ಭುವನೇಶ್ವರ( ಒಡಿಶಾ): ಮುಂಬರುವ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಡಿ ಪಕ್ಷದ ವರಿಷ್ಠ ಹಾಗೂ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಬಹಿರಂಗ ಪತ್ರ ಬರೆಯುವ ಮೂಲಕ ಒಡಿಶಾ ಜನರನ್ನು ಭಾವನಾತ್ಮಕವಾಗಿ ಬ್ಲ್ಯಾಕ್ಮೇಲ್ ಮಾಡಲು ಪ್ರಯತ್ನಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ರಾಜ್ಯದ ಜನತೆ ಇನ್ನೂ 10 ವರ್ಷಗಳ ಕಾಲ ಬಿಜೆಡಿ ಪಕ್ಷವನ್ನು ಆಯ್ಕೆ ಮಾಡುವಂತೆ ಬಹಿರಂಗ ಪತ್ರ ಬರೆದಿರುವ ನವೀನ್ ಪಟ್ನಾಯಕ್ ವಿರುದ್ಧ ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ (ಒಪಿಸಿಸಿ) ಅಧ್ಯಕ್ಷ ಶರತ್ ಪಟ್ಟನಾಯಕ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಡಿ ಸರ್ಕಾರ ತನ್ನ 24 ವರ್ಷಗಳ ಆಡಳಿತದಲ್ಲಿ ರೈತರ ಆದಾಯವನ್ನು ಹೆಚ್ಚಿಸುವಲ್ಲಿ ವಿಫಲವಾಗಿದೆ. ರಾಜ್ಯದ ರೈತರ ಆದಾಯವು ತಿಂಗಳಿಗೆ ₹5 ಸಾವಿರಕ್ಕಿಂತಲೂ ಕಡಿಮೆಯಾಗಿದೆ. ಹೊರಗಿನವರು ಪ್ರಮುಖ ಟೆಂಡರ್ಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಈ ಮೂಲಕ ಒಡಿಶಾದ ಕೋಟ್ಯಂತರ ರೂಪಾಯಿ ಲೂಟಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಬಹುಕೋಟಿ ಗಣಿ ಹಗರಣ ಹಾಗೂ ಚಿಟ್ ಫಂಡ್ ಹಗರಣ ಸೇರಿದಂತೆ ಭ್ರಷ್ಟಾಚಾರದಲ್ಲಿ ಬಿಜೆಡಿ ಮುಳುಗಿದೆ. ರಾಜ್ಯ ಸರ್ಕಾರವನ್ನು ಕೇಂದ್ರದ ಬಿಜೆಪಿ ಸರ್ಕಾರ ರಕ್ಷಿಸುತ್ತಿದೆ. ಈ ಕಾರಣದಿಂದಲೇ ಯಾವುದೇ ಸಿಬಿಐ, ಇಡಿ ದಾಳಿಗಳ ಭಯವಿಲ್ಲ ಎಂದು ಶರತ್ ಪಟ್ಟನಾಯಕ್ ಹೇಳಿದ್ದಾರೆ.
ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಹಿರಿಯ ಬಿಜೆಡಿ ನಾಯಕ ಸುಧೀರ್ ಸಮಾಲ್, ಒಡಿಶಾದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಆಗಿರುವ ಅಭಿವೃದ್ಧಿ ಕೆಲಸ ಹಾಗೂ ಬಿಜೆಡಿ ಸರ್ಕಾರ ಮಾಡಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಜನರಿಗೆ ಅರಿವಿದೆ. ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಾಜ್ಯದ ಜನರನ್ನು ತಮ್ಮ ಕುಟುಂಬದ ಸದಸ್ಯರಂತೆ ಪರಿಗಣಿಸಿದ್ದಾರೆ ಹಾಗೂ ಸಮಾಜದ ಎಲ್ಲಾ ವರ್ಗದವರನ್ನು ಒಂದೇ ರೀತಿ ಕಾಣುತ್ತಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.