ADVERTISEMENT

ಮೈತ್ರಿ ಪಕ್ಷಕ್ಕೆ 22 ಸ್ಥಾನ ಖಚಿತ: ನಿಸರ್ಗ ನಾರಾಯಣಸ್ವಾಮಿ ವಿಶ್ವಾಸ

ಬೂದಿಗೆರೆಯಲ್ಲಿ ಪ್ರಚಾರ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2019, 14:56 IST
Last Updated 15 ಏಪ್ರಿಲ್ 2019, 14:56 IST
ವಿಜಯಪುರ ಬಳಿಯ ಬೂದಿಗೆರೆಯಲ್ಲಿ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯಿಲಿ ಅವರ ಪರವಾಗಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಮತಯಾಚನೆ ಮಾಡಿದರು. ಕಾಂಗ್ರೆಸ್ ಮುಖಂಡ ಮುನಿನರಸಿಂಹಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀನಾರಾಯಣಪ್ಪ ಇದ್ದರು
ವಿಜಯಪುರ ಬಳಿಯ ಬೂದಿಗೆರೆಯಲ್ಲಿ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯಿಲಿ ಅವರ ಪರವಾಗಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಮತಯಾಚನೆ ಮಾಡಿದರು. ಕಾಂಗ್ರೆಸ್ ಮುಖಂಡ ಮುನಿನರಸಿಂಹಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀನಾರಾಯಣಪ್ಪ ಇದ್ದರು   

ವಿಜಯಪುರ: ‘ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿರುವುದರಿಂದ 28 ಕ್ಷೇತ್ರಗಳ ಪೈಕಿ 22 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ’ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಬೂದಿಗೆರೆ ಗ್ರಾಮದಲ್ಲಿ ಮೈತ್ರಿ ಅಭ್ಯರ್ಥಿ ಎಂ. ವೀರಪ್ಪ ಮೊಯಿಲಿ ಅವರ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿ ಅವರು ಮಾತನಾಡಿದರು.

‘ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಟ್ಟು, ಜಾತ್ಯತೀತ ಮನಸ್ಥಿತಿ ಹೊಂದಿರುವ ಪಕ್ಷಗಳು ಒಂದಾಗಿ ಚುನಾವಣೆ ಎದುರಿಸುತ್ತಿದ್ದೇವೆ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಬಾಗಿಲು ಬಂದ್ ಆಗಬೇಕಾದರೆ, ಕಾಂಗ್ರೆಸ್, ಜೆಡಿಎಸ್ ಪಕ್ಷದ ಕಾರ್ಯಕರ್ತರು ಒಂದಾಗಿ ಅವರ ದುರಾಡಳಿತದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು’ ಎಂದರು.

ADVERTISEMENT

‘ಮೈತ್ರಿ ಅಭ್ಯರ್ಥಿಗೆ ಹೆಚ್ಚಿನ ಮತಗಳು ಲಭಿಸುವಂತೆ ನೋಡಿಕೊಳ್ಳಬೇಕು. ಬಿಜೆಪಿಯವರ ಬೆರಗು ಮಾತುಗಳಿಗೆ ಮರುಳಾಗಬೇಡಿ’ ಎಂದು ಜನರಲ್ಲಿ ಮನವಿ ಮಾಡಿಕೊಂಡರು.

ಕಾಂಗ್ರೆಸ್ ಮುಖಂಡ ಮುನಿನರಸಿಂಹಯ್ಯ ಮಾತನಾಡಿ, 60 ವರ್ಷಗಳ ಕಾಲ ದೇಶವನ್ನು ಆಳ್ವಿಕೆ ಮಾಡಿರುವ ಕಾಂಗ್ರೆಸ್‌ನ ಉತ್ತಮ ಆಡಳಿತದ ಫಲವಾಗಿಯೇ ಇಂದು ಬಿಜೆಪಿಯವರು ಬಾಲ ತಿರುಗಿಸುತ್ತಿದ್ದಾರೆ. ದೇಶದಲ್ಲಿ ಐದು ವರ್ಷಗಳಲ್ಲಿ ಯಾವ ಸಾಧನೆಯನ್ನೂ ಮಾಡಲಿಕ್ಕೆ ಸಾಧ್ಯವಾಗಿಲ್ಲ ಎಂದರು.

