ADVERTISEMENT

ಮತಯಾಚನೆ ಜಟಾಪಟಿ; ಕಾಂಗ್ರೆಸ್ ಅಭ್ಯರ್ಥಿ ಕುಸುಮಾರನ್ನು ತಳ್ಳಾಡಿ ಲಾಠಿ ಬೀಸಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 6 ಮೇ 2023, 14:49 IST
Last Updated 6 ಮೇ 2023, 14:49 IST
ಪೊಲೀಸರ ಲಾಠಿ ಪ್ರಹಾರ
ಪೊಲೀಸರ ಲಾಠಿ ಪ್ರಹಾರ   

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮತಯಾಚನೆ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಶನಿವಾರ ಸಂಜೆ ಜಟಾಪಟಿ ನಡೆದಿದ್ದು, ಅದನ್ನು ಪ್ರಶ್ನಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಎಚ್. ಕುಸುಮಾ ಅವರನ್ನು ತಳ್ಳಾಡಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

‘ಯಶವಂತಪುರ ಠಾಣೆ ವ್ಯಾಪ್ತಿಯ ಮನೆಗಳಿಗೆ ಪ್ರಚಾರ ಮಾಡಲೆಂದು ಕಾಂಗ್ರೆಸ್ ಕಾರ್ಯಕರ್ತರು ಹೋಗಿದ್ದರು. ಮಾಜಿ ಕಾರ್ಪೊರೇಟರ್ ಆಗಿರುವ ಬಿಜೆಪಿಯ ಜಿ.ಕೆ. ವೆಂಕಟೇಶ್‌ ಹಾಗೂ ಇತರರು ಪ್ರಚಾರಕ್ಕೆ ಅಡ್ಡಿಪಡಿಸಿದ್ದರು. ಅದೇ ವಿಚಾರವಾಗಿ ಎರಡು ಗುಂಪಿನ ನಡುವೆ ಗಲಾಟೆ ಶುರುವಾಗಿತ್ತು’ ಎಂದು ಮೂಲಗಳು ಹೇಳಿವೆ.

‘ಸ್ಥಳಕ್ಕೆ ಬಂದ ಪೊಲೀಸರ ಎದುರೇ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಪೊಲೀಸರು ಹಲ್ಲೆ ತಡೆದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ ಕುಸುಮಾ, ಸ್ಥಳಕ್ಕೆ ಬಂದು ಪೊಲೀಸರನ್ನು ಪ್ರಶ್ನಿಸಿದರು. ಸ್ಥಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

ADVERTISEMENT

ಇದೇ ಸಂದರ್ಭದಲ್ಲಿ ಪೊಲೀಸರು, ಜನರನ್ನು ಚದುರಿಸಲು ಲಾಠಿ ಬೀಸಲಾರಂಭಿಸಿದರು. ರಸ್ತೆಯಲ್ಲಿ ನಿಂತಿದ್ದ ಕುಸುಮಾ ಅವರನ್ನು ಪೊಲೀಸ್ ಅಧಿಕಾರಿಯೊಬ್ಬರು ತಳ್ಳಾಡಿದರು. ನಂತರ, ಕಾರ್ಯಕರ್ತರ ಮೇಲೆ ಲಾಠಿ ಬೀಸಿ ಸ್ಥಳದಿಂದ ಕಳುಹಿಸಿದರು. ನಂತರ, ಕುಸುಮಾ ನೇತೃತ್ವದ ನಿಯೋಗ ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು ನೀಡಲು ಯಶವಂತಪುರ ಠಾಣೆಗೆ ಬಂದಿದೆ.

‘ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಮಹಿಳೆ. ಸ್ಥಳದಲ್ಲಿ ಯಾವುದೇ ಮಹಿಳಾ ಪೊಲೀಸ್ ಸಿಬ್ಬಂದಿ ಇರಲಿಲ್ಲ. ಇಂಥ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ, ಕುಸುಮಾ ಜೊತೆ ಅನುಚಿತವಾಗಿ ನಡೆದುಕೊಂಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.