
ಪಟ್ನಾ: ಕಾರಾಕಾಟ್ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭೋಜ್ಪುರಿ ನಟ ಪವನ್ ಸಿಂಗ್ ಅವರನ್ನು ಬಿಹಾರ ಬಿಜೆಪಿ ರಾಜ್ಯ ಘಟಕವು ಬುಧವಾರ ಪಕ್ಷದಿಂದ ಉಚ್ಚಾಟನೆ ಮಾಡಿದೆ.
ಬಿಜೆಪಿ ಸದಸ್ಯರಾದ ಪವನ್ ಸಿಂಗ್ ಅವರಿಗೆ ಪಕ್ಷವು ಮೊದಲ ಪಟ್ಟಿಯಲ್ಲೇ ಪಶ್ಚಿಮ ಬಂಗಾಳದ ಆಸನ್ಸೋಲ್ ಕ್ಷೇತ್ರದಿಂದ ಟಿಕೆಟ್ ಘೋಷಿಸಿತ್ತು. ಆದರೆ, ಪವನ್ ಸಿಂಗ್ ಸ್ಪರ್ಧಿಸಲು ನಿರಾಕರಿಸಿದ್ದರು. ನಂತರ ಪವನ್ ಸಿಂಗ್ ಕಾರಾಕಾಟ್ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಮೇ 9ರಂದು ನಾಮಪತ್ರ ಸಲ್ಲಿಸಿದ್ದರು.
ಕಾರಾಕಾಟ್ ಕ್ಷೇತ್ರದ ಎನ್ಡಿಎ ಅಭ್ಯರ್ಥಿಯಾಗಿ ರಾಷ್ಟ್ರೀಯ ಲೋಕ ಮೋರ್ಚಾ ಅಧ್ಯಕ್ಷ ಉಪೇಂದ್ರ ಕುಶ್ವಾಹ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಎನ್ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧಿಸದಂತೆ ಪವನ್ ಸಿಂಗ್ ಅವರಿಗೆ ಬಿಜೆಪಿ ಹಿರಿಯ ಮುಖಂಡರು ಸೂಚಿಸಿದ್ದರು. ಪವನ್ ಸಿಂಗ್ ಅವರ ತಾಯಿ ಪ್ರತಿಮಾ ಕೂಡ ಪಕ್ಷೇತರ ಅಭ್ಯರ್ಥಿಯಾಗಿ ಕಾರಾಕಾಟ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
‘ಬಿಜೆಪಿಯ ತೀರ್ಮಾನಕ್ಕೆ ವಿರುದ್ಧವಾಗಿ ಕಾರಾಕಾಟ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪವನ್ ಸಿಂಗ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇದನ್ನು ಪಕ್ಷ ವಿರೋಧಿ ಎಂದು ಪರಿಗಣಿಸಲಾಗಿದೆ. ಬಿಹಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಾಮ್ರಾಟ್ ಚೌಧರಿ ಅವರು ಪವನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದು ಪಕ್ಷದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಜೂನ್ 1ರಂದು ಕಾರಾಕಾಟ್ ಕ್ಷೇತ್ರದ ಮತದಾನ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.