ಅನಿಲ್ ಬಲೂನಿ
(ಬಿಜೆಪಿ)
ಉತ್ತರಾಖಂಡದ ಪ್ರತಿಷ್ಠಿತ ಲೋಕಸಭಾ ಕ್ಷೇತ್ರಗಳಲ್ಲೊಂದಾದ ಗಢವಾಲ್ನಿಂದ ಬಿಜೆಪಿಯು ಈ ಬಾರಿ ಅನಿಲ್ ಬಲೂನಿ ಅವರನ್ನು ಕಣಕ್ಕಿಳಿಸಿದೆ. ಬಿಜೆಪಿಯ ವರಿಷ್ಠ ನಾಯಕರಿಗೆ ಆಪ್ತರಾಗಿರುವ ಅನಿಲ್ ಅವರು ದೆಹಲಿಯಲ್ಲಿರುವ ಪಕ್ಷದ ಮುಖ್ಯಕಚೇರಿಯಲ್ಲಿ ಮಾಧ್ಯಮ ಸಂಯೋಜನೆಯ ಉಸ್ತುವಾರಿಯಾಗಿಯೂ ಕಾರ್ಯನಿರ್ವಹಿಸಿದ್ದರು. 2019ರಲ್ಲಿ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿಯ ತೀರತ್ ಸಿಂಗ್ ರಾವತ್ ಅವರು 3,02,669 ಮತಗಳ ಅಂತರದಿಂದ ಕಾಂಗ್ರೆಸ್ನ ಮನೀಶ್ ಖಂಡೂರಿ ಅವರನ್ನು ಸೋಲಿಸಿದ್ದರು. ಉತ್ತರಖಂಡದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅನಿಲ್ ಅವರು ಇದೇ ಮೊದಲ ಬಾರಿ ಲೋಕಸಭಾ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. 2014ರ ಚುನಾವಣೆಯಲ್ಲಿ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಭುವನ್ ಚಂದ್ರ ಖಂಡೂರಿ ಅವರು ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ತಮ್ಮದಾಗಿಸಿಕೊಂಡಿದ್ದರು.
....
ಗಣೇಶ್ ಗೋದಿಯಾಲ್
(ಕಾಂಗ್ರೆಸ್)
ಗಢವಾಲ್ ಕ್ಷೇತ್ರದಲ್ಲಿ ಅನಿಲ್ ಬಲೂನಿ ಅವರನ್ನು ಮಣಿಸಲು ಕಾಂಗ್ರೆಸ್, ಪಕ್ಷದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಗಣೇಶ್ ಗೋದಿಯಾಲ್ ಅವರನ್ನು ಕಣಕ್ಕಿಳಿಸಿದೆ. ಪಕ್ಷ ಸಂಘಟನೆಯ ಮೂಲಕ ಕ್ಷೇತ್ರದ ಜನರಿಗೆ ಚಿರಪರಿಚಿತರಾಗಿರುವ ಇವರು ಸ್ಥಳೀಯವಾಗಿಯೂ ಪ್ರಭಾವಿ ಮುಖಂಡರಾಗಿದ್ದಾರೆ. ಈ ಬಾರಿಯಾದರೂ ಈ ಕ್ಷೇತ್ರವನ್ನು ಮತ್ತೆ ಪಕ್ಷದ ತೆಕ್ಕೆಗೆ ಪಡೆದುಕೊಳ್ಳಬೇಕೆಂದು ಕಾಂಗ್ರೆಸ್ ಮುಖಂಡರು ಅವಿರತ ಶ್ರಮಿಸುತ್ತಿದ್ದಾರೆ. ಗಢವಾಲ್ ಪ್ರದೇಶದ ಹಲವು ಮಂದಿ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಈ ಕಾರಣಕ್ಕೆ ಗಣೇಶ್ ಅವರು ‘ಅಗ್ನಿವೀರ್’ ಯೋಜನೆಯನ್ನು ಪ್ರಮುಖ ಚುನಾವಣಾ ವಿಚಾರವಾಗಿ ಬಳಸಿಕೊಳ್ಳುತ್ತಿದ್ದಾರೆ. ಜೊತೆಗೆ ಕಾರ್ಮಿಕರ ವಲಸೆ, ನಿರುದ್ಯೋಗ ವಿಷಯಗಳನ್ನು ಮುನ್ನೆಲೆಗೆ ತರುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿರಿಸುತ್ತಿದ್ದಾರೆ. 2009ರ ಚುನಾವಣೆಯಲ್ಲಿ ಕಾಂಗ್ರೆಸ್ನ ಸತ್ಪಾಲ್ ಮಹಾರಾಜ್ ಅವರು ಇಲ್ಲಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.