ADVERTISEMENT

LS polls: ಮಂಗಳೂರು, ಬೆಂಗಳೂರಿಗೆ ಮೋದಿ 14ಕ್ಕೆ

ಏ.10, 11 ರಾಜ್ಯದ 58 ಸಾವಿರ ಬೂತ್‌ಗಳಲ್ಲಿ ಸಭೆ: ಸುನಿಲ್‌ ಕುಮಾರ್

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2024, 23:30 IST
Last Updated 8 ಏಪ್ರಿಲ್ 2024, 23:30 IST
ನರೇಂದ್ರ ಮೋದಿ  
ನರೇಂದ್ರ ಮೋದಿ     

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಏ.14ರಂದು ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಚುನಾವಣಾ ಸಂಚಾಲಕ ಸುನಿಲ್‌ ಕುಮಾರ್ ಹೇಳಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದ್ದಾರೆ. ಎರಡನೇ ಹಂತದಲ್ಲಿ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಏ.14ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರು ನಗರ ಹೊರವಲಯದ ಗೋಲ್ಡ್‌ಫಿಂಚ್ ಸಿಟಿಯಲ್ಲಿ ನಡೆಯುವ ಬಹಿರಂಗ ಸಭೆಯಲ್ಲಿ ಭಾಗಿಯಾಗುವರು. ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ನಂತರ ಸಂಜೆ 5.30ಕ್ಕೆ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿ ಅಭ್ಯರ್ಥಿ ಪರ ಪ್ರಚಾರ ನಡೆಸುವರು’ ಎಂದರು.

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಅಶ್ವತ್ಥ ನಗರ ವೃತ್ತದಿಂದ ರ್‍ಯಾಲಿ ಪ್ರಾರಂಭವಾಗಲಿದ್ದು, ಗೆದ್ದಲಹಳ್ಳಿ ವೃತ್ತ, ರಾಧಾಕೃಷ್ಣ ದೇವಸ್ಥಾನ, ವೈಭವ್ ಥಿಯೇಟರ್, ನಾಗಶೆಟ್ಟಿಹಳ್ಳಿ ಜಂಕ್ಷನ್, ರಿಂಗ್ ರೋಡ್ ಜಂಕ್ಷನ್, ಕೋಟೆ ಮುತ್ತುರಾಯಸ್ವಾಮಿ ದೇವಾಲಯದ ಬಳಿ ಒಟ್ಟು 6.4 ಕಿ.ಮೀ ಅಂತರದ ರ್‍ಯಾಲಿ ಕೊನೆಗೊಳ್ಳಲಿದೆ ಎಂದು ಹೇಳಿದರು.

ADVERTISEMENT

ಮನೆ–ಮನೆ ಪ್ರಚಾರ: ಏ.10 ಮತ್ತು 11ರಂದು ಏಕಕಾಲದಲ್ಲಿ ರಾಜ್ಯದ ಎಲ್ಲ 58 ಸಾವಿರ ಬೂತ್‌ಗಳಲ್ಲಿ ಬೂತ್ ಸಮಿತಿ ಸಭೆ ಹಮ್ಮಿಕೊಳ್ಳಲಾಗಿದೆ. ಮನೆ–ಮನೆ ಪ್ರಚಾರಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು, ಏ.15,16 ಮತ್ತು 17ರಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಂದ ಎಲ್ಲ ಹಂತದ ಪದಾಧಿಕಾರಿಗಳು, ಕಾರ್ಯಕರ್ತರು, ಮನೆ–ಮನೆ ಭೇಟಿ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಈ ಬಾರಿ ಚುನಾವಣೆಯ ಮೂರು ಮುಖ್ಯ ಅಂಶಗಳಾದ ಸುರಕ್ಷಿತ ಭಾರತ, ಸಾಂಸ್ಕೃತಿಕ ಭಾರತ, ವಿಕಸಿತ ಭಾರತದ ಪರಿಕಲ್ಪನೆಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.