ADVERTISEMENT

ಸಿ.ಎಂ, ಪರಮೇಶ್ವರ್‌ ದೆಹಲಿಗೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2014, 15:30 IST
Last Updated 7 ಮಾರ್ಚ್ 2014, 15:30 IST

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಪಕ್ಷದ ವರಿಷ್ಠರು ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ದೆಹಲಿಗೆ ಆಹ್ವಾನಿಸಿದ್ದಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಕೃಷ್ಣ ಬೈರೇಗೌಡ ಅವರ ಮೇಲೆ ಹಲವು ರಾಜ್ಯ ಕಾಂಗ್ರೆಸ್‌ ಮುಖಂಡರು ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

ನವದೆಹಲಿಯಲ್ಲಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದ­ರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಅವರು ಸಹ ಶುಕ್ರ­ವಾರ ಬೆಳಿಗ್ಗೆ ದೆಹಲಿಗೆ ತೆರಳಲಿ­ದ್ದಾರೆ. ಬಹುತೇಕ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳುವ ನಿರೀಕ್ಷೆ ಇದೆ.

ಈಗಾಗಲೇ ಪರಿಶೀಲನಾ ಸಮಿತಿ ಹಾಲಿ ಒಂಬತ್ತು ಸಂಸತ್‌ ಸದಸ್ಯರನ್ನು ಕಣಕ್ಕಿಳಿಸಲು ಅನುಮೋದನೆ ನೀಡಿದೆ. ಆದರೆ, ಉತ್ತರ ಕನ್ನಡ, ಶಿವಮೊಗ್ಗ, ಚಿತ್ರ­ದುರ್ಗ, ಬೆಂಗಳೂರು ಉತ್ತರ, ಬೆಂಗ­ಳೂರು ಕೇಂದ್ರ ಸೇರಿದಂತೆ ಕೆಲ ಕ್ಷೇತ್ರ­ಗ­ಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ.
ಉತ್ತರ ಕನ್ನಡ ಕ್ಷೇತ್ರದಲ್ಲಿ ಸ್ಪರ್ಧಿಸಲು ನಿವೇದಿತ್‌ ಆಳ್ವಾ, ಪ್ರಶಾಂತ್‌ ದೇಶ­ಪಾಂಡೆ ಹಾಗೂ  ಬಿ.ಕೆ. ಹರಿಪ್ರಸಾದ್‌ ಮುಂಚೂಣಿಯಲ್ಲಿದ್ದಾರೆ. ಈ ಮೂವ­ರಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎನ್ನುವ ಚಿಂತೆ ವರಿಷ್ಠರನ್ನು ಕಾಡುತ್ತಿದೆ.

ಶಿವಮೊಗ್ಗ ಕ್ಷೇತ್ರದಲ್ಲಿ ವಿಧಾನಸಭೆ ಸ್ಪೀಕರ್‌ ಕಾಗೋಡು ತಿಮ್ಮಪ್ಪ ಮತ್ತು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ ಅವರು ಸ್ಪರ್ಧಿಸಲು ನಿರಾಕರಿಸಿರುವುದರಿಂದ ಆಯ್ಕೆಗಳು ಕಡಿಮೆ ಉಳಿದಿವೆ. ಜೆಡಿಎಸ್‌ ಬಂಗಾರಪ್ಪ ಅವರ ಕುಟುಂಬದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಕಾಂಗ್ರೆಸ್‌ ಕುಮಾರ್‌ ಬಂಗಾರಪ್ಪ ಅವರನ್ನು ಕಣ­ಕ್ಕಿ­ಳಿ­­ಸುವುದು ಅನುಮಾನ ಎನ್ನಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.