ನವದೆಹಲಿ:ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಸೋಮವಾರ ಬೆಳಿಗ್ಗೆ 7 ಗಂಟೆಗೆ ಆರಂಭವಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಗ್ರೆನೇಡ್ ದಾಳಿ ನಡೆದಿದೆ.
ಅನಂತ್ನಾಗ್ ಕ್ಷೇತ್ರದ ರಾಹ್ಮೂ ಎಂಬಲ್ಲಿ ಮತಗಟ್ಟೆಯನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಅದೃಷ್ಟವಶಾತ್, ಯಾರಿಗೂ ಹಾನಿಯಾಗಿಲ್ಲ. ಈ ಬಾರಿ ಲೋಕಸಭೆ ಚುನಾವಣೆ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ದಾಳಿ ಇದಾಗಿದೆ.
ಉತ್ತರ ಪ್ರದೇಶದ ರಾಯ್ಬರೇಲಿ, ಅಮೇಠಿ ಕ್ಷೇತ್ರಗಳ ಕೆಲವು ಮತಗಟ್ಟೆಗಳಲ್ಲಿ ಮತಯಂತ್ರದಲ್ಲಿ ದೋಷ ಕಂಡುಬಂದ ಬಗ್ಗೆ ವರದಿಯಾಗಿದೆ.
ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ:ಪಶ್ಚಿಮ ಬಂಗಾಳದ ಬೈರಕ್ಪುರ ಬಿಜೆಪಿ ಅಭ್ಯರ್ಥಿ ಅರ್ಜುನ್ ಸಿಂಗ್ ಮೇಲೆ ಹಲ್ಲೆ ಮತದಾನ ಮಾಡಿದ ಬಳಿಕ ನಡೆದಿದೆ. ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರೇ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ‘ತೃಣಮೂಲ ಕಾಂಗ್ರೆಸ್ ಗೂಂಡಾಗಳೇ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅವರು ನಮ್ಮ ಮತದಾರರನ್ನು ಓಡಿಸುತ್ತಿದ್ದಾರೆ’ ಎಂದು ಅರ್ಜುನ್ ಆರೋಪಿಸಿದ್ದಾರೆ.
ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ರಾಜಸ್ಥಾನ, ಜಾರ್ಖಂಡ್ ಮತ್ತು ಜಮ್ಮು–ಕಾಶ್ಮೀರದ51 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಸಚಿವೆ ಸ್ಮೃತಿ ಇರಾನಿ ಭವಿಷ್ಯ ಇಂದು ಮತಯಂತ್ರ ಸೇರಲಿದೆ.
ಗಣ್ಯರಿಂದ ಮತದಾನ: ಕೇಂದ್ರಗೃಹ ಸಚಿವ ರಾಜನಾಥ್ ಸಿಂಗ್, ಸಚಿವೆ ಸ್ಮೃತಿ ಇರಾನಿ, ರಾಜ್ಯವರ್ಧನ್ಸಿಂಗ್ ರಾಥೋಢ್, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಸೇರಿದಂತೆ ಹಲವು ಗಣ್ಯರು ಬೆಳಿಗ್ಗೆಯೇ ಮತದಾನ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.