ADVERTISEMENT

ಸಿದ್ದರಾಮಯ್ಯಗೆ ಸ್ವಕ್ಷೇತ್ರದ ಜನರಿಂದ ತಿರಸ್ಕಾರದ ಭಯ ಕಾಡುತ್ತಿದೆ: ಆರ್‌.ಅಶೋಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಏಪ್ರಿಲ್ 2024, 7:47 IST
Last Updated 2 ಏಪ್ರಿಲ್ 2024, 7:47 IST
ಆರ್‌.ಅಶೋಕ
ಆರ್‌.ಅಶೋಕ   

ಬೆಂಗಳೂರು: 2018ರಲ್ಲಿ ಸೋಲಿನ ಭಯದಿಂದ ತಮ್ಮ ಸ್ವಕ್ಷೇತ್ರ ವರುಣಾದಿಂದ ಬಾದಾಮಿಗೆ ಪಲಾಯನ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಈಗ ಮತ್ತೊಮ್ಮೆ ಸ್ವಕ್ಷೇತ್ರದ ಜನರಿಂದ ತಿರಸ್ಕಾರದ ಭಯ ಕಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ ಟೀಕಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, 'ಗ್ಯಾರಂಟಿಗಳು ಜನರಿಗೆ ತೃಪ್ತಿ ತಂದಿಲ್ಲ. ಬಿಟ್ಟಿ ಭಾಗ್ಯಗಳು ತಮ್ಮ ಕೈ ಹಿಡಿಯುವುದಿಲ್ಲ ಎಂದು ಗ್ಯಾರಂಟಿ ಆಗುತ್ತಿದ್ದಂತೆ ಸಿದ್ದರಾಮಯ್ಯನವರು ವರುಣಾದಲ್ಲಿ ಹೆಚ್ಚಿನ ಲೀಡ್ ಕೊಟ್ಟು ಕುರ್ಚಿ ಉಳಿಸುವಂತೆ ಜನರ ಬಳಿ ಅಂಗಲಾಚುತ್ತಿದ್ದಾರೆ' ಎಂದು ಲೇವಡಿ ಮಾಡಿದ್ದಾರೆ.

'ತವರು ಕ್ಷೇತ್ರ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೀನಾಯ ಸೋಲಾದರೆ ಕುರ್ಚಿ ಬಿಟ್ಟು ಇಳಿಯಬೇಕಾತ್ತದೆ ಎಂದು ಸಿಕ್ಕಸಿಕ್ಕ ಸಣ್ಣ ಪುಟ್ಟ ವಿಪಕ್ಷಗಳ ಮುಖಂಡರನ್ನೆಲ್ಲ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡು ಕನಿಷ್ಠ ಪಕ್ಷ ಠೇವಣಿ ಉಳಿಸಿಕೊಳ್ಳಬೇಕು, ಸೋಲಿನ ಅಂತರವಾದರೂ ಕಡಿಮೆ ಮಾಡಿಕೊಳ್ಳಬೇಕು ಎಂದು ಸಿದ್ದರಾಮಯ್ಯನವರು ಮೂರು ದಿನ ಮೈಸೂರಿನಲ್ಲೇ ಠಿಕಾಣಿ ಹೂಡಿದ್ದಾರೆ' ಎಂದು ದೂರಿದರು.

ADVERTISEMENT

ಸಿಎಂ ಸಿದ್ದರಾಮಯ್ಯನವರೇ? ನಿನ್ನೆ ತಮ್ಮ ಬುರುಡೆ ಭಾಷಣ ಕೇಳಲು ಆಸಕ್ತಿ ಇಲ್ಲದೆ ಜಾಗ ಖಾಲಿ ಮಾಡಿದ ವರುಣಾದ ಜನರ ನಡೆ ನೋಡಿದ ಮೇಲೆ ಜನರ ಮನಸ್ಸಿನಲ್ಲಿ ಕೆಲವು ಪ್ರಶ್ನೆಗಳು ಮೂಡುತ್ತಿವೆ.

1. ನಿಮ್ಮ ಗ್ಯಾರಂಟಿಗಳು ಜನರನ್ನು ತಲುಪಿದೆ ಎನ್ನುವ ವಿಶ್ವಾಸವಿಲ್ಲವೇ?.

2.ಮೈಸೂರಿನಲ್ಲಿ ಹೀನಾಯವಾಗಿ ಸೋಲಿಸಿ ನಿಮ್ಮನ್ನ ಕುರ್ಚಿಯಿಂದ ಇಳಿಸಬೇಕು ಎನ್ನುವ ಹುನ್ನಾರದಿಂದ ಸ್ವಪಕ್ಷದವರೇ ಒಳೇಟು ನೀಡುವ ಭಯ ಕಾಡುತ್ತಿದೆಯೇ?.

3. ವರುಣಾದಲ್ಲಿ 60,000 ಲೀಡ್ ಬರದಿದ್ದರೆ ಕುರ್ಚಿಯಿಂದ ಇಳಿಯಬೇಕು ಎಂದು ಹೈಕಮಾಂಡ್ ಈಗಾಗಲೇ ಫರ್ಮಾನು ಹೊರಡಿಸಿದೆಯೇ?.

ಕರ್ನಾಟಕದ ಜನತೆ ತಮ್ಮ ಉತ್ತರಕ್ಕಾಗಿ ಕಾಯುತ್ತಿದ್ದಾರೆ ಎಂದು ಆರ್‌. ಅಶೋಕ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.