ADVERTISEMENT

ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಬಿಜೆಪಿ ಬೆಂಬಲಿಸಿ: ಎ. ನಾರಾಯಣಸ್ವಾಮಿ

ಹೊಸದುರ್ಗ: ಕಾರ್ಯಕರ್ತರ ಸಭೆ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2019, 15:09 IST
Last Updated 2 ಏಪ್ರಿಲ್ 2019, 15:09 IST
ಹೊಸದುರ್ಗದಲ್ಲಿ ಮಂಗಳವಾರ ನಡೆದ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಎ. ನಾರಾಯಣಸ್ವಾಮಿ ಮಾತನಾಡಿದರು
ಹೊಸದುರ್ಗದಲ್ಲಿ ಮಂಗಳವಾರ ನಡೆದ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಎ. ನಾರಾಯಣಸ್ವಾಮಿ ಮಾತನಾಡಿದರು   

ಹೊಸದುರ್ಗ: ಭ್ರಷ್ಟಾಚಾರ ರಹಿತ, ಸ್ವಚ್ಛ ಆಡಳಿತಕ್ಕೆ ಮತದಾರರು ಮತ್ತೊಮ್ಮೆ ಬಿಜೆಪಿ ಬೆಂಬಲಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ಎ. ನಾರಾಯಣಸ್ವಾಮಿ ಮನವಿ ಮಾಡಿದರು.

ಪಟ್ಟಣದಲ್ಲಿ ಮಂಗಳವಾರ ನಡೆದ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಸಂಘಪರಿವಾರದ ಕಾರ್ಯಕರ್ತನಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ನಮ್ಮ ದೇಶವನ್ನು ವಿಶ್ವಕ್ಕೆ ಪರಿಚಯಿಸಿದ್ದಾರೆ. ಒಂದೇ ಒಂದು ಭ್ರಷ್ಟಾಚಾರ ಪ್ರಕರಣದಲ್ಲಿ ಅವರು ಭಾಗಿಯಾಗಿಲ್ಲ. ಅಭಿವೃದ್ಧಿಗೆ ಪ್ರಾಮಾಣಿಕತೆಯಿಂದ ದುಡಿದಿದ್ದಾರೆ. ಅವರ ಸಾಧನೆಗೆ ವಿಶ್ವದ ಹಲವು ರಾಷ್ಟ್ರಗಳ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ, ಅವರ ಈ ಬೆಳವಣಿಗೆ ಸಹಿಸಿಕೊಳ್ಳದ ವಿರೋಧ ಪಕ್ಷದವರು ವಿನಾ ಕಾರಣ ದೂರುತ್ತಿದ್ದಾರೆ. ಇದಕ್ಕೆಲ್ಲಾ ಮತದಾರರು ಕಿವಿಗೊಡಬಾರದು ಎಂದು ತಿಳಿಸಿದರು.

ADVERTISEMENT

‘ಬಡವರು, ರೈತರು, ಹಿಂದುಳಿದ ವರ್ಗ ಒಳಗೊಂಡಂತೆ ಎಲ್ಲರ ಏಳಿಗೆಗೆ ಉಜ್ವಲ ಯೋಜನೆ, ಮುದ್ರಾ ಯೋಜನೆ, ಆಯುಷ್ಮಾನ್‌ ಭಾರತ್‌, ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕೇಂದ್ರ ಸರ್ಕಾರದ ಇಂತಹ ಜನಪರ ಯೋಜನೆಗಳನ್ನು ತಾಲ್ಲೂಕಿನ ಪ್ರತಿ ಮನೆ ಬಾಗಿಲಿಗೆ ತಲುಪಿಸಬೇಕು. ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಕಾರ್ಯಕರ್ತರು ಹಗಲಿರುಳೂ ಶ್ರಮಿಸಬೇಕು’ ಎಂದು ಮನವಿ ಮಾಡಿದರು.

ಶಾಸಕ ಗೂಳಿಹಟ್ಟಿ ಡಿ.ಶೇಖರ್‌, ‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ನಮ್ಮ ತಾಲ್ಲೂಕಿನಿಂದ ಒಂದು ಲಕ್ಷದ 20 ಸಾವಿರ ಮತ ಹಾಕಿಸುತ್ತೇವೆ ಎಂದು ಮಾತು ಕೊಟ್ಟಿದ್ದೇವೆ. ಈ ಮಾತನ್ನು ಈಡೇರಿಸಬೇಕಾದರೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೈಜೋಡಿಸಬೇಕು’ ಮನವಿ ಮಾಡಿದರು.

ಬಿಜೆಪಿ ಮುಖಂಡ ಎಸ್‌.ಲಿಂಗಮೂರ್ತಿ, ‘ದೇಶದ ಏಕತೆ ಹಾಗೂ ಭದ್ರತೆ ಗಟ್ಟಿಯಾಗಬೇಕಾದರೆ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಬೇಕಿದೆ. ಅದಕ್ಕಾಗಿ ತಾಲ್ಲೂಕಿನ ಪ್ರತಿ ಹಳ್ಳಿಯಲ್ಲಿಯೂ ಬಿಜೆಪಿ ಅಭ್ಯರ್ಥಿಗೆ ಹೆಚ್ಚು ಮತ ಹಾಕಿಸಲು ಯುವಕರು ಕಂಕಣಬದ್ಧರಾಗಬೇಕು’ ಎಂದು ಮನವಿ ಮಾಡಿದರು.

ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಲಕ್ಷ್ಮಣ್‌, ಜಿಲ್ಲಾ ಪಂಚಾಯಿತಿ ಸದಸ್ಯ ಅಜ್ಜಪ್ಪ, ಮುಖಂಡರಾದ ಡಿ.ಗುರುಸ್ವಾಮಿ, ಹನುಮಂತಪ್ಪ, ಮಲ್ಲಿಕಾರ್ಜುನ್‌, ಡಿ.ಪರುಶುರಾಮಪ್ಪ, ಎಸ್‌.ಎಸ್‌.ಕಲ್ಮಠ್‌, ಕೊಂಡಾಪುರದ ಮಂಜುನಾಥ್‌, ಕೃಷ್ಣಮೂರ್ತಿ, ಎಂ.ಲಕ್ಷ್ಮಣ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.