60 ವರ್ಷಗಳ ಸುಭದ್ರವಾದ ಅಡಿಪಾಯದಿಂದಾಗಿ ಇಂದು ಅವರು ಅಧಿಕಾರಕ್ಕೆ ಬಂದಿದ್ದಾರೆ. ಐದು ವರ್ಷಗಳ ಕಾಲ ಅವರಿಗೂ ಅವಕಾಶ ಕೊಟ್ಟು ನೋಡೋಣ ಎಂದು ಜನರು ನೀಡಿದ ಅವಕಾಶಗಳನ್ನು ದುರುಪಯೋಗ ಮಾಡಿಕೊಂಡು ಮೋದಿ ಏಕಚಕ್ರಾಧಿಪತ್ಯ ನಡೆಸುತ್ತಿದ್ದಾರೆ. ಜನರು ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀನಾರಾಯಣಪ್ಪ ಮಾತನಾಡಿ, ಮೋದಿ ಅವರು 2014 ರ ಚುನಾವಣೆಯಲ್ಲಿ ನೀಡಿದ್ದ ಆಶ್ವಾಸನೆಗಳಂತೆ ಸ್ವಿಸ್ ಬ್ಯಾಂಕಿನಿಂದ ಹಣ ತಂದು ದೇಶದಲ್ಲಿನ ನಾಗರಿಕರ ಖಾತೆಗಳಿಗೆ ತಲಾ ₹15 ಲಕ್ಷ ಹಾಕುತ್ತೇನೆ ಎಂದಿದ್ದರು. ಆದರೆ ಯಾರಿಗೂ ಹಣ ಬಂದಿಲ್ಲ ಎಂದರು.

ಯುವಕರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸಿಕೊಡಲಿಲ್ಲ. ನೋಟ್ ರದ್ದು ಮಾಡಿ ಬಡವರು, ಮಧ್ಯಮ ವರ್ಗದವರ ಬದುಕಿಗೆ ತೊಡಕಾದರು, ದೇಶದ ಅಭಿವೃದ್ಧಿಗಿಂತ ಪಕ್ಷದ ಅಭಿವೃದ್ಧಿ ಮಾಡಿಕೊಂಡರು ಬಿಜೆಪಿಯವರು ಎಂದರು.

ಮೊಯಿಲಿ ಅವರು 10 ವರ್ಷಗಳಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಕೇಂದ್ರದಲ್ಲಿ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದಿರುವ ಸಿ.ಇ.ಟಿ ಯಿಂದಾಗಿ ಇಂದು ಬಡವರ ಮಕ್ಕಳೂ ಉತ್ತಮ ಶಿಕ್ಷಣ ಪಡೆಯಲಿಕ್ಕೆ ಸಾಧ್ಯವಾಗುತ್ತಿದೆ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಶ್ರೀನಿವಾಸಗೌಡ, ಜಿಲ್ಲಾ ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಚೌಡಪ್ಪನಹಳ್ಳಿ ಲೋಕೇಶ್, ಕೆ. ಲಕ್ಷ್ಮಣಗೌಡ, ಜೆಡಿಎಸ್ ಹೋಬಳಿ ಘಟಕದ ಅಧ್ಯಕ್ಷ ಮುನಿರಾಜು, ಕೆ.ಪಿ.ಸಿ.ಸಿ. ಶ್ರೀನಾಥ್‌ಗೌಡ, ಕಿಸಾನ್ ಖೇತ್ ಮಜ್ದೂರ್ ಕಾಂಗ್ರೆಸ್ ಅಧ್ಯಕ್ಷ ಭೈರೇಗೌಡ, ಜಯರಾಮೇಗೌಡ, ರಾಮಮೂರ್ತಿ, ಬಿದಲೂರು ಶಂಕರ್, ಲಕ್ಷ್ಮಣಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.