ADVERTISEMENT

ಇಂಗ್ಲಿಷ್‌ ಮಾಧ್ಯಮ ಶಾಲೆ ರದ್ದುಪಡಿಸಿ: ಕಸಾಪ ಪತ್ರ

ಆಂಧ್ರಪ್ರದೇಶ ಹೈಕೋರ್ಟ್‌ ನೀಡಿದ ತೀರ್ಪಿನ ಉಲ್ಲೇಖ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2020, 20:01 IST
Last Updated 20 ಏಪ್ರಿಲ್ 2020, 20:01 IST
ಮನು ಬಳಿಗಾರ್
ಮನು ಬಳಿಗಾರ್   

ಬೆಂಗಳೂರು: ಆಂಧ್ರಪ್ರದೇಶದ ಮಾತೃಭಾಷಾ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಆರಂಭಿಸಿದ ಕ್ರಮವನ್ನು ಅಲ್ಲಿನ ಹೈಕೋರ್ಟ್‌ ರದ್ದುಪಡಿಸಿದೆ. ರಾಜ್ಯದಲ್ಲೂ ಈಗಾಗಲೇ ಆರಂಭಿಸಿರುವ ಒಂದು ಸಾವಿರ ಇಂಗ್ಲಿಷ್ ಮಧ್ಯಮ ಶಾಲೆಗಳನ್ನು ರದ್ದುಪಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್‌ ಸರ್ಕಾರವನ್ನು ಒತ್ತಾಯಿಸಿದೆ.‌

ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್ ಅವರು ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಈ ಮನವಿಗೆ ಕಲಬುರ್ಗಿಯಲ್ಲಿ ನಡೆದ 85ನೇ ಕನ್ನಡ ಸಾಹಿತ್ಯ ಸಮ್ಮೆಳನದ ಅಧ್ಯಕ್ಷ ಡಾ.ಎಚ್‌.ಎಸ್.ವೆಂಕಟೇಶಮೂರ್ತಿ ಮತ್ತು ಅಭಿವೃದ್ಧಿ ಶಿಕ್ಷಣ ತಜ್ಞ ಡಾ.ವಿ.ಪಿ.ನಿರಂಜನಾರಾಧ್ಯ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ಈ ಹಿಂದಿನ ಸರ್ಕಾರ ಒಂದು ಸಾವಿರ ಇಂಗ್ಲಿಷ್‌ ಮಾಧ್ಯಮ ಶಾಲೆ ಆರಂಭಿಸುವ ನಿಟ್ಟಿನಲ್ಲಿ ಹೊರಡಿಸಿದ್ದ ಆದೇಶ ರದ್ದುಪಡಿಸುವುದರ ಜತೆಗೆ ಹೊಸದಾಗಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸುವ ಎಲ್ಲಾ ಪ್ರಸ್ತಾವನೆಗಳನ್ನು ಪುನರ್‌ ಪರಿಶೀಲಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ADVERTISEMENT

‘ಕನ್ನಡ ಮಾಧ್ಯಮ ಶಾಲೆಗಳನ್ನು ಬಲವರ್ಧನೆಗೊಳಿಸಬೇಕು. ಇಂಗ್ಲಿಷ್‌ ಅನ್ನು ಪ್ರಬುದ್ಧವಾಗಿ ಬಳಸಲು ಸಾಧ್ಯವಾಗುವಷ್ಟರ ಮಟ್ಟಿಗೆ ಒಂದು ಭಾಷೆಯನ್ನಾಗಿ ಕಲಿಸುವ ಬಗ್ಗೆ ಗಂಭೀರ ಯೋಚನೆ ಮಾಡಬೇಕು. ಖಾಸಗಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಗೆ ಅನುಮತಿ ನೀಡುವ ಬಗ್ಗೆಯೂ ಸರ್ಕಾರ ಪುನರ್ ಪರಿಶೀಲನೆ ನಡೆಸಬೇಕು’ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.