ADVERTISEMENT

ಸಾಕ್ಷಿ ಕೇಳಿದವರೆಲ್ಲಾ ದೇಶ ವಿರೋಧಿಗಳೇ?: ವೀರಪ್ಪಮೊಯಿಲಿ

ಸರ್ಜಿಕಲ್ ಸ್ಟ್ರೈಕ್ ಅನ್ನು ಬಂಡವಾಳ ಮಾಡಿಕೊಳ್ಳುತ್ತಿರುವ ನಡೆ ಸರಿಯಲ್ಲ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2019, 14:03 IST
Last Updated 30 ಮಾರ್ಚ್ 2019, 14:03 IST
ಚನ್ನರಾಯಪಟ್ಟಣ ಹೋಬಳಿ ನಲ್ಲೂರು ಗ್ರಾಮದಲ್ಲಿ ಸಂಸದ ವೀರಪ್ಪ ಮೊಯಿಲಿ ಮತಯಾಚನೆ ಮಾಡಿದರು
ಚನ್ನರಾಯಪಟ್ಟಣ ಹೋಬಳಿ ನಲ್ಲೂರು ಗ್ರಾಮದಲ್ಲಿ ಸಂಸದ ವೀರಪ್ಪ ಮೊಯಿಲಿ ಮತಯಾಚನೆ ಮಾಡಿದರು   

ವಿಜಯಪುರ: ‘ಜಿಲ್ಲೆಯ ಜನರ ನೆಮ್ಮದಿಗಾಗಿ ಶ್ರಮಿಸಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಆಯ್ಕೆ ಮಾಡಿ’ ಎಂದು ವಸತಿ ಸಚಿವ ಎಂ.ಟಿ.ಬಿ.ನಾಗರಾಜ್ ಹೇಳಿದರು.

ಚನ್ನರಾಯಪಟ್ಟಣ ಹೋಬಳಿ ನಲ್ಲೂರು ಗ್ರಾಮದಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯಿಲಿ ಅವರ ಪರವಾಗಿ ಮತಯಾಚನೆ ಮಾಡಿದ ಅವರು, ಜನರನ್ನು ಉದ್ದೇಶಿಸಿ ಮಾತನಾಡಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಇರಿಗೇನಹಳ್ಳಿ ಶ್ರೀನಿವಾಸ್ ಮಾತನಾಡಿ ‘ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸೂಚನೆಯನ್ನು ಪಕ್ಷದ ಕಾರ್ಯಕರ್ತರು ಪಾಲನೆ ಮಾಡುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಬೇಕು. ಚುನಾವಣೆಯ ಸಮಯದಲ್ಲಿ ಜಾತಿಯ ಬಗ್ಗೆ ಇಲ್ಲ ಸಲ್ಲದ ಸುದ್ದಿಗಳನ್ನು ಹರಡಿಸುತ್ತಾರೆ. ಅದ್ಯಾವುದಕ್ಕೂ ಕಿವಿಗೊಡದೆ ಪಕ್ಷದ ನಿಷ್ವಂಠತ ಕಾರ್ಯಕರ್ತರಾಗಿ ಕೆಲಸ ಮಾಡಿ’ ಎಂದರು.

ADVERTISEMENT

ಮಾಜಿ ಶಾಸಕ ಕೆ.ವೆಂಕಟಸ್ವಾಮಿ ಮಾತನಾಡಿ ‘ಮೈತ್ರಿ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ ಕೇಂದ್ರದಲ್ಲಿ ಜನಪರವಾದ ಸರ್ಕಾರವನ್ನು ಅಧಿಕಾರಕ್ಕೆ ತರುವ ಶಕ್ತಿ ಕಾರ್ಯಕರ್ತರಲ್ಲಿದೆ. ವಿರೋಧ ಪಕ್ಷಗಳ ಆರೋಪಗಳಿಗೆ ಕಿವಿಗೊಡಬೇಡಿ’ ಎಂದರು.‌

ಸಂಸದ ವೀರಪ್ಪಮೊಯಿಲಿ ಮಾತನಾಡಿ, ‘ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಯೋಧರ ಮೇಲಿನ ದಾಳಿಗೆ ಪ್ರತಿದಾಳಿಯಾಗಿ ನಮ್ಮ ಯೋಧರು ಪಾಕಿಸ್ತಾನದ ಬಾಲಾಕೋಟ್‌ಗೆ ನುಗ್ಗಿ ಉಗ್ರರ ಅಡಗುತಾಣಗಳನ್ನು ನಾಶ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿಕೆ ನೀಡಿದ್ದರು. ಪಾಕಿಸ್ತಾನ ಈ ದಾಳಿಯನ್ನು ತಿರಸ್ಕರಿಸಿ, ಒಬ್ಬ ಉಗ್ರನೂ ಸತ್ತಿಲ್ಲ, ದಾಳಿಯೇ ನಡೆದಿಲ್ಲ ಎಂದು ಹೇಳಿತ್ತು. ಹಾಗಾಗಿ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸಾಕ್ಷ್ಯಧಾರ ನೀಡುವಂತೆ ಕೇಳಿರುವುದು ನಿಜ. ಅದನ್ನೇ ಬಂಡವಾಳ ಮಾಡಿಕೊಂಡ ಮೋದಿ ಜನರ ಮನಸ್ಸುಗಳಲ್ಲಿ ವಿಷ ಬೀಜವನ್ನು ಬಿತ್ತಿ ಬಿಜೆಪಿ ಹೊರತು ಪಡಿಸಿ ಉಳಿದೆಲ್ಲಾ ಪಕ್ಷಗಳು ಪಾಕಿಸ್ತಾನದ ಸ್ನೇಹಿತರು ಎನ್ನುವಂತೆ ಬಿಂಬಿಸಲು ಹೊರಟಿದ್ದಾರೆ. ಇವರು ಮಾತ್ರವೇ ದೇಶ ಭಕ್ತರೇ? ನಾವೆಲ್ಲಾ ಯಾವ ದೇಶದಿಂದ ವಲಸೆ ಬಂದಿದ್ದೇವೆ’ ಎಂದು ಪ್ರಶ್ನಿಸಿದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಶಾಮಣ್ಣ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭಾರತಿ ಲಕ್ಷ್ಮಣಗೌಡ, ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಕಾಂಗ್ರೆಸ್ ಅಧ್ಯಕ್ಷ ಎನ್.ಅಪ್ಪಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಮಂಜುನಾಥ್, ಚೈತ್ರಾವೀರೇಗೌಡ, ವೆಂಕಟೇಶ್, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.