ADVERTISEMENT

ಯಕ್ಷಗಾನದ ಮೂಲಕ ಮತದಾನ ಜಾಗೃತಿ: ಸ್ವೀಪ್‌ ಯಕ್ಷಗಾನ ಕಾರ್ಯಕ್ರಮಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2019, 14:57 IST
Last Updated 31 ಮಾರ್ಚ್ 2019, 14:57 IST
ಮತದಾನ ಜಾಗೃತಿಗಾಗಿ ಸಿದ್ದಪಡಿಸಿರುವ ಯಕ್ಷಗಾನ ಪ್ರಸಂಗಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌ ಚಂಡೆ ಬಾರಿಸುವ ಮೂಲಕ ಚಾಲನೆ ನೀಡಿದರು.
ಮತದಾನ ಜಾಗೃತಿಗಾಗಿ ಸಿದ್ದಪಡಿಸಿರುವ ಯಕ್ಷಗಾನ ಪ್ರಸಂಗಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌ ಚಂಡೆ ಬಾರಿಸುವ ಮೂಲಕ ಚಾಲನೆ ನೀಡಿದರು.   

ಉಡುಪಿ: ಉಡುಪಿ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಜಿಲ್ಲೆಯಲ್ಲಿ ಮತದಾನ ಜಾಗೃತಿಗಾಗಿ ಸಿದ್ದಪಡಿಸಿರುವ ಯಕ್ಷಗಾನ ಪ್ರಸಂಗಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌ ಚಂಡೆ ಬಾರಿಸುವ ಮೂಲಕ ಭಾನುವಾರ ಮಲ್ಪೆ ಬೀಚ್‌ನಲ್ಲಿ ಚಾಲನೆ ನೀಡಿದರು.

ಸಮೃದ್ಧಿಪುರದ ಮಹಾರಾಜನ ಕಥಾ ಹಿನ್ನೆಲೆ ಹೊಂದಿರುವ ಈ ಯಕ್ಷಗಾನ ಪ್ರಸಂಗದಲ್ಲಿ ಪುತ್ರ ಸಂತಾನವಿಲ್ಲದ ಮಹಾರಾಜ ತನ್ನ ಉತ್ತರಾಧಿಕಾರಿಯನ್ನು ಪ್ರಜಾಪ್ರಭುತ್ವ ಮಾದರಿಯಲ್ಲಿ ಅರ್ಹ ಅಭ್ಯರ್ಥಿಯನ್ನು ಮತದಾನದ ಮೂಲಕ ಆಯ್ಕೆ ಮಾಡುವ ಕಥೆ ಇದೆ. ಯಾವುದೇ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬರೂ ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎನ್ನುವ ಮತದಾನದ ಸಂದೇಶ ಈ ಯಕ್ಷಗಾನದಲ್ಲಿದೆ.

ಕೋಟದ ಕಲಾಪೀಠ ತಂಡದ ಕಲಾವಿದರು ಈ ಯಕ್ಷಗಾನ ಪ್ರದರ್ಶಿಸುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಚುನಾವಣೆಯಲ್ಲಿ ಅತೀ ಕಡಿಮೆ ಮತದಾನವಾಗಿರುವ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಜನಜಾಗೃತಿ ಮೂಡಿಸುವ ಮೂಲಕ ಮತದಾನ ಹೆಚ್ಚಳಕ್ಕೆ ಜಿಲ್ಲಾ ಸ್ವೀಪ್‌ ಸಮಿತಿ ಕಾರ್ಯಕ್ರಮ ರೂಪಿಸಿದೆ.

ADVERTISEMENT

ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷೆ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕರಿ ಸಿಂಧೂ ಬಿ. ರೂಪೇಶ್‌, ಪೌರಾಯುಕ್ತ ಆನಂದ್‌ ಕಲ್ಲೋಳಿಕರ್‌, ಉಡುಪಿ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ರಾಜು, ಜಿಲ್ಲಾ ಸಮಾಜ ಕಲ್ಯಾಣಧಿಕಾರಿ ಭುಜಬಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್‌, ಡಿಎಚ್‌ಓ ಡಾ. ಓಂ ಪ್ರಕಾಶ್‌ ಕಟ್ಟೀಮನಿ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್‌ ಕಾಮತ್‌ ಉಪಸ್ಥಿತರಿದ್ದರು. ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಹರಿಕೃಷ್ಣ ಶಿವತ್ತಾಯ ಸ್ವಾಗತಿಸಿ, ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.