ADVERTISEMENT

ಭಾರತ ಮಾತೆ ನೋವಿನಲ್ಲಿದ್ದಾಳೆ: ಇಂಡಿಯಾ ರ್‍ಯಾಲಿಯಲ್ಲಿ ಕೇಜ್ರಿವಾಲ್ ಪತ್ನಿ ಸುನೀತಾ

ಪಿಟಿಐ
Published 31 ಮಾರ್ಚ್ 2024, 9:14 IST
Last Updated 31 ಮಾರ್ಚ್ 2024, 9:14 IST
<div class="paragraphs"><p>ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಪತ್ನಿ ಸುನೀತಾ ಕೇಜ್ರಿವಾಲ್‌</p></div>

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಪತ್ನಿ ಸುನೀತಾ ಕೇಜ್ರಿವಾಲ್‌

   

ಪಿಟಿಐ ಚಿತ್ರ

ನವದೆಹಲಿ: 'ಭಾರತ ಮಾತೆ ನೋವಿನಲ್ಲಿದ್ದಾಳೆ' ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಪತ್ನಿ ಸುನೀತಾ ಭಾನುವಾರ ಹೇಳಿದ್ದಾರೆ.

ADVERTISEMENT

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೇಜ್ರಿವಾಲ್‌ ಅವರನ್ನು ಬಂಧಿಸಿರುವುದನ್ನು ಖಂಡಿಸಿ, ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ' ದೆಹಲಿಯ ರಾಮಲೀಲಾ ಮೈದಾನದಲ್ಲಿ 'ಲೋಕತಂತ್ರ ಬಚಾವೋ' (ಪ್ರಜಾಪ್ರಭುತ್ವ ಉಳಿಸಿ) ರ್‍ಯಾಲಿ ನಡೆಸುತ್ತಿದೆ.

ರ್‍ಯಾಲಿಯಲ್ಲಿ ಪಾಲ್ಗೊಂಡ ಸುನೀತಾ, 'ದೆಹಲಿ ಜನರು ಕಳೆದ 75 ವರ್ಷಗಳಿಂದ ಅನ್ಯಾಯಕ್ಕೊಳಗಾಗಿದ್ದಾರೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೇರಿದರೆ, ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ ನೀಡಲಾಗುವುದು' ಎಂದಿದ್ದಾರೆ.

ದೆಹಲಿಯ ಎಎಪಿ ಸರ್ಕಾರ ಸದ್ಯ ಹಿಂಪಡೆದಿರುವ 'ಅಬಕಾರಿ ನೀತಿ' ಜಾರಿ ವೇಳೆ ನಡೆದಿದೆ ಎನ್ನಲಾದ, ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದೆ. ಈ ಕುರಿತು ಮಾತನಾಡಿದ ಸುನೀತಾ, 'ಭಾರತ ಮಾತೆ ನೋವಿನಲ್ಲಿದ್ದಾಳೆ, ಇಂತಹ ದೌರ್ಜನ್ಯಗಳು ಕೆಲಸಕ್ಕೆ ಬರುವುದಿಲ್ಲ. ನನ್ನ ಪತಿಗೆ ಸಾಕಷ್ಟು ಜನರ ಆಶೀರ್ವಾದವಿದೆ' ಎಂದಿದ್ದಾರೆ.

'ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೇರಿದರೆ, ಉತ್ತಮ ಆಸ್ಪತ್ರೆಗಳು, ಅತ್ಯುತ್ತಮ ಶಿಕ್ಷಣ ಸೇರಿದಂತೆ ಆರು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು. ಮೈತ್ರಿಕೂಟಕ್ಕೆ ಅವಕಾಶ ನೀಡಿದರೆ, ಶ್ರೇಷ್ಠ ಭಾರತ ನಿರ್ಮಾಣ ಮಾಡಲಾಗುವುದು' ಎಂದು ಅರವಿಂದ ಕೇಜ್ರಿವಾಲ್‌ ಬರೆದ ಸಂದೇಶವನ್ನು ಇದೇ ವೇಳೆ ಓದಿದರು.

ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಎಎಪಿ ನಾಯಕರೂ ಆಗಿರುವ ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್‌, ಎನ್‌ಸಿಪಿ (ಶರದ್‌ಚಂದ್ರ ಪವಾರ್‌) ಪಕ್ಷದ ನಾಯಕ ಶರದ್‌ ಪವಾರ್‌, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್‌ ಠಾಕ್ರೆ, ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌, ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹಾಗೂ ಜಾರ್ಖಂಡ್‌ ಮುಖ್ಯಮಂತ್ರಿ ಚಂಪೈ ಸೊರೇನ್‌ ಸೇರಿದಂತೆ ಹಲವರು ರ್‍ಯಾಲಿಯಲ್ಲಿ ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.