ಗದಗ: ‘ಮತದಾರರು ತಪ್ಪದೇ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು. ಜಿಲ್ಲೆಯ ಎಲ್ಲ ಆಶಾ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯಲ್ಲಿರುವ ಮತದಾರರಿಗೆ ಮತದಾನ ಮಾಡುವಂತೆ ಪ್ರೇರೇಪಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.
ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಆಶಾ ಕಾರ್ಯಕರ್ತೆಯರಿಗೆ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಮತದಾನ ಪ್ರಮಾಣ ಹೆಚ್ಚಿಸಲು ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಸ್ವೀಪ್ ಸಮಿತಿಯಿಂದ ಜಿಲ್ಲೆಯಾದ್ಯಂತ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮತಗಟ್ಟೆಯಲ್ಲಿ ಮತಯಂತ್ರ ಪ್ರಾತ್ಯಕ್ಷಿಕೆಕಾರ್ಯಕ್ರಮ ಏರ್ಪಡಿಸಲಾಗಿದೆ. ಎಲ್ಲ ಆಶಾ ಕಾರ್ಯಕರ್ತೆಯರು ಹಾಗೂ ತಮ್ಮ ಕುಟುಂಬದ ಸದಸ್ಯರು ಸೇರಿದಂತೆ ತಾವು ಕಾರ್ಯನಿರ್ವಹಿಸುವ ಪ್ರದೇಶದಲ್ಲಿರುವ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಸಿಇಒ, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಮಂಜುನಾಥ ಚವ್ಹಾಣ ಹೇಳಿದರು.
ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಟಿ.ದಿನೇಶ್ ಅವರು, ಆಶಾ ಕಾರ್ಯಕರ್ತೆಯರು ಮತದಾರ ಜಾಗೃತಿ ಕುರಿತು ನಿರ್ವಹಿಸಬೇಕಾದ ಕಾರ್ಯಗಳ ಕುರಿತು ಮಾಹಿತಿ ನೀಡಿದರು.
ಮತಯಂತ್ರದ ಪ್ರಾತ್ಯಕ್ಷಿಕೆ ಹಾಗೂ ಕಿರುಚಿತ್ರ ಪ್ರದರ್ಶಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೀರೂಪಾಕ್ಷರೆಡ್ಡಿ, ಎಸ್.ಮಾದಿನೂರ, ಆರ್.ಸಿ.ಎಚ್. ಅಧಿಕಾರಿ ಡಾ.ಎಸ್.ಎಂ. ಹೊನಕೇರಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.