ADVERTISEMENT

ಟಿಕೆಟ್ ತಪ್ಪಿಸಿದವರ ಬಗ್ಗೆ ಮಾತು ಬೇಡ: ಕೆ.ಎಚ್‌. ಮುನಿಯಪ್ಪ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2024, 16:07 IST
Last Updated 30 ಮಾರ್ಚ್ 2024, 16:07 IST
ಸಚಿವ ಕೆ.ಎಚ್‌. ಮುನಿಯಪ್ಪ
ಸಚಿವ ಕೆ.ಎಚ್‌. ಮುನಿಯಪ್ಪ   

ಬೆಂಗಳೂರು: ‘ನಮ್ಮಲ್ಲಿ ಒಮ್ಮತ ಮೂಡದ ಕಾರಣ ಅನಿವಾರ್ಯವಾಗಿ ಬೇರೆಯವರಿಗೆ (ಕೆ.ವಿ.ಗೌತಮ್​) ಟಿಕೆಟ್ ಕೊಟ್ಟಿದ್ದಾರೆ. ನಮಗೆ ಟಿಕೆಟ್ ತಪ್ಪಿಸಿದವರ ಬಗ್ಗೆ ಮಾತನಾಡುವುದು ಬೇಡ’ ಎಂದು ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನನ್ನ ಅಳಿಯನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಯಾವುದೇ ರೀತಿಯ ಬೇಸರವಿಲ್ಲ. ಪಕ್ಷದ ನಿರ್ಧಾರಕ್ಕೆ ಬದ್ಧನೆಂದು ನಾನು ಮೊದಲಿನಿಂದಲೂ ಹೇಳುತ್ತಿದ್ದೇನೆ’ ಎಂದರು.

‘ನಾವೆಲ್ಲರೂ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ಕೆಲಸ ಮಾಡಬೇಕು. ಆದ್ದರಿಂದ, ಅವರೂ (ರಮೇಶ್‌ ಕುಮಾರ್‌ ಬಣ) ಕೆಲಸ ಮಾಡಲಿ, ನಾನು ಕೆಲಸ ಮಾಡುತ್ತೇನೆ. ಅಂತಿಮವಾಗಿ ಕಾಂಗ್ರೆಸ್​ ಗೆಲ್ಲಬೇಕಲ್ಲವೇ? ಪ್ರಾಮಾಣಿಕ ಕೆಲಸ ಮಾಡುತ್ತೇನೆ’ ಎಂದರು.

ADVERTISEMENT

‘ವರಿಷ್ಠರು ನನ್ನನ್ನು ಕರೆದು ಮಾತನಾಡಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಸಂತೋಷದಿಂದ ಕೆಲಸ ಮಾಡುತ್ತೇನೆ. ನಾನೂ ಕೇಂದ್ರದಲ್ಲಿ ಕೆಲಸ ಮಾಡಿದ್ದೇನೆ. ಸ್ವಪ್ರತಿಷ್ಠೆಗಳು ಏನೂ ಇಲ್ಲ. ಈ ರೀತಿಯ ಘಟನೆಗಳು ನನಗೆ 2–3 ಬಾರಿ ಆಗಿದೆ. ನಾನು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲವೆಂದು ಮೊದಲೇ ಹೇಳಿದ್ದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.