ದೇವನಹಳ್ಳಿ: ಅಪೂರ್ವ ಜನ ಬೆಂಬಲ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಬಿಜೆಪಿ ಗೆಲುವು ಸಾಧಿಸುವುದರಲ್ಲಿ ಅನುಮಾನವಿಲ್ಲ ಎಂದು ಪಕ್ಷದ ಜಿಲ್ಲಾ ಉಪಾಧ್ಯಕ್ಷ ಎಚ್. ಎಂ. ರವಿಕುಮಾರ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿನ ಬ್ಯಾಡರಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ಅಭ್ಯರ್ಥಿ ಬಿ.ಎನ್. ಬಚ್ಚೇಗೌಡ ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಕಳೆದ ಬಾರಿ ನಡೆದ ಚುನಾವಣಾ ವೈಖರಿ ಬೇರೆ, ಪ್ರಸ್ತುತ ಚುನಾವಣೆಯ ಸ್ಥಿತಿಗತಿಯೇ ಬೇರೆ ರೀತಿ ಇದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಐದು ವರ್ಷಗಳ ಜನಪರ ಅಭಿವೃದ್ಧಿ ಕೆಲಸವನ್ನು ನೋಡಿ ಮತದಾರರು ಮತ ಚಲಾಯಿಸಲಿದ್ದಾರೆ. ಅದನ್ನೆ ಮತದಾರರಿಗೆ ಮನವರಿಕೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಕಳೆದ ಬಾರಿ ನಡೆದ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆಯಾಗಿತ್ತು, ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲೇಬೇಕು ಎಂಬ ಏಕೈಕ ಹಠದಿಂದ ಉದ್ದೇಶಪೂರ್ವಕವಾಗಿ ಎಚ್.ಡಿ. ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಮತದಾರರು ಅವರನ್ನು ತಿರಸ್ಕರಿಸಿ ಮೂರನೇ ಸ್ಥಾನಕ್ಕೆ ತಳ್ಳಿದರು. ಬಿಜೆಪಿ ಕೇವಲ ಹತ್ತು ಸಾವಿರ ಮತಗಳ ಅಂತರದಿಂದ ಸೋಲುವಂತಾಯಿತು ಎಂದು ವಿಶ್ಲೇಷಿಸಿದರು.
ಈ ಬಾರಿ ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷ ನೇರ ಹಣಾಹಣಿಯಾದರೂ ಪ್ರಾದೇಶಿಕ ಪಕ್ಷಗಳಿಗೆ ನೆಲೆ ಇಲ್ಲ. ಕಳೆದ ಆರು ತಿಂಗಳುಗಳಿಂದ ಬಿಜೆಪಿ ಕಾರ್ಯಕರ್ತರು ಬೂತ್ ಮಟ್ಟದಿಂದ ಸಂಘಟನಾತ್ಮಕ ಕೆಲಸ ಮಾಡಿರುವುದು ಪಕ್ಷ ಗೆಲುವು ಸಾಧಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.