ನವದೆಹಲಿ (ಪಿಟಿಐ): ಇಡೀ ದೇಶವೇ ಕುತೂಹಲದಿಂದ ಎದುರು ನೋಡುತ್ತಿದ್ದ ಹದಿನಾರನೇ ಲೋಕಸಭಾ ಚುನಾವಣೆಗೆ ಒಂಬತ್ತು ಹಂತಗಳಲ್ಲಿ ನಡೆದ ಮತದಾನದ ಎಣಿಕೆಯ ಕಾರ್ಯವು ಶುಕ್ರವಾರ ಬೆಳಿಗ್ಗೆ 8 ಗಂಟೆಯಿಂದ ದೇಶದಾದ್ಯಂತ ಆರಂಭಗೊಂಡಿದೆ.ಇನ್ನು ಕೆಲವೇ ಗಂಟೆಗಳ ಅವಧಿಯಲ್ಲಿ ದೇಶದ ಅಧಿಕಾರದ ಚುಕ್ಕಾಣಿ ಹಿಡಿಯುವವರು ಯಾರು ಎಂಬುದು ಸ್ಪಷ್ಟಗೊಳ್ಳಲಿದೆ.
ದೇಶದಾದ್ಯಂತ 989 ಕೇಂದ್ರಗಳಲ್ಲಿ ಬೆಳಿಗ್ಗೆ 8ಕ್ಕೆ ಮತ ಎಣಿಕೆ ಆರಂಭಗೊಂಡಿದ್ದು, ಬಹುತೇಕ ಮಧ್ಯಾಹ್ನದ ಹೊತ್ತಿಗೆ ಎಲ್ಲಾ ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ. ಸಂಜೆ 5ರ ಹೊತ್ತಿಗೆ ಸಂಪೂರ್ಣ ಚಿತ್ರಣ ಲಭಿಸಲಿದೆ.
543 ಕ್ಷೇತ್ರಗಳಲ್ಲಿ 8251 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಬಹುತೇಕ ಮತಗಟ್ಟೆ ಸಮೀಪ ಸಮೀಕ್ಷೆಗಳು ಬಿಜೆಪಿ ಅತ್ಯಧಿಕ ಸ್ಥಾನಗಳನ್ನು ಗಳಿಸಲಿದೆ ಎಂದು ಅಂದಾಜಿಸಿವೆ.
ಮೊದಲಿಗೆ ಅಂಚೆ ಪತ್ರದ ಎಣಿಕೆ: ಚುನಾವಣಾ ಆಯೋಗದ ನಿರ್ದೇಶನದಂತೆ ಮೊದಲಿಗೆ ಅಂಚೆ ಮತಪತ್ರಗಳ ಎಣಿಕೆ ನಡೆದು ನಂತರ ವಿದ್ಯುನ್ಮಾನ ಮತಯಂತ್ರಗಳಲ್ಲಿ ದಾಖಲಾಗಿರುವ ಮತಗಳ ಎಣಿಕೆ ಕಾರ್ಯ ಆರಂಭವಾಗಲಿದೆ.
ಮತಯಂತ್ರದ ದತ್ತಾಂಶ ಸಂಗ್ರಹ ಕೋಶವನ್ನು ಎಣಿಕೆ ಕೇಂದ್ರದ ಹಿರಿಯ ಅಧಿಕಾರಿಗಳು, ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ತೆರೆದು ಎಣಿಕೆ ಮಾಡಲಾಗುತ್ತದೆ.
ಚುನಾವಣಾ ಫಲಿತಾಂಶ ಸಂಪೂರ್ಣವಾಗಿ ಹೊರಬಿದ್ದ ಬಳಿಕ ಚುನಾವಣಾ ಆಯೋಗವು ಜಯಗಳಿಸಿದ ಅಭ್ಯರ್ಥಿಗಳ ಪಟ್ಟಿಯ ಅಧಿಸೂಚನೆ ಹೊರಡಿಸಲಿದೆ. ಇದು ನಂತರ 16ನೇ ಲೋಕಸಭೆ ಅಸ್ತಿತ್ವಗೊಳ್ಳಲು ಚಾಲನೆ ನೀಡಲಿದೆ.
2014ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ 66.38ರಷ್ಟು ಮತದಾನ ನಡೆದಿದ್ದು, ಇದು ಸಾರ್ವಕಾಲಿಕ ದಾಖಲೆ ಆಗಿದೆ. ಈ ಸಾರಿ 80.14 ಕೋಟಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.