ಬೆಂಗಳೂರು: ಗುಲ್ಬರ್ಗ ಮೀಸಲು ಕ್ಷೇತ್ರದಿಂದ ಮಾಜಿ ಸಚಿವ ರೇವೂನಾಯಕ ಬೆಳಮಗಿ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ತೀರ್ಮಾನಿಸಿದೆ. ಗುರುವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಮುಖಂಡರಾದ ಕೆ.ಎಸ್.ಈಶ್ವರಪ್ಪ ಜತೆಗೂ ಬೆಳಮಗಿ ಮಾತುಕತೆ ನಡೆಸಿ, ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಉತ್ತರ ಕನ್ನಡ ಕ್ಷೇತ್ರದಿಂದ ಹಾಲಿ ಸದಸ್ಯ ಅನಂತಕುಮಾರ ಹೆಗಡೆ, ಚಿತ್ರದುರ್ಗ ಕ್ಷೇತ್ರದಿಂದ ಹಾಲಿ ಸದಸ್ಯ ಜನಾರ್ದನ ಸ್ವಾಮಿ ಅವರಿಗೇ ಟಿಕೆಟ್ ನೀಡಲು ತೀರ್ಮಾನಿಸಲಾಗಿದೆ.
ಉಡುಪಿ– ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಲು ಶಾಸಕ ಸಿ.ಟಿ.ರವಿ ವಿರೋಧ ವ್ಯಕ್ತಪಡಿಸಿದರು ಎನ್ನುವ ಕಾರಣಕ್ಕೆ ಅದು ನೆನೆಗುದಿಗೆ ಬಿದ್ದಿದೆ. ಇದೇ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿಯಲ್ಲಿನ ಕೆಲವು ಆರ್ಎಸ್ಎಸ್ ನಾಯಕರು ಪತ್ರಕರ್ತ ಪ್ರತಾಪ್ ಸಿಂಹ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.
ಇದಕ್ಕೆ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಡಿ.ಎನ್.ಜೀವರಾಜ್ ಮತ್ತು ಸಿ.ಟಿ.ರವಿ ವಿರೋಧ ವ್ಯಕ್ತಪಡಿಸಿದರು ಎನ್ನಲಾಗಿದೆ. ‘ಚುನಾವಣೆ ಘೋಷಣೆಯಾದ ನಂತರ ಹೊಸಬರನ್ನು ಕಣಕ್ಕೆ ಇಳಿಸುವುದು ಬೇಡ. ಅದರ ಬದಲು ಶೋಭಾ ಅವರಿಗೇ ಟಿಕೆಟ್ ಕೊಡಬೇಕು’ ಎಂದು ಜೀವರಾಜ್ ಸಲಹೆ ಮಾಡಿದರು ಎಂದು ಗೊತ್ತಾಗಿದೆ.
ಸಿ.ಟಿ.ರವಿ ಕೂಡ ‘ಪ್ರತಾಪ್ ಅವರಿಗಿಂತ ಶೋಭಾ ಅವರೇ ಉತ್ತಮ’ ಎಂದು ತಮ್ಮ ಅಭಿಪ್ರಾಯ ತಿಳಿಸಿದರು ಎನ್ನಲಾಗಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಗುರುವಾರ ಕೂಡ ಜೀವರಾಜ್ ಜತೆ ಮಾತುಕತೆ ನಡೆಸಿದ ಮುಖಂಡರು, ಪ್ರತಾಪ್ ಸಿಂಹ ಅವರ ಹೆಸರನ್ನೇ ಪ್ರಸ್ತಾಪಿಸಿದರು ಎಂದು ಗೊತ್ತಾಗಿದೆ.
‘ಎಲ್ಲರೂ ಸೇರಿ ಕೆಲಸ ಮಾಡಿದರೆ ಪ್ರತಾಪ್ ಗೆಲ್ಲಬಹುದು’ ಎನ್ನುವ ಅಭಿಪ್ರಾಯವನ್ನು ಮುಖಂಡರು ವ್ಯಕ್ತಪಡಿಸಿದರು ಎನ್ನಲಾಗಿದೆ.
ಮೈಸೂರು ಕ್ಷೇತ್ರದಿಂದ ಸ್ಪರ್ಧಿಸುವುದಕ್ಕೂ ಶೋಭಾ ಹಿಂದೇಟು ಹಾಕಿದ್ದು, ಹೊಸ ಅಭ್ಯರ್ಥಿಗಾಗಿ ಹುಡುಕಾಟ ನಡೆದಿದೆ.
ಕಾಂಗ್ರೆಸ್ ಅಭ್ಯರ್ಥಿಯಾದ ಎಚ್.ವಿಶ್ವನಾಥ್ ಕುರುಬ ಸಮುದಾಯಕ್ಕೆ ಸೇರಿದವರು. ಹೀಗಾಗಿ ಬಿಜೆಪಿಯಿಂದ ಅದೇ ಸಮುದಾಯಕ್ಕೆ ಸೇರಿದ ಸಿ.ಎಚ್.ವಿಜಯಶಂಕರ್ ಅವರನ್ನು ಕಣಕ್ಕೆ ಇಳಿಸುವುದು ಸರಿಯಲ್ಲ ಎನ್ನುವ ಭಾವನೆ ಪಕ್ಷದ ಮುಖಂಡರಲ್ಲಿದೆ. ಹೀಗಾಗಿ ಶಾಸಕ ಅಪ್ಪಚ್ಚು ರಂಜನ್ ಸೇರಿದಂತೆ ಇತರ ಕೆಲವರ ಹೆಸರುಗಳು ಕೇಳಿಬರುತ್ತಿವೆ ಎಂದು ಮೂಲಗಳು ತಿಳಿಸಿವೆ.
ಬೀದರ್, ಬಳ್ಳಾರಿ, ತುಮಕೂರು, ಕೋಲಾರ, ಮಂಡ್ಯ ಮತ್ತು ಹಾಸನ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲು ಇನ್ನೂ ಸಾಧ್ಯವಾಗಿಲ್ಲ. ಎರಡನೇ ಹಂತದಲ್ಲಿ ಈ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.