ADVERTISEMENT

ಮೋದಿ ಪ್ರಚಾರ ಮಂತ್ರಿ: ಅಖಿಲೇಶ್ ಯಾದವ್ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 6 ಮೇ 2023, 13:56 IST
Last Updated 6 ಮೇ 2023, 13:56 IST
ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್‌ ಯಾದವ್‌
ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್‌ ಯಾದವ್‌   

ಚಿತ್ರದುರ್ಗ: 'ನರೇಂದ್ರ ಮೋದಿ ಅವರು ದೇಶದ ಪ್ರಧಾನ ಮಂತ್ರಿಯಾಗಿ ಉಳಿದಿಲ್ಲ, ಅವರೊಬ್ಬ ಪ್ರಚಾರ ಮಂತ್ರಿ' ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್‌ ಯಾದವ್‌ ವ್ಯಂಗ್ಯವಾಡಿದರು.

‘ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಮಂತ್ರಿ ಮಂಡಲ ಚುನಾವಣೆ ನಡೆಯುವ ರಾಜ್ಯದಲ್ಲಿ ಬೀಡುಬಿಡುತ್ತದೆ. ಕೆಲಸ ಮಾಡುವುದನ್ನು ಬಿಟ್ಟು ಚುನಾವಣಾ ಪ್ರಚಾರದಲ್ಲಿ ತೊಡಗುತ್ತದೆ. ಕರ್ನಾಟಕದ ಜನರು ಇದನ್ನು ಗಮನಿಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ಪ್ರಚಾರದ ಅಬ್ಬರ ಇನ್ನೂ ಜೋರಾಗಿತ್ತು’ ಎಂದು ಹೇಳಿದರು.

ದೇಶದಲ್ಲಿ ಬಿಜೆಪಿ ನಾಯಕರಿಗೆ ಭಾರಿ ಭದ್ರತೆ ಸಿಗುತ್ತಿದೆ. ಉಳಿದ ಪಕ್ಷದ ನಾಯಕರನ್ನು ಕಡೆಗಣಿಸಲಾಗುತ್ತಿದೆ. ಭದ್ರತೆ ವಿಚಾರದಲ್ಲಿನ ಈ ತಾರತಮ್ಯ ಸರಿಯಲ್ಲ.
ಅಖಿಲೇಶ್‌ ಯಾದವ್‌, ಸಮಾಜವಾದಿ ಪಕ್ಷದ ಅಧ್ಯಕ್ಷ

‘ಉಗ್ರರ ಸರಣಿ ದಾಳಿಗೆ ಕಾಶ್ಮೀರ ತತ್ತರಿಸಿದೆ. ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಛತೀಸ್‌ಗಡದಲ್ಲಿ ನಕ್ಸಲರು ಅಟ್ಟಹಾಸ ಮೆರೆಯುತ್ತಿದ್ದಾರೆ. ದೇಶದ ಎಲ್ಲೆಡೆ ಆತಂದ ವಾತಾವರಣ ಸೃಷ್ಟಿಯಾಗಿದೆ. ದೇಶ ಸುರಕ್ಷಿತವಾಗಿಲ್ಲ ಎಂಬುದಕ್ಕೆ ಇವು ನಿದರ್ಶನಗಳಾಗಿವೆ. ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರದಲ್ಲಿ ಮಗ್ನರಾಗಿದ್ದಾರೆ’ ಎಂದು ಕುಟುಕಿದರು.

ADVERTISEMENT

‘ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಕರ್ನಾಟಕದಲ್ಲಿ ಮಿತಿ ಮೀರಿದ ಭ್ರಷ್ಟಾಚಾರ ನಡೆದಿದೆ. ಅಧಿಕಾರಿಗಳ ವರ್ಗಾವಣೆ, ಅಭಿವೃದ್ಧಿ ಕಾಮಗಾರಿ, ಉದ್ಯೋಗ ನೀಡುವಲ್ಲಿಯೂ ಭ್ರಷ್ಟಾಚಾರ ನಡೆದಿದೆ. ಈ ಗಂಭೀರ ಸ್ವರೂಪದ ಆರೋಪಕ್ಕೆ ಬಿಜೆಪಿ ಉತ್ತರಿಸಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.