ಬಾಗಲಕೋಟೆ: 'ರಾಜ್ಯದಲ್ಲಿ ಜುಲೈ 1ರಿಂದ ಶಾಲೆಗಳ ಆರಂಭ ಎಂಬುದು ಈಗಾಗಲೇ ಸರ್ಕಾರದಿಂದ ನಿರ್ಧರಿತವಾದ ದಿನಾಂಕವಲ್ಲ. ಬದಲಿಗೆ ಯೋಚಿಸಿರುವ ದಿನಾಂಕ' ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ಸ್ಪಷ್ಟಪಡಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಗಳ ಆರಂಭಕ್ಕೆ ಮುನ್ನ ಪಾಲಕರ ಅಭಿಪ್ರಾಯ ಕ್ರೋಢೀಕರಣಕ್ಕೆ ನಿರ್ಧರಿಸಲಾಗಿದೆ. ಅದಕ್ಕಾಗಿ ಜೂನ್ 11ರಿಂದ 13ರವರೆಗೆ ಆಯಾ ಶಾಲೆಗಳಲ್ಲಿ ಪಾಲಕರು ಮತ್ತು ಶಾಲಾಭಿವೃದ್ಧಿ ಸಮಿತಿಯ ಸಭೆ ಕರೆದು ಅವರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದರು.
ಅದನ್ನು ಕ್ರೋಢೀಕರಿಸಿ ಜೂನ್ 15ಕ್ಕೆ ಕೇಂದ್ರದ ಮಾನವ ಸಂಪನ್ಮೂಲ ಸಚಿವಾಲಯಕ್ಕೆ ವರದಿ ಸಲ್ಲಿಸಲಾಗುವುದು. ಅದನ್ನು ಆಧರಿಸಿ ಕೇಂದ್ರ ಸರ್ಕಾರ ನೀಡುವ ನಿರ್ದೇಶನದ ಅನ್ವಯ ಶಾಲೆಗಳನ್ನು ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸುರೇಶಕುಮಾರ್ ತಿಳಿಸಿದರು.
ಎಸ್ಎಸ್ಎಲ್ ಸಿ ಪರೀಕ್ಷೆಯ ವೇಳೆ ಮಕ್ಕಳ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳನ್ನೇ ಶಾಲೆಗಳು ಪುನರಾರಂಭವಾದಾಗಲೂ ಮುಂದುವರೆಸಲಾಗುವುದು. ಈ ಬಾರಿ ಶಾಲೆಗಳು ವಿಳಂಬವಾಗಿ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸಿಗುವ ಶೈಕ್ಷಣಿಕ ದಿನಗಳಿಗೆ ಅನುಗುಣವಾಗಿ ಪಠ್ಯಕ್ರಮ ಕಡಿತಗೊಳಿಸಲು ಚಿಂತಿಸಲಾಗಿದೆ. ಆ ಬಗ್ಗೆ ರಾಜ್ಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ನಿರ್ದೇಶನಾಲಯದೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.