ಗಂಗಾವತಿ : ಏ.12 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಗರದಲ್ಲಿ ನಡೆಯುವ ಬಹಿರಂಗ ಸಮಾವೇಶದ ಸ್ಥಳಕ್ಕೆ ಬಳ್ಳಾರಿ ವಲಯದ ಐಜಿ ನಂಜುಡಸ್ವಾಮಿ ಸೋಮವಾರ ಭೇಟಿ ನೀಡಿದರು.
ಮೋದಿಯವರು ನಗರಕ್ಕೆ ಆಗಮಿಸಿ ಬಹಿರಂಗ ಸಭೆಯನ್ನು ನಡೆಸುವ ಹಿನ್ನಲೆಯಲ್ಲಿ ಬೃಹತ್ ವೇದಿಕೆಯನ್ನು ಸಿದ್ಧ ಪಡಿಸಲಾಗುತ್ತಿದೆ. ಅದಕ್ಕೆ ಸೂಕ್ತ ಭದ್ರತೆ ನೀಡುವುದು ಪೊಲೀಸ್ ಇಲಾಖೆ ಕರ್ತವ್ಯ. ಸೂಕ್ತ ತಯಾರಿಯನ್ನು ಮಾಡಿಕೊಳ್ಳಲಾಗುತ್ತಿದೆ. ಅಲ್ಲದೆ ಕಾರ್ಯಕ್ರಮಕ್ಕೆ ರಾಯಚೂರು, ಕೊಪ್ಪಳ, ಬಳ್ಳಾರಿ ಸೇರಿದಂತೆ ನಾನಾ ಜಿಲ್ಲೆಗಳಿಂದ ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದೆ. ಅವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪಾರ್ಕಿಂಗ್ ಹಾಗೂ ಸಂಚಾರಕ್ಕೆ ಸ್ಥಳಗಳನ್ನು ವಿಭಾಗಿಸಲಾಗುತ್ತಿದೆ ಎಂದರು.
ವೇದಿಕೆ ಕಾರ್ಯಕ್ರಮ ನಡೆಸುವ ಸ್ಥಳದ ಸುತ್ತಮುತ್ತ ಇರುವ ಕ್ರೀಡಾಂಗಣ, ಕೃಷಿ ವಿಜ್ಞಾನ ಕೇಂದ್ರ ಸೇರಿದಂತೆ ಪಕ್ಕದಲ್ಲಿಯೇ ಇರುವ ಪ್ರದೇಶಗಳಿಗೆ ಭೇಟಿ ನೀಡಿ ಸೂಕ್ಷ್ಮವಾಗಿ ಗಮನ ಹರಿಸಿ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಜಿಲ್ಲಾ ವರಿಷ್ಠಾಧಿಕಾರಿ ರೇಣುಕಾ ಸುಕುಮಾರನ್, ಡಿವೈಎಸ್ಪಿ ಬಿ.ಪಿ. ಚಂದ್ರಶೇಖರ, ಸಿಪಿಐ ದೀಪಕ್ ಬೂಸರೆಡ್ಡಿ, ನಗರಠಾಣೆ ಪಿಐ ಉದಯರವಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.