂಗ್‌ ಕೋರ್ಸ್‌ನಲ್ಲಿ ಬ‌ಹುತೇಕ ವಿದ್ಯಾರ್ಥಿಗಳು ಉದ್ಯೋಗಗಳಿಗೆ ಆಯ್ಕೆಯಾಗಿರುತ್ತಾರೆ. ಆದ್ದರಿಂದ ಅವರಿಗೆ ಉತ್ತೀರ್ಣತೆಯ ಪ್ರಮಾಣ ಪತ್ರ ಅಗತ್ಯವಿರುತ್ತದೆ. ಈ ಕಾರಣಕ್ಕಾಗಿ ಬೇಗ ಪರೀಕ್ಷೆಗಳನ್ನು ಮುಗಿಸಬೇಕು ಎಂದು ಸಲಹೆ ನೀಡಿದರು.

ADVERTISEMENT

ಜಯಂತಿಗಳಿಗೆ ರಜೆ ಬೇಡ: ಗಾಂಧಿ ಜಯಂತಿ ಸೇರಿದಂತೆ ಎಲ್ಲ ಗಣ್ಯ ವ್ಯಕ್ತಿಗಳು ಮತ್ತು ಮಹನೀಯರ ಜಯಂತಿಗಳಿಗೆ ಶಾಲಾ– ಕಾಲೇಜುಗಳಿಗೆ ರಜೆ ನೀಡುವುದರ ಬದಲು ಅರ್ಥಪೂರ್ಣ ಆಚರಣೆ ನಡೆಸಬೇಕು ಎಂದೂ ಶಿಫಾರಸು ಮಾಡಿದರು.

ವಿದ್ಯಾರ್ಥಿಗಳಿಗೆ ರಜೆ ನೀಡುವುದರ ಬದಲು, ಶಾಲಾ– ಕಾಲೇಜುಗಳಲ್ಲಿ ಅಂತಹ ಗಣ್ಯ ವ್ಯಕ್ತಿಗಳ ಕುರಿತು ಉಪನ್ಯಾಸ, ಕಾರ್ಯಾಗಾರ ಆಯೋಜಿಸಿ ಹೆಚ್ಚಿನ ಅರಿವು ಮೂಡಿಸಬೇಕು. ಇದರಿಂದ ವಿದ್ಯಾರ್ಥಿಗಳು ಜ್ಞಾನವಂತರಾಗಲು ಸಹಾಯವಾಗುತ್ತದೆ. ಜಯಂತಿಗಳೂ ಅರ್ಥಪೂರ್ಣವಾಗುತ್ತವೆ ಎಂದು ಅವರು ಹೇಳಿದರು.

ಕೋವಿಡ್‌–19 ಸಂಕಷ್ಟ ಮುಗಿದ ಬಳಿಕ ಶಿಕ್ಷಣ ವ್ಯವಸ್ಥೆಯನ್ನು ಮೊದಲಿನ ಸ್ಥಿತಿಗೆ ತರುವುದು ದೊಡ್ಡ ಸವಾಲು. ಹೀಗಾಗಿ ಕೆಲವು ತ್ಯಾಗಗಳನ್ನು ಮಾಡಲೇಬೇಕಾಗಿದೆ ಎಂದು ಅವರು ಪ್ರತಿಪಾದಿಸಿದರು.

ಈ ವರದಿಯ ವಿವಿಧ ಅಂಶಗಳ ಬಗ್ಗೆ ಚರ್ಚಿಸಿದ ಅಶ್ವತ್ಥನಾರಾಯಣ ಅವರು, ಜಯಂತಿಗಳ ರಜೆ ವಿಚಾರದಲ್ಲಿ ನಿರ್ಧಾರವನ್ನು ಮುಖ್ಯಮಂತ್ರಿಗಳೇ ಕೈಗೊಳ್ಳಬೇಕು ಎಂದು ದೊರೆಸ್ವಾಮಿ ಅವರಿಗೆ ಮನವರಿಕೆ ಮಾಡಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.