ADVERTISEMENT

ಜಿಲ್ಲೆಯ ಸಮಸ್ಯೆ ಮೋದಿ ಬಂದು ಪರಿಹರಿಸುತ್ತಾರ?: ಪ್ರಮೋದ್ ಮಧ್ವರಾಜ್ ಪ್ರಶ್ನೆ

ಚಿಕ್ಕಮಗಳೂರಿನ ಉಪ್ಪಳ್ಳಿಯ ಬಹಿರಂಗ ಸಭೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2019, 14:49 IST
Last Updated 9 ಏಪ್ರಿಲ್ 2019, 14:49 IST
ಚಿಕ್ಕಮಗಳೂರಿನ ಉಪ್ಪಳ್ಳಿಯಲ್ಲಿ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್‌ ಮತಯಾಚಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ವಿ.ಗಾಯತ್ರಿ ಶಾಂತೇಗೌಡ ಇದ್ದಾರೆ.
ಚಿಕ್ಕಮಗಳೂರಿನ ಉಪ್ಪಳ್ಳಿಯಲ್ಲಿ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್‌ ಮತಯಾಚಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ವಿ.ಗಾಯತ್ರಿ ಶಾಂತೇಗೌಡ ಇದ್ದಾರೆ.   

ಚಿಕ್ಕಮಗಳೂರು: ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಪ್ರಧಾನಿ ನರೇಂದ್ರ ಮೋದಿ ಪರವಾಗಿ ಮತಯಾಚಿಸುತ್ತಿದ್ದಾರೆ. ಜಿಲ್ಲೆಯ ಜನರ ಸಮಸ್ಯೆಗಳನ್ನು ಮೋದಿ ಬಂದು ಪರಿಹರಿಸುತ್ತಾರ?ಅವರನ್ನು ಟಿವಿಯಲ್ಲಷ್ಟೆ ನೋಡಬೇಕು ಎಂದು ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಟೀಕಿಸಿದರು.

ಕಾಂಗ್ರೆಸ್, ಜೆಡಿಎಸ್, ಸಿಪಿಐ ವತಿಯಿಂದ ನಗರದ ಉಪ್ಪಳ್ಳಿಯಲ್ಲಿ ಮಂಗಳವಾರ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಜಿಲ್ಲೆಯ ಜನರ ಫೋನ್ ಕರೆಯನ್ನು ಸ್ವೀಕರಿಸುತ್ತಾರ? ಸಾಮಾನ್ಯ ಜನರು ಅವರನ್ನು ಭೇಟಿ ಮಾಡಲು ಸಾಧ್ಯವಾಗುತ್ತದೆಯೇ? ಶೋಭಾ ಕರಂದ್ಲಾಜೆ ಅವರು ಐದು ವರ್ಷದ ಅವಧಿಯಲ್ಲಿ ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಕ್ಷೇತ್ರದ ಹಳ್ಳಿಗಳಿಗೆ ಬೇಟಿ ನೀಡಿಲ್ಲ, ಸಮಸ್ಯೆ ಆಲಿಸಿಲ್ಲ. ಕುಡಿಯುವ ನೀರಿನ ಬವಣೆ ನಿವಾರಣೆಗೆ ಕ್ರಮ ವಹಿಸಿಲ್ಲ ಎಂದು ದೂರಿದರು.

ADVERTISEMENT

ಕಸ್ತೂರಿ ರಂಗನ್ ವರದಿ ಅನುಷ್ಠಾನವಾದರೆ ಜಿಲ್ಲೆಯ ಅರ್ಧ ಭಾಗ ಅಭಿವೃದ್ಧಿಯಿಂದ ವಂಚಿತವಾಗಲಿದೆ. ಕೊಳವೆಬಾವಿ ಕೊರೆಯುವಂತಿಲ್ಲ, ವಸತಿ, ರಸ್ತೆ, ಚರಂಡಿ ನಿರ್ಮಿಸುವಂತಿಲ್ಲ. ಈ ಬಗ್ಗೆ ಸಂಸತ್ತಿನಲ್ಲಿ ಶೋಭಾ ಕರಂದ್ಲಾಜೆ ಧ್ವನಿ ಎತ್ತಿಲ್ಲ. ವರದಿ ಜಾರಿ ಬಗ್ಗೆ ಕೇಂದ್ರ ಸರ್ಕಾರ ಏರ್ಪಡಿಸಿದ್ದ ಸಂಸದರ ಸಭೆಗೆ ಅವರು ಗೈರಾಗುವ ಮೂಲಕ ಬೇಜವಾಬ್ದಾರಿತನ ತೋರಿದ್ದಾರೆ. ಅದರ ಪರಿಣಾಮವಾಗಿ ಕಸ್ತೂರಿ ರಂಗನ್ ವರದಿ ಈಗ ಅನುಷ್ಠಾನವಾಗುವ ಹಂತ ತಲುಪಿದೆ. ಜನರು ಅದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

‘ಕಸ್ತೂರಿ ರಂಗನ್ ವರದಿ ಜನರ ಅಭಿವೃದ್ಧಿಗೆ ಮಾರಕವಾಗಲಿದೆ ಎನ್ನುವುದನ್ನು ಈ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೆವು. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದಿದ್ದರು. ವರದಿ ತಿರಸ್ಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು’ಎಂದರು.

ಜಿಲ್ಲೆಯಲ್ಲಿ ಅರಣ್ಯ ಒತ್ತುವರಿ ಸಮಸ್ಯೆ ಇದೆ. ಆದಿವಾಸಿಗಳು ತಲತಲಾಂತರದಿಂದ ಅರಣ್ಯದಲ್ಲಿ ವಸತಿ ನಿರ್ಮಿಸಿಕೊಂಡು, ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದರೆ ಅವರನ್ನು ಒಕ್ಕಲೆಬ್ಬಿಸುವಂತೆ ಸುಪ್ರೀ ಕೋರ್ಟ್ ಆದೇಶ ನೀಡಿದೆ. ಆ ಬಡ ಜನರ ಪರವಾಗಿ ಶೋಭಾ ಕರಂದ್ಲಾಜೆ ಹೋರಾಟ ನಡೆಸಿಲ್ಲ. ಉತ್ತಮ ವಕೀಲರನ್ನು ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲಿಲ್ಲ ಎಂದು ಆರೋಪಿಸಿದರು.

ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ.ಮಹಮದ್ ಮಾತನಾಡಿ, ಶೋಭಾ ಕರಂದ್ಲಾಜೆ ಅವರು ಜಿಲ್ಲೆಯ ಸರ್ಕಾರಿ ಕಾರ್ಯಕ್ರಮಗಳಿಗೆ, ಪತ್ರಿಕಾಗೋಷ್ಠಿಗೆ ಸೀಮಿತವಾಗಿದ್ದರು. ಕ್ಷೇತ್ರ ನಿರ್ಲಕ್ಷಸಿದ್ದರು. ಮಡಿಕೇರಿ, ಮಂಗಳೂರು, ಕೊಡಗು ಒಳಗೊಂಡಂತೆ ರಾಜ್ಯದಲ್ಲಿ ಭಾವನಾತ್ಮಕ ವಿಚಾರಗಳ ಕೆರಳಿಸುವಲ್ಲಿ ನಿರತರಾಗಿದ್ದರು ಎಂದು ಆಪಾದಿಸಿದರು.

ಬೀಕನಹಳ್ಳಿ, ಕುರವಂಗಿ, ಅಲ್ಲಂಪುರ, ಮಲ್ಲೇನಹಳ್ಳಿಯಲ್ಲಿ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪ್ರಚಾರ ನಡೆಸಿದರು.

ಮುಖಂಡರಾದ ಎ.ಎನ್.ಮಹೇಶ್, ಎಚ್.ಪಿ.ಮಂಜೇಗೌಡ, ಶಿವಕುಮಾರ್, ರೂಬೆನ್ ಮೊಸೆಸ್, ರಘು, ಎಂ.ಡಿ.ರಮೇಶ್, ಜಯರಾಜ್ ಅರಸ್, ಎಂ.ಸಿ.ಶಿವಾನಂದಸ್ವಾಮಿ, ಹೊಲದಗದ್ದೆ ಗಿರೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.