ಮನೋಜ್ ತಿವಾರಿ
(ಬಿಜೆಪಿ)
ರಾಷ್ಟ್ರ ರಾಜಧಾನಿಯ ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರದಲ್ಲಿ ಎರಡು ಬಾರಿ ಗೆಲುವಿನ ನಗೆ ಬೀರಿರುವ ಮನೋಜ್ ತಿವಾರಿ ಅವರನ್ನೇ ಬಿಜೆಪಿಯು ಮೂರನೇ ಬಾರಿಯೂ ಸ್ಪರ್ಧೆಗಿಳಿಸಿದೆ. 2019ರ ಚುನಾವಣೆಯಲ್ಲಿ ಮನೋಜ್ ಅವರು 3,66,102 ಮತಗಳ ಅಂತರದಿಂದ ಕಾಂಗ್ರೆಸ್ನ ಶೀಲಾ ದೀಕ್ಷಿತ್ ಅವರನ್ನು ಸೋಲಿಸಿದ್ದರು. ಭೋಜ್ಪುರಿ ಚಿತ್ರರಂಗದಲ್ಲಿ ನಟ ಹಾಗೂ ಗಾಯಕರಾಗಿ ಹೆಸರು ಮಾಡಿದ್ದ ಮನೋಜ್, 2017ರಲ್ಲಿ ನಡೆದಿದ್ದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಇವರು ಬಿಜೆಪಿ ದೆಹಲಿ ಘಟಕದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. 2009ರ ಲೋಕಸಭಾ ಚುನಾವಣೆಯಲ್ಲಿ ಮನೋಜ್ ಅವರು ಉತ್ತರಪ್ರದೇಶದ ಗೋರಖ್ಪುರ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಟಿಕೆಟ್ನಿಂದ ಸ್ಪರ್ಧಿಸಿ, ಬಿಜೆಪಿಯ ಯೋಗಿ ಆದಿತ್ಯನಾಥ್ ಎದುರು ಪರಾಭವಗೊಂಡಿದ್ದರು.
.............
ಕನ್ಹಯ್ಯ ಕುಮಾರ್
(ಕಾಂಗ್ರೆಸ್)
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಟೀಕಾಕಾರರಾಗಿ ಗಮನ ಸೆಳೆದಿರುವ ಯುವ ಮುಖಂಡ ಕನ್ಹಯ್ಯ ಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷವು ಈಶಾನ್ಯ ದೆಹಲಿ ಕ್ಷೇತ್ರದಿಂದ ಅಖಾಡಕ್ಕಿಳಿಸಿದೆ. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಮುನ್ನಲೆಗೆ ಬಂದಿರುವ ಕನ್ಹಯ್ಯ ಅವರು, ಆಲ್ ಇಂಡಿಯಾ ಸ್ಟೂಡೆಂಟ್ ಫೆಡರೇಷನ್ (ಎಐಎಸ್ಎಫ್) ಮುಖಂಡರಾಗಿಯೂ ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಬಿಹಾರದ ಬೆಗುಸರಾಯ್ ಕ್ಷೇತ್ರದಿಂದ ಸಿಪಿಐನಿಂದ ಸ್ಪರ್ಧಿಸಿ ಪರಾಭಗೊಂಡಿದ್ದರು. ಬಿಜೆಪಿಯ ಹಿರಿಯ ಮುಖಂಡ ಗಿರಿರಾಜ್ ಸಿಂಗ್ ವಿರುದ್ಧ ಸ್ಪರ್ಧಿಸಿದ್ದ ಕನ್ಹಯ್ಯ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಅವರು 2,69,976 ಮತಗಳನ್ನು ಪಡೆದಿದ್ದರು. 2021ರಲ್ಲಿ ಇವರು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.