ಹಾಸನ: ಸ್ವಚ್ಛ, ಪ್ರಾಮಾಣಿಕ ಹಾಗೂ ಜನಪರ ರಾಜಕಾರಣಕ್ಕಾಗಿ ‘ಕರ್ನಾಟಕ ರಾಷ್ಟ್ರ ಸಮಿತಿ’ ಎಂಬ ನೂತನ ಪ್ರಾದೇಶಿಕ ಪಕ್ಷವನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಸಮಿತಿ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಹೇಳಿದರು.
ರಾಜ್ಯದಲ್ಲಿ ಅನೀತಿ, ಅನ್ಯಾಯ ಹಾಗೂ ದುರಾಡಳಿತ ಹೆಚ್ಚುತ್ತಿವೆ. ಭ್ರಷ್ಟಾಚಾರ, ಕುಟುಂಬ ರಾಜಕಾರಣ ಮತ್ತು ಸ್ವಜನ ಪಕ್ಷಪಾತ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅನೀತಿಯ ರಾಜಕಾರಣ ನಡೆಸುತ್ತಿದ್ದು, ಈ ಮೂರು ಪಕ್ಷಗಳಿಗೆ ಪರ್ಯಾಯವಾಗಿ ರಾಷ್ಟ್ರ ಸಮಿತಿ ಅಸ್ತಿತ್ವಕ್ಕೆ ಬಂದಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಜಿಲ್ಲೆಯಲ್ಲಿ ಇಂದು ಕುಟುಂಬ ರಾಜಕಾರಣ ನಡೆಯುತ್ತಿದೆ. ವೈಯಕ್ತಿಕ ಮೌಲ್ಯಗಳ ಬಗ್ಗೆ ಹೆಮ್ಮೆ ಪಡುವ ಪಕ್ಷ ಅನಿವಾರ್ಯತೆ ಇದೆ. ಸಮಾಜದಲ್ಲಿ ಪ್ರಾಮಾಣಿಕ ನಾಯಕತ್ವ ವ್ಯಕ್ತಪಡಿಸಲು ನಮ್ಮ ಪಕ್ಷದಲ್ಲಿ ಅವಕಾಶವಿದೆ’ ಎಂದು ವಿವರಿಸಿದರು.
ಪಕ್ಷದ ನೋಂದಣಿ ಪ್ರಕಿಯೆ ಅಂತಿಮ ಹಂತದಲ್ಲಿದೆ. ರಾಜ್ಯವ್ಯಾಪಿ ಪಕ್ಷ ಸಂಘಟಿಸುವ ಕೆಲಸಗಳು ನಿರಂತರವಾಗಿ ನಡೆಯುತ್ತಿವೆ. ಹಲವು ಜಿಲ್ಲೆಗಳಲ್ಲಿ ಸಮಿತಿ ಹಾಗೂ ಘಟಕಗಳನ್ನು ರಚಿಸಲಾಗಿದೆ. ರಾಜ್ಯದಲ್ಲಿ ಹಾಸನ, ಮಂಡ್ಯ, ಮಂಗಳೂರು, ತುಮಕೂರು, ದಕ್ಷಿಣ ಕನ್ನಡ ಹಾಗೂ ಬೆಳಗಾವಿ ಸೇರಿದಂತೆ ಒಟ್ಟು 12 ಕ್ಷೇತ್ರಗಳಲ್ಲಿ ಪಕ್ಷದ ವತಿಯಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ನಂತರದ ದಿನಗಳಲ್ಲಿ ವಿಧಾನಸಭಾ ಚುನಾವಣೆ, ನಗರಸಭೆ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಚಿಂತಿಸಲಾಗಿದೆ. ಅಲ್ಲದೇ, ಕುಂದಗೋಳ ಹಾಗೂ ಚಿಂಚೋಳಿ ಕ್ಷೇತ್ರದ ಉಪ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಸ್ಪರ್ಧಿಸುವರು ಎಂದು ನುಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.