ಶಿವಮೊಗ್ಗ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಪರ ಪ್ರಚಾರ ಕೈಗೊಳ್ಳಲು ಮೇ 2ರಂದು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ನಗರದ ಅಲ್ಲಮಪ್ರಭು ಮೈದಾನದಲ್ಲಿ ಅಂದು ಮಧ್ಯಾಹ್ನ 12ರಿಂದ 1.30ರವರಗೆ ನಡೆಯುವ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕೂಡ ಬರಲಿದ್ದು, ಬೃಹತ್ ಸಮಾವೇಶ ನಡೆಯಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಏ.29ರಿಂದ 2 ದಿನ ಕನ್ನಡ ಚಲನಚಿತ್ರರಂಗದ ಹಲವು ನಟ–ನಟಿಯರು ಪ್ರಚಾರದಲ್ಲಿ ಪಾಲ್ಗೊಳ್ಳಲು ಸ್ವಯಂ ಪ್ರೇರಿತರಾಗಿ ಬರುತ್ತಿದ್ದಾರೆ. ನಟ ದುನಿಯಾ ವಿಜಯ್, ಡಾಲಿ ಧನಂಜಯ್, ಧ್ರುವ ಸರ್ಜಾ, ವಿಜಯ ರಾಘವೇಂದ್ರ, ‘ನೆನಪಿರಲಿ’ ಪ್ರೇಮ್, ಚಿಕ್ಕಣ್ಣ, ಚಂದನ್ ಶೆಟ್ಟಿ, ಅತುಲ್, ನಿಶ್ಚಿಕಾ ನಾಯ್ಡು ಪ್ರಚಾರ ಮಾಡಲಿದ್ದಾರೆ. ಭದ್ರಾವತಿ, ಬೈಂದೂರು ಸೇರಿದಂತೆ ಹಲವೆಡೆ ರೋಡ್ ಶೋ ನಡೆಸಲಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.