ADVERTISEMENT

ಕೋಮು ಸಂಘರ್ಷಕ್ಕೆ ಸಂಚು ಆರೋಪ: ಪ್ರಧಾನಿ ಮೋದಿ ವಿರುದ್ಧ ಚುನಾವಣಾಧಿಕಾರಿಗೆ ದೂರು

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2024, 23:18 IST
Last Updated 22 ಏಪ್ರಿಲ್ 2024, 23:18 IST
<div class="paragraphs"><p>‍ಪ್ರಧಾನಿ ನರೇಂದ್ರ ಮೋದಿ</p></div>

‍ಪ್ರಧಾನಿ ನರೇಂದ್ರ ಮೋದಿ

   

(ಪಿಟಿಐ ಚಿತ್ರ)

ತೀರ್ಥಹಳ್ಳಿ: ಪ್ರಧಾನಿ ನರೇಂದ್ರ ಮೋದಿ ಕೋಮು ಸಂಘರ್ಷದ ಸಂಚು ರೂಪಿಸುತ್ತಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ ಅವರು ಪ್ರಧಾನಿ ವಿರುದ್ಧ ತಾಲ್ಲೂಕು ಸಹಾಯಕ ಚುನಾವಣಾಧಿಕಾರಿ ಹಾಗೂ ಪೊಲೀಸ್‌ ಉಪ ಅಧೀಕ್ಷಕರಿಗೆ ಸೋಮವಾರ ದೂರು ನೀಡಿದ್ದಾರೆ.

ADVERTISEMENT

‘ಕಾಂಗ್ರೆಸ್‌ ಪಕ್ಷ ಗೆದ್ದರೆ ನಿಮ್ಮ ಮಂಗಳಸೂತ್ರವನ್ನು ಕಿತ್ತು ಮುಸ್ಲಿಮರಿಗೆ ಕೊಡುತ್ತದೆ’ ಎಂದು ರಾಜಸ್ಥಾನದಲ್ಲಿ ಭಾನುವಾರ ನಡೆದ  ಚುನಾವಣಾ ಪ್ರಚಾರ ಸಭೆಯಲ್ಲಿ ಮೋದಿ ಹೇಳಿದ್ದಾರೆ. ಈ ಮೂಲಕ ಅವರು ದೇಶದಲ್ಲಿ ಕೋಮುದ್ವೇಷ ಹರಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ಇಂತಹ ಪ್ರಚೋದನಕಾರಿ ಹೇಳಿಕೆ ಚುನಾವಣಾ ನೀತಿ ಸಂಹಿತೆಗೆ ವಿರುದ್ಧವಾಗಿದೆ. ಹಿಂದೂ ಮಹಿಳೆಯರ ಭಾವನೆಯನ್ನು  ಕೆರಳಿಸಿ ಧರ್ಮಗಳ ನಡುವೆ ದ್ವೇಷ ಹರಡುವ ಪಿತೂರಿಯಾಗಿದೆ. ಇದು ರಾಜ್ಯ, ದೇಶದ ಶಾಂತಿ, ಸುವ್ಯವಸ್ಥೆ ಮೇಲೆ ನೇರವಾಗಿ ಪರಿಣಾಮ ಬೀರುವ ಸಾಧ್ಯತೆ ಇದೆ. ದ್ವೇಷ ಹರಡಿ ಮತಗಳಿಸುವ ವ್ಯವಸ್ಥಿತ ಒಳಸಂಚಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಧಾನಿಯವರ ಗೌಪ್ಯ ಪ್ರಮಾಣವಚನ ಮತ್ತು ಸಂಸತ್‌ ಸದಸ್ಯರ ಪ್ರಮಾಣವಚನಕ್ಕೆ ಮೋದಿ ಅವರ ಹೇಳಿಕೆ ತದ್ವಿರುದ್ಧವಾಗಿದೆ. ಭಾರತೀಯ ದಂಡ ಸಂಹಿತೆಯ ಅನ್ವಯ ಈ ಹೇಳಿಕೆ ಅಪರಾಧ ಹಾಗೂ ಸಂವಿಧಾನ ವಿರೋಧಿ ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.