ನವದೆಹಲಿ (ಪಿಟಿಐ): ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಯಾರು ಸ್ಪರ್ಧಿಸಬೇಕು ಎಂಬ ಬಗ್ಗೆ ಉಂಟಾಗಿರುವ ವಿವಾದ ಶನಿವಾರ ನಡೆದ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪ್ರತಿಧ್ವನಿಸಿತು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖಂಡರ ನಡುವೆ ವಾಗ್ವಾದ ನಡೆಯಿತು.ವಾರಾಣಸಿ ಕ್ಷೇತ್ರದಲ್ಲಿ ಹಿರಿಯ ಮುಖಂಡ ಮುರಳಿ ಮನೋಹರ ಜೋಶಿ ಅವರ ಜಾಗದಲ್ಲಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಸ್ಪರ್ಧಿಸುತ್ತಾರೆಯೇ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ಕೆಲವು ಸದಸ್ಯರು ಒತ್ತಾಯಿಸಿದರು ಎಂದು ಮೂಲಗಳು ಹೇಳಿವೆ.ಸ್ಪಷ್ಟನೆ ಕೇಳಿದವರಲ್ಲಿ ಸ್ವತಃ ಜೋಶಿ ಹಾಗೂ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರು ಸೇರಿದ್ದಾರೆ ಎಂದು ಹೇಳಲಾಗಿದೆ.
‘ಕಳಂಕಿತ' ನಾಯಕರು ಎನ್ಡಿಎಗೆ ಸೇರ್ಪಡೆಗೊಳ್ಳುವ ವಿಚಾರವನ್ನೂ ಸುಷ್ಮಾ ಅವರು ಸಭೆಯಲ್ಲಿ ಪ್ರಸ್ತಾಪಿಸಿದರು ಎಂದೂ ಮೂಲಗಳು ಹೇಳಿದೆ. ತಾವು ಪ್ರತಿನಿಧಿಸುವ ವಾರಾಣಸಿಯಿಂದ ಮೋದಿ ಅವರೇ ಸ್ಪರ್ಧಿಸಬೇಕು ಎಂದು ಪಕ್ಷದ ಕೆಲವರು ಒತ್ತಡ ಹಾಕುತ್ತಿರುವ ಬಗ್ಗೆ ಜೋಶಿ ಅವರು ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ.
ನರೇಂದ್ರ ಮೋದಿ ಅವರು ವಾರಾಣಸಿಯಿಂದಲೇ ಸ್ಪರ್ಧಿಸಬೇಕೆಂದು ಶುಕ್ರವಾರ ಪಕ್ಷದ ಕಾರ್ಯಕರ್ತರು ಸಹಿ ಸಂಗ್ರಹಣಾ ಅಭಿಯಾನ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.