ADVERTISEMENT

ಧಾರವಾಡ ಕ್ಷೇತ್ರ: ಸಂಜೆಯೊಳಗೆ ಟಿಕೆಟ್ ಅಭ್ಯರ್ಥಿ ಆಯ್ಕೆ- ಸಿದ್ದರಾಮಯ್ಯ

ಕಾಂಗ್ರೆಸ್ ಅಭ್ಯರ್ಥಿ ಗೊಂದಲ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2019, 9:33 IST
Last Updated 2 ಏಪ್ರಿಲ್ 2019, 9:33 IST

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಹೈಕಮಾಂಡ್‌ಗೆ ನಾವು ನಮ್ಮ ಅಭಿಪ್ರಾಯ ತಿಳಿಸಿದ್ದು, ಸಂಜೆಯೊಳಗೆ ಅಭ್ಯರ್ಥಿ ಘೋಷಣೆಯಾಗಲಿದೆ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.

ಹುಬ್ಬಳ್ಳಿಯ ಡೆನ್ನಿಸನ್ಸ್ ಹೋಟೆಲ್‌ನಲ್ಲಿ ಮುಖಂಡರ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದು, ಟಿಕೆಟ್‌ಗೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲ ನಿವಾರಣೆಯಾಗಲಿದೆ ಎಂದು ಅವರು ಹೇಳಿದರು.

ಟಿಕೆಟ್ ಆಕಾಂಕ್ಷಿಗಳಾದ ಮಾಜಿ ಸಚಿವ ವಿನಯ ಕುಲಕರ್ಣಿ, ಮಾಜಿ ಸಂಸದ ಐ.ಜಿ. ಸನದಿ ಅವರ ಪುತ್ರ ಶಾಕಿರ್ ಸನದಿ ಅವರೊಂದಿಗೆ ಸಿದ್ದರಾಮಯ್ಯ ಚರ್ಚೆ ನಡೆಸಿದರು.

ADVERTISEMENT

ಜನರ ಒತ್ತಾಯಕ್ಕೆ ಮಣಿದು ರಾಹುಲ್ ವಯನಾಡಿನಲ್ಲಿ ಸ್ಪರ್ಧೆ: ಅಮೇಠಿಯಲ್ಲಿ ಸೋಲುವ ಭಯದಿಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಯನಾಡಿನಿಂದ ಸ್ಪರ್ಧಿಸುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, ಜನರ ಒತ್ತಾಯದ ಮೇರೆಗೆ ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ. ರಾಜ್ಯದಲ್ಲಿ 20 ಹಾಗೂ ದೇಶದಲ್ಲಿ 300ಕ್ಕಿಂತ ಅಧಿಕ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತರ ಅಸಮಾಧಾನ: ಶಾಸಕ ಪ್ರಸಾದ್ ಅಬ್ಬಯ್ಯ ಅವರ ಎದುರು ಅಲ್ಪಸಂಖ್ಯಾತ ವಿಭಾಗದ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಪಸಂಖ್ಯಾತರನ್ನು ಎಲ್ಲ ರಾಷ್ಟ್ರೀಯ ಪಕ್ಷಗಳು ತುಳಿಯುತ್ತಿವೆ. ರಾಜಕೀಯವಾಗಿ ಬೆಳೆಯಲು ಅವಕಾಶ ನೀಡುತ್ತಿಲ್ಲ. ಧಾರವಾಡ ಕ್ಷೇತ್ರದಲ್ಲಿ ಹಲವು ಬಾರಿ ಲಿಂಗಾಯದ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಈ ಬಾರಿ ಅಲ್ಪಸಂಖ್ಯಾತರಿಗೆ ನೀಡಬೇಕು, ಇಲ್ಲವಾದರೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